ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ಕೋಲಾಹಲ ಸೃಷ್ಟಿಸಿದ್ದ ಹಿಜಾಬ್ ವಿವಾದಕ್ಕೆ ಸಿಎಂ ಸಿದ್ದರಾಮಯ್ಯ ಮುಕ್ತಾಯವಾಡಿದ್ದಾರೆ. ಹೌದು, ಈ ಹಿಂದೆ ರಾಜ್ಯದಲ್ಲಿ ಹಿಜಾಬ್ ನಿಷೇಧಿಸಿದ್ದ ಬಿಜೆಪಿ ಸರ್ಕಾರದ ಆದೇಶವನ್ನು ಇದೀಗ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯಲು ನಿರ್ಧರಿಸಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರು ಮಾತನಾಡಿದ ಅವರು, ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ.ಯಾವ ಡ್ರೆಸ್ ಹಾಕೊಬೇಕು, ಏನು ಊಟ ಮಾಡಬೇಕು ಅದು ನಿಮಗೆ ಸೇರಿದ್ದು. ನಾನೇಕೆ ನಿಮಗೆ ಅಡ್ಡಿ ಪಡಿಸಲಿ. ನೀನು ಯಾವ್ ಡ್ರೆಸ್ ಹಾಕಿಕೊಳ್ಳುತ್ತೀಯಾ ಹಾಕಿಕೋ. ನೀನು ಯಾವ ಊಟ ಮಾಡುತ್ತೀಯಾ ಮಾಡು. ನೀನು ಊಟ ಮಾಡುವುದು ನಿನ್ನ ಹಕ್ಕು. ನಾನು ಊಟ ಮಾಡುವುದು ನನ್ನ ಹಕ್ಕು. ನಾನು ದೋತಿ ಮತ್ತು ಜುಬ್ಬ ಹಾಕಿಕೊಳ್ಳುತ್ತೇನೆ. ನೀನು ಪ್ಯಾಂಟ್ ಶರ್ಟ್ ಹಾಕಿಕೊಂಡರೆ ಹಾಕಿಕೋ, ಇದರಲ್ಲಿ ತಪ್ಪೇನಿದೆ. ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು ಎಂದು ಟೀಕಿಸಿದ್ದಾರೆ.