ಹಿಜಾಬ್ ವಿವಾದ ವಿಚಾರವಾಗಿ ಮಂಗಳವಾರ ಹೈಕೋರ್ಟ್ ವಿಚಾರಣೆ ನಡಿಸಿದ್ದು, ಬುಧವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುವುದನ್ನು ಖಂಡಿಸಿ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಹೊರಡಿಸಿರುವ ಆದೇಶ ಹಾಗೂ ಹಿಜಾಬ್ ಸುತ್ತಲಿನ ಎಲ್ಲ ರಿಟ್ ಅರ್ಜಿಗಳನ್ನು ಹೈಕೋರ್ಟ್ ಇಂದು ವಿಚಾರಣೆಗೆ ಕೈಗೆತ್ತಿಕೊಂಡಿತ್ತು.
ಬೆಳಗ್ಗೆ ಹಾಗೂ ಮಧ್ಯಾಹ್ನ ಹಿಜಾಬ್ ಅರ್ಜಿ ವಿಚಾರವಾಗಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ. ಹಿಜಾಬ್ ಕುರಿತಾಗಿ ನಾಲ್ಕಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ.
ಹೈಕೋರ್ಟ್ ನ ಹಿರಿಯ ವಕೀಲ ದೇವದತ್ತ ಕಾಮತ್ ಅವರು ಸರ್ಕಾರದ ಆದೇಶ ಪ್ರಶ್ನಿಸಲಾದ ಅರ್ಜಿದಾರರ ಪರ ವಾದ ಮಂಡಿಸುತ್ತಿದ್ದಾರೆ. ಅರ್ಜಿದಾರರ ಪರ ವಕೀಲರಾದ ರಹಮತ್ ಉಲ್ಲಾ ಕೊತ್ವಾಲ್ ಹಾಗೂ ಮೊಹಮದ್ ತಾಹಿರ್ ವಕಾಲತ್ತು ವಹಿಸಿದ್ದಾರೆ.
ಬೆಳಗಿನ ಕಲಾಪದಲ್ಲಿ ನ್ಯಾಯಪೀಠವು ಹಿಜಾಬ್ ವಿಚಾರವಾಗಿ ಪ್ರತಿಕ್ರಿಯಿಸಿ, ರಾಜ್ಯ ಹೊತ್ತಿ ಉರಿಯುತ್ತಿದೆ. ವಿದ್ಯಾರ್ಥಿಗಳ ಜೀವನ ಹಾಳಾಗಬಾರದು. ವಿದ್ಯಾರ್ಥಿಗಳು ರಸ್ತೆಗಿಳಿದಿದ್ದಾರೆ. ಇದು ಒಳ್ಳೆಯ ಸಂಗತಿಯಲ್ಲ. ಹಾಗಾಗಿ ಹಿಜಾಬ್ ಪ್ರಕರಣಕ್ಕೆ ಅದ್ಯತೆ ನೀಡಲಾಗುವುದು ಎಂದಿದೆ.