ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಹಾಗೂ ಓಮಿಕ್ರಾನ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟಿನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿತ್ತು. ಈ ಮಧ್ಯೆ ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ಮತ್ತೆ ಚಾಟಿ ಬೀಸಿದ್ದು ಎಸ್ಒಪಿಯನ್ನು (Standard Operating Procedure) ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಿದೆ.
ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಹಲವು ನಾಯಕರಲ್ಲಿ ಸೋಂಕು ಕಾಣಿಸಿಕೊಂಡಿದ್ದು ಹೀಗಾಗಿ ಪಾದಯಾತ್ರೆಯನ್ನು ನಿಲ್ಲಿಸುವಂತೆ ಕೋರ್ಟ್ ಸೂಚನೆಯನ್ನ ನೀಡಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೊರ್ಟ್ ನ ನ್ಯಾಯಾಧೀಶರಾದ ರಿತುರಾಜ್ ಅವಸ್ತಿ ಅವರಿದ್ದ ವಿಭಾಗೀಯ ಪೀಠ, ಸೋಂಕು ಹೆಚ್ಚು ಇರುವ ಸಮಯದಲ್ಲಿ ಯಾವುದೇ ತರಹದ ಸಭೆ-ಸಮಾರಂಭ, ಮೆರವಣಿಗೆ ಹಾಗೂ ಪ್ರತಿಭಟನೆಗಳಿಗೆ ಅವಕಾಶ ನೀಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಖಡಕ್ ಆಗಿ ಆದೇಶಿಸಿದೆ.