ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲು ಸಾಧ್ಯವೇ ಇಲ್ಲ. ನಮಗೆ ಕ್ರಾಸ್ ವೋಟಿಂಗ್ ಆತಂಕವೂ ಇಲ್ಲ, ಭಯವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಅಲ್ಲದೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ ನೀಡುವಂತೆ ಕೋರಿ ಜೆಡಿಎಸ್ ಶಾಸಕರಿಗೆ ಪತ್ರ ಬರೆದಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಹರಿಹಾಯ್ದಿದ್ದಾರೆ.
ಸಿದ್ದರಾಮಯ್ಯನವರು ನನ್ನ ಒಂದು ಕಣ್ಣು ಹೋದರೂ ಪರವಾಗಿಲ್ಲ, ಜೆಡಿಎಸ್ ಪಕ್ಷದ ಎರಡೂ ಕಣ್ಣು ಹೋಗಲಿ ಎನ್ನುವಂತಹವರು ಕೇವಲ ಬಿಜೆಪಿ ಗೆಲ್ಲಲು ಅನುಕೂಲ ಮಾಡುತ್ತಿದ್ದಾರೆ. ರಾಜ್ಯಸಭೆ ಚುನಾವಣೆ ಬಂದ ಮೇಲೆ ಬಿಜೆಪಿ ಬಿ ಟೀಮ್ ಯಾವುದು ಎನ್ನುವುದು ಅರ್ಥ ಆಗುತ್ತದೆ ಎಂದು ಕಿಡಿಕಾರಿದ್ದಾರೆ.

ನಮ್ಮ ಪಕ್ಷದ 32 ಶಾಸಕರು ನಮ್ಮ ಜತೆಯಲ್ಲೇ ಇದ್ದಾರೆ. ಮುಂದಿನ ಚುನಾವಣೆ ಬರುವವರೆಗೆ ನಮ್ಮ ಶಾಸಕರು ನಮ್ಮ ಜತೆಯೇ ಇರುತ್ತೇವೆಂದು ಹೇಳಿದ್ದಾರೆ. ಬೇರೆ ಪಕ್ಷದವರು ನನ್ನ ಸಂಪರ್ಕದಲ್ಲಿ ಯಾರು ಇಲ್ಲ. ನನ್ನ ಆತ್ಮೀಯರಾದ ಕೆಲ ಕಾಂಗ್ರೆಸ್ ಶಾಸಕರಿಗೆ ನಮಗೆ ಎರಡನೇ ಪ್ರಾಶಸ್ತ್ಯದ ಮತ ನೀಡಲು ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
ಸುರ್ಜೆವಾಲ ಜತೆ ಮಾತನಾಡಿದ್ದು ನಿಜ:
ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಜತೆ ನಾನು ದೂರವಾಣಿಯಲ್ಲಿ ಮಾತಾಡಿದ್ದು ಸತ್ಯ. ಜೆಡಿಎಸ್ ಎರಡನೇ ಪ್ರಾಶಸ್ತ್ಯ ಮತ ಕಾಂಗ್ರೆಸ್ ಅಭ್ಯರ್ಥಿಗೆ ಕೊಡಿ ಎಂದು ಮನವಿ ಮಾಡಿಕೊಂಡರು. ನಾವು ಎರಡನೇ ಪ್ರಾಶಸ್ತ್ರ ಮತ ಕೊಟ್ಟರೂ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲ್ಲ. ಹೀಗಾಗಿ ನಮ್ಮ ಅಭ್ಯರ್ಥಿಗೆ ನಿಮ್ಮ ಎರಡನೇ ಪ್ರಾಶಸ್ತ್ರ ಮತ ಕೊಡಿ ಎಂದು ಮನವಿ ಮಾಡಿಕೊಂಡಿದ್ದೇನೆ. ಅವರು ಏನು ಮಾಡ್ತಾರೆ ನೋಡೋಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿ ಜತೆ ಚೌಕಾಸಿ ಮಾಡಿದ್ದ ಸಿದ್ದರಾಮಯ್ಯ:
ಒಂದು ಕಾಲದಲ್ಲಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಟವೆಲ್ ಹಾಕಿದ್ದರು. ಆತ್ಮಸಾಕ್ಷಿ ಇದ್ದರೆ ಸತ್ಯ ಹೇಳಲಿ ಈಗ. ಕಾಂಗ್ರೆಸ್ ಪಕ್ಷದಲ್ಲಿ ತಮಗೆ ಅಧಿಕಾರ ಸಿಗಲ್ಲ ಎಂದು ಬಿಜೆಪಿ ಸೇರುವುದಕ್ಕೆ ಎಲ್.ಕೆ.ಅಡ್ವಾಣಿ ಅವರೊಂದಿಗೆ ಚೌಕಾಸಿ ಮಾಡಿದ್ದರು. ಅದು ಸುಳ್ಳು ಎಂದು ಸಿದ್ದರಾಮಯ್ಯ ಹೇಳಲಿ ನೋಡೋಣ ಎಂದು ಕುಮಾರಸ್ವಾಮಿ ಅವರು ಸವಾಲು ಹಾಕಿದರು.
2009ರಲ್ಲೇ ಸಿದ್ದರಾಮಯ್ಯ ಆ್ಯಂಡ್ ಟೀಂ ಬಿಜೆಪಿ ಸೇರಲು ಪ್ರಯತ್ನ ಮಾಡಿದ್ದರು. ಎಲ್್ .ಕೆ. ಅಡ್ವಾಣಿ ಬಳಿ ಚರ್ಚೆ ಮಾಡಿದ್ದರು. ಇದು ಗೊತ್ತಿಲ್ವಾ ಸಿದ್ದರಾಮಯ್ಯನವರೇ? ಎಂದು ಪೃಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ನಾಮಾಕವಸ್ತೆಗೆ ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಿದ್ದಾರೆ. ಅವರ ಮಾತು ಏನು ನಡೆಯಲ್ಲ. ಕಾಂಗ್ರೆಸ್ ಹೈಕಮಾಂಡ್ ಮಾತು ಕೂಡ ನಡೆಯಲ್ಲ. ಇಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಒಬ್ಬರೇ ಇದ್ದಾರೆ. ಅವರ ಮಾತೇ ಇಲ್ಲಿ ನಡೆಯುವುದು ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ 2023ಕ್ಕೆ ಕೊನೆ ಮೊಳೆ ಹೊಡೆದು ಸಿದ್ದರಾಮಯ್ಯ ಹೋಗ್ತಾರೆ ಎಂದು ಭವಿಷ್ಯವನ್ನ ನುಡಿದಿದ್ದಾರೆ. ನಿನ್ನೆ ರಾತ್ರಿ ನಾನು ಡಿ.ಕೆ. ಶಿವಕುಮಾರ್ ಜತೆ ದೂರವಾಣಿಯಲ್ಲಿ ಮಾತಾಡಿದ್ದು ಸತ್ಯ. ಇದರಲ್ಲಿ ಕದ್ದು ಮುಚ್ಚಿ ಇಡೋದು ಏನಿದೆ? ಎಂದು ಪ್ರಶ್ನಿಸಿದ್ದಾರೆ.






