ಶಿವಮೊಗ್ಗ ಜಿಲ್ಲೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಹಿಂಸೆಯ ಸ್ವರೂಪ ಪಡೆದುಕೊಂಡಿದೆ. ಮಂಗಳವಾರ (ಫೆಬ್ರವರಿ 8) ಬೆಳಿಗ್ಗೆ ಶಿವಮೊಗ್ಗ ಜಿಲ್ಲೆಯ ಹಲವು ಕಾಲೇಜುಗಳು ವಿದ್ಯಾರ್ಥಿಗಳು ವಿವಾದದ ಪರ-ವಿರೋಧದ ಪ್ರತಿಭಟನೆ ಮಾಡಿದ್ದರು. ಪ್ರತಿಭಟನೆಯ ವೇಳೆ ಕಲ್ಲು ತೂರಾಟ ಮತ್ತು ಹಲ್ಲೆ ಘಟನೆಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ನಾಲ್ಕು ಪ್ರಕರಣಗಳನ್ನು ದಾಖಲಿಸಿದ್ದಾರೆ.
ಹೌದು, ಫೆಬ್ರವರಿ 8 ರಂದು ಶಿವಮೊಗ್ಗ ನಗರದಲ್ಲಿ ನಡೆದ ಹಿಜಾಬ್-ಕೇಸರಿ ಶಾಲು ವಿವಾದ ಪ್ರತಿಭಟನೆಯ ವೇಳೆ ಕಲ್ಲು ತೂರಾಟ ಮತ್ತು ಹಲ್ಲೆ ಘಟನೆಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ನಾಲ್ಕು ಪ್ರಕರಣಗಳನ್ನು ದಾಖಲಿಸಿದ್ದಾರೆ. ಪ್ರತಿಭಟನೆಯ ವೇಳೆ ನಾಲ್ವರು ಗಾಯಗೊಂಡಿದ್ದು, ಪೊಲೀಸ್ ವಾಹನಕ್ಕೆ ಹಾನಿಯಾಗಿದೆ.
ಪ್ರಕರಣ 1 – ಶಿವಮೊಗ್ಗದ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಗ್ಗೆ 10.30ರ ಸುಮಾರಿಗೆ ನಡೆದ ಕಲ್ಲು ತೂರಾಟದಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಕೋಟೆ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಅಕ್ರಮ ಸಭೆ ಮತ್ತು ಗಲಭೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣ 2 – ಬಸವನಗುಡಿಯಲ್ಲಿ ವಾಸವಾಗಿರುವ ಕಟ್ಟಡ ಕಾರ್ಮಿಕನೊಬ್ಬ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆಗೆ ವಾಪಸ್ಸಾಗುತ್ತಿದ್ದಾಗ ಕಾಲೇಜು ಬಳಿ 40 ಜನರ ಗುಂಪು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಪೊಲೀಸ್ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣ 3 – ಬಾಪೂಜಿ ನಗರದಲ್ಲಿ ನಡೆದ ಕಲ್ಲು ತೂರಾಟದಲ್ಲಿ ವಿನೋಬಾ ನಗರ ಪೊಲೀಸ್ ಠಾಣೆಗೆ ಸೇರಿದ ಪೊಲೀಸ್ ವಾಹನಕ್ಕೆ ಹಾನಿಯಾಗಿದೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಗಳು ವಾಹನದ ಮೇಲೆ ಕಲ್ಲು ಎಸೆದಿದ್ದಾರೆ. ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ 1984ರ ಜೊತೆಗೆ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
![](https://pratidhvani.com/wp-content/uploads/2022/02/hijab-controversy-protest-in-Shivamoggajfif.jpg)
ಪ್ರಕರಣ 4 – ಮತ್ತೊಂದು ಘಟನೆಯಲ್ಲಿ ಕೋಟೆ ಆಂಜನೇಯ ದೇವಸ್ಥಾನದ ರಸ್ತೆಯಲ್ಲಿ ಟಿಪ್ಪು ನಗರದ ನಿವಾಸಿಯೊಬ್ಬರನ್ನು ಜನರ ಗುಂಪೊಂದು ತಡೆದು ಹಲ್ಲೆ ನಡೆಸಿದೆ. ಆತನಿಗೆ ಗಾಯಗಳಾಗಿದ್ದು ಅವರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರನ 5 – ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಖಾಸಗಿ ಬಸ್ ಮೇಲೆ ಕಲ್ಲು ತೂರಿದ್ದಾರೆ. ಈ ಸಂಬಂಧ ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರತಿಭಟನೆಯ ಸ್ವರೂಪ ವಿಕೋಪಕ್ಕೆ ತಿರುಗಿದ ಕಾರಣ ಪರಿಸ್ಥಿತಿ ನಿಯಂತ್ರಿಸಲು ಶಿವಮೊಗ್ಗ ನಗರದಲ್ಲಿ ಎರಡು ದಿನಗಳ ಕಾಲ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ.