ನವದೆಹಲಿ:
ಅಮೆರಿಕ–ಇರಾನ್ ಸಂಘರ್ಷದಲ್ಲಿ ಕದನ ವಿರಾಮ ಘೋಷಣೆಗೊಂಡ ಬೆನ್ನಲ್ಲೇ ಭಾರತ ಸರ್ಕಾರ ತನ್ನ ಮೊದಲ ಪ್ರತಿಕ್ರಿಯೆ ನೀಡಿದ್ದು, ಈ ಕ್ರಮವನ್ನು ಸ್ವಾಗತಿಸಿದೆ. ಬುಧವಾರ (ಏಪ್ರಿಲ್ 8, 2026) ವಿದೇಶಾಂಗ ಸಚಿವಾಲಯ ಪ್ರಕಟಿಸಿದ ಹೇಳಿಕೆಯಲ್ಲಿ ಪಶ್ಚಿಮ ಏಷ್ಯಾದಲ್ಲಿ ಶಾಶ್ವತ ಶಾಂತಿ ನೆಲೆಸಲಿ ಎಂಬ ಆಶಯ ವ್ಯಕ್ತಪಡಿಸಲಾಗಿದೆ.ಕದನ ವಿರಾಮ ಘೋಷಣೆಯನ್ನು ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣ ‘ಟ್ರುತ್ ಸೋಶಿಯಲ್’ನಲ್ಲಿ ಪ್ರಕಟಿಸಿದ್ದರು. ಇದರ ಬೆನ್ನಲ್ಲೇ ಭಾರತ ತನ್ನ ಅಧಿಕೃತ ಪ್ರತಿಕ್ರಿಯೆ ನೀಡಿದೆ.

ಭಾರತವು ಆರಂಭದಿಂದಲೂ ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆಂದು ಒತ್ತಾಯಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಉದ್ವಿಗ್ನತೆಯನ್ನು ತಕ್ಷಣ ಕಡಿಮೆ ಮಾಡುವುದು ಮತ್ತು ಶಾಂತಿ ಸ್ಥಾಪನೆಗೆ ಮಾತುಕತೆ ಮುಖ್ಯವೆಂದು ಪುನರುಚ್ಚರಿಸಿದೆ.ಒಂದು ತಿಂಗಳಿಗೂ ಹೆಚ್ಚು ಕಾಲ ನಡೆದ ಸಂಘರ್ಷದಿಂದ ಉಂಟಾದ ಪರಿಣಾಮಗಳ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ.

ಇಂಧನ ಸರಬರಾಜು ಮತ್ತು ಜಾಗತಿಕ ವ್ಯಾಪಾರ ವ್ಯವಸ್ಥೆಗೆ ಅಡ್ಡಿಯುಂಟಾಗಿ ನಾಗರಿಕರಿಗೆ ತೊಂದರೆ ಉಂಟಾಗಿದೆ ಎಂದು ಹೇಳಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಇಂಧನ ಹರಿವು ಪುನಃ ಸಾಮಾನ್ಯವಾಗಲಿದೆ ಎಂಬ ನಿರೀಕ್ಷೆ ವ್ಯಕ್ತಪಡಿಸಲಾಗಿದೆ.

ಇನ್ನೊಂದೆಡೆ, ಕದನ ವಿರಾಮದ ಹಿನ್ನೆಲೆ ಇರಾನ್ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರಿಗೆ ತಕ್ಷಣ ದೇಶ ತೊರೆಯುವಂತೆ ಸೂಚಿಸಲಾಗಿದೆ. ಟೆಹ್ರಾನ್ನ ಭಾರತೀಯ ರಾಯಭಾರ ಕಚೇರಿ ನೀಡಿದ ಮಾರ್ಗಗಳನ್ನು ಮಾತ್ರ ಬಳಸುವಂತೆ ಸೂಚನೆ ನೀಡಲಾಗಿದೆ.

ರಾಯಭಾರ ಕಚೇರಿಯೊಂದಿಗೆ ಸಮನ್ವಯ ಸಾಧಿಸದೆ ಯಾವುದೇ ಅಂತರರಾಷ್ಟ್ರೀಯ ಗಡಿ ಪ್ರದೇಶಗಳಿಗೆ ತೆರಳಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ ತುರ್ತು ಪರಿಸ್ಥಿತಿಗೆ ಸಹಾಯವಾಣಿ ಸಂಖ್ಯೆಗಳನ್ನೂ ಪ್ರಕಟಿಸಲಾಗಿದೆ.






