ನಾಡಪ್ರಭು ಶ್ರೀ ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು. ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣವಾಗಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ರಸ್ತೆಗುಂಡಿಗಳು ಸಾವಿನ ಗುಂಡಿಗಳಾಗಿವೆ. ನಗರದ ಲುಲೂ ಮಾಲ್ ಎದುರಿನ ರಸ್ತೆಯಲ್ಲಿ ಗುಂಡಿಗೆ ಇನ್ನೊಂದು ಜೀವ ಬಲಿಯಾಗಿದ ಮೇಲೆ ಎಚ್ಚೆತ್ತುಕೊಳ್ಳುವ ನಾಟಕ ನಡೆದಿದೆ. ಶಾಶ್ವತ ಪರಿಹಾರ ಎಲ್ಲಿ? ಬೆಂಗಳೂರಿನಲ್ಲಿ ಕೊಲೆಪಾತಕ ಗುಂಡಿಕೂಪಗಳು ಸರಣಿ ಸಾವುಗಳಿಗೆ ಕಾರಣವಾಗಿದ್ದರೆ, ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷವಾಗಿವೆ ಎಂದು ಆರೋಪಿಸಿದ್ದಾರೆ.
ರಾಜ್ಯ ಬಿಜೆಪಿ ಸರಕಾರಕ್ಕೆ ರಸ್ತೆ ಗುಂಡಿಗಳು ಎಂದರೆ ಬಲು ಇಷ್ಟ. ಗುಂಡಿಗಳು ಬಿದ್ದಷ್ಟೂ ಕಿಸೆಗೆ ಹರಿದು ಬರಲಿದೆ ದುಡ್ಡು. ಇವರಿಗೆ ಹೈಕೋರ್ಟ್ ಛೀಮಾರಿ ಹಾಕಿದರೂ ನಾಚಿಕೆ, ಸಂಕೋಚ ಎನ್ನವುದಿಲ್ಲ. ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ಕೊಟ್ಟರೂ ಅಧಿಕಾರಿಗಳು ಭಂಡತನ ಬಿಡುತ್ತಿಲ್ಲ.
ಗುಂಡಿ ಬಿದ್ದ ರಸ್ತೆಗಳು ರಾಜ್ಯದ ಗೌರವವನ್ನು ಮೂರಾಬಟ್ಟೆ ಮಾಡುತ್ತಿರುವುದು ಒಂದೆಡೆ, ಇನ್ನೊಂದೆಡೆ ಸರಕಾರ ಜಾಗತಿಕ ಹೂಡಿಕೆದಾರರ ಸಮಾವೇಶ, ಜಾಗತಿಕ ತಂತ್ರಜ್ಞಾನ ಶೃಂಗ ನಡೆಸುತ್ತಿದೆ. ‘ ರಸ್ತೆ ಗುಂಡಿಗಳ ಶೃಂಗ’ (Potholes Summit) ವನ್ನೂ ನಡೆಸಿದರೆ ಇನ್ನೂ ಚೆನ್ನಾಗಿರುತ್ತದೆ! ಎಂದು ಲೇವಡಿಯಾಡಿದ್ದಾರೆ.
ರಸ್ತೆ ಗುಂಡಿಗಳ ಸರಣಿ ಸಾವುಗಳಿಗೆ ರಾಜ್ಯ ಬಿಜೆಪಿ ಸರಕಾರವೇ ನೇರ ಕಾರಣ. ಮುಗ್ಧ ಜನರು ಸಾವು ನೋವುಗಳಿಗೆ ಬಿಬಿಎಂಪಿಯೇ ಸಂಪೂರ್ಣ ಹೊಣೆ. ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳೇ ಇದಕ್ಕೆ ಉತ್ತರದಾಯಿಗಳು ಎಂದಿದ್ದಾರೆ.











