ದೀಪಾವಳಿ ಹಬ್ಬದ ನಿಮಿತ್ತ ಜೆಪಿ ನಗರದ ತಮ್ಮ ನಿವಾಸಕ್ಕೆ ವಿದ್ಯುತ್ ದೀಪಗಳ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕೊಡಲಾಗಿದೆ ಎಂಬ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಸೋಮವಾರ ನಾನು ಬಿಡದಿಯ ತೋಟದಲ್ಲಿದ್ದೆ. ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ರಾಜ್ಯ ಕಾಂಗ್ರೆಸ್ ಪಕ್ಷ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ ಎಂದು ಅವರು ಟೀಕಿಸಿದ್ದಾರೆ.
ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದು ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದ್ದಾರೆ.
ದೇಶ ಲೂಟಿ ಮಾಡಿಲ್ಲ:
ಬಳಿಕ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಅಂತಹ ದೊಡ್ಡ ಅಪರಾಧವನ್ನೇನೂ ನಾನು ಮಾಡಿಲ್ಲ. ದೇಶ ಲೂಟಿ ಮಾಡಿಲ್ಲ. ಈ ಬಗ್ಗೆ ಮಾತನಾಡುತ್ತಿರುವವರು ಏನೇನು ಕೆಲಸ ಮಾಡಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತು ಎಂದರು.
ತೋಟದಿಂದ ಬಂದಾಗ ಮಾಹಿತಿ ಬಂತು. ಕೂಡಲೇ ಕಂಬದಿಂದ ಸಂಪರ್ಕ ತೆರವು ಮಾಡಿಸಿದ್ದೇನೆ. ಮನೆಯಲ್ಲಿ ನಡೆಯೋ ಪ್ರತಿ ಮಾಹಿತಿ ನನಗೆ ಇರುತ್ತಾ? ಹಬ್ಹದ ದಿನ ಸಂಪರ್ಕ ತೆಗೆದುಕೊಂಡಿದ್ದಾರೆ. ಕಂಬದಿಂದ ಕರೆಂಟ್ ತೆಗೆದುಕೊಳ್ಳಿ ಎಂದು ನಾನು ಹೇಳಿದ್ದೇನಾ? ೨೦೦೦ ರೂಪಾಯಿಗೆ ಕರೆಂಟ್ ಕದೀಬೇಕಾ ನಾನು. ಭಾನುವಾರ ಹಾಗು ಸೋಮವಾರ ಎರಡು ದಿನ ದೀಪಾಲಂಕಾರ ಮಾಡಿದ್ದಾರೆ. ನಮ್ಮ ಹುಡುಗರ ಕಡೆಯಿಂದ ತಪ್ಪಾಗಿದೆ. ಅದಕ್ಕೆ ನಾನು ವಿಷಾದಿಸಿದ್ದೇನೆ. ಕಾಂಗ್ರೇಸ್ ಗೆ ಬೇರೆ ಕೆಲಸ ಇಲ್ಲ. ಅವರ ದೊಡ್ಡ ದೊಡ್ಡ ಹಗರಣಗಳು ಬಯಲಿಗೆ ತರಲು ಅವರಿಗೆ ಧೈರ್ಯ ಇಲ್ಲ ಎಂದು ಹೇಳಿದರು ಕುಮಾರಸ್ವಾಮಿ ಅವರು.

ಬೆಸ್ಕಾಂ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ನೊಟೀಸ್ ಕೊಡಿ, ದಂಡ ಕಟ್ಟುತ್ತೇನೆ ಎಂದು ಅವರಿಗೆ ತಿಳಿಸಿದ್ದೇನೆ. ಕಾಂಗ್ರೆಸ್ ನವರು ರಾಜ್ಯ ಬೆಳಗಿಸಿರೋದನ್ನು ನಾನು ನೋಡಿದ್ದೀನೆ. ದಾರಿದ್ರ್ಯ ಬಂದಿರೋದು ಕಾಂಗ್ರೇಸ್ ನಾಯಕರಿಗೆ. ನಾನೇನು ಸತ್ಯ ಹರಿಶ್ಚಂದ್ರನಲ್ಲ. ನಾನು ತಪ್ಪು ಮಾಡಿದ್ದರೆ ಒಪ್ಪಿಕೊಳ್ತೀನಿ. ಗಾಂಧಿ, ನೆಹರು ಅವರು ಈಗ ಇದ್ದಿದ್ದರೂ ಅವರನ್ನೂ ಈ ಕಾಂಗ್ರೆಸ್ಸಿಗರು ಬದುಕಲು ಬಿಡ್ತಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು ಮಾಜಿ ಮುಖ್ಯಮಂತ್ರಿಗಳು.






