ಆರ್ಟ್ ಆಫ್ ಲೀವಿಂಗ್ ಸಂಸ್ಥಾಪಕ ರವಿ ಶಂಕರ್ ವಿರುದ್ಧ ದಾಖಲಾಗಿದ್ದ ಭೂಕಬಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣವನ್ನು ರದ್ದುಗೊಳಿಸಿದೆ.ನ್ಯಾ. ಎಂ ನಾಗಪ್ರಸನ್ನ ಅವರ ಪೀಠ, ಸ್ಪಷ್ಟ ಆರೋಪಗಳಿಲ್ಲದೇ ಪ್ರಕರಣ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್ ದಾಖಲಿಸಿದ್ದ ದೂರು ಅಮಾನ್ಯಗೊಳಿಸಲಾಗಿದೆ.

ಈ ಪ್ರಕರಣವನ್ನು 2025ರ ಸೆಪ್ಟೆಂಬರ್ 19ರಂದು ಕರ್ನಾಟಕ ಭೂ ಆದಾಯ ಕಾಯ್ದೆ 1964ರಡಿ ಸ್ವಯಂಪ್ರೇರಿತವಾಗಿ ದಾಖಲಿಸಲಾಗಿತ್ತು. ಕಾಗ್ಗಲಿಪುರ ಗ್ರಾಮದ ವಿವಿಧ ಸರ್ವೇ ಸಂಖ್ಯೆಗಳಲ್ಲಿನ ಸರ್ಕಾರಿ ಭೂಮಿ, ಕೆರೆ ಹಾಗೂ ರಾಜಕಾಲುವೆ ಅಕ್ರಮವಾಗಿ ಕಬಳಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಪಿಐಎಲ್, ಲ್ಯಾಂಡ್ ಗ್ರಾಬಿಂಗ್ ವಿಶೇಷ ನ್ಯಾಯಾಲಯದ ವಿಚಾರಣೆ ಮತ್ತು ತಹಶೀಲ್ದಾರ್ ವರದಿ ಆಧಾರವಾಗಿ ಈ ದೂರು ದಾಖಲಿಸಲಾಗಿತ್ತು.

ಪ್ರಕರಣದ ವಿರುದ್ಧ ಹೈಕೋರ್ಟ್ಗೆ ಮೊರೆಹೋದ ರವಿಶಂಕರ್ ಗುರೂಜಿಯ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ, ದೂರಿನಲ್ಲಿ ಯಾವುದೇ ದೃಢವಾದ ಆರೋಪಗಳಿಲ್ಲವೆಂದು ಸ್ಪಷ್ಟಪಡಿಸಿದೆ. ಕೇವಲ ಪ್ರತಿವಾದಿಯಾಗಿ ಹೆಸರು ಸೇರಿಸಿರುವುದನ್ನು ಆಧಾರವನ್ನಾಗಿ ಮಾಡಿಕೊಂಡು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.ಪ್ರಾಥಮಿಕ ಸಾಕ್ಷ್ಯಗಳ ಕೊರತೆಯ ಹಿನ್ನೆಲೆಯಲ್ಲಿ ಪ್ರಕರಣ ಮುಂದುವರಿಸುವುದು ಸರಿಯಲ್ಲ ಎಂದು ಹೇಳಿರುವ ಹೈಕೋರ್ಟ್, ಅಂತಿಮವಾಗಿ ರವಿಶಂಕರ್ ಗುರೂಜಿ ವಿರುದ್ಧದ ಭೂಕಬಳಿಕೆ ಪ್ರಕರಣವನ್ನು ರದ್ದುಗೊಳಿಸಿದೆ.






