ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ(BJP) ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ವಿವಸ್ತ್ರಗೊಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್(G. Parameshwara) ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಕುರಿತು ಹುಬ್ಬಳ್ಳಿ ಪೊಲೀಸ್ ಕಮಿಷನರ್ ಶಶಿಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದರು.

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಪೊಲೀಸ್ ಕಮಿಷನರ್ ಒಬ್ಬರು ಅಧಿಕೃತವಾಗಿ ಪ್ರಕರಣದ ಬಗ್ಗೆ ವಿವರವಾಗಿ ಹೇಳಿಕೆ ನೀಡಿದ ಬಳಿಕ ಇನ್ನೇನು ಅನುಮಾನಕ್ಕೆ ಅವಕಾಶ ಇದೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಪೊಲೀಸರು ಆಕೆಯನ್ನು ವಿವಸ್ತ್ರ ಮಾಡಿಲ್ಲ. ಆಕೆಯೇ ಸ್ವಯಂವಾಗಿ ಬಟ್ಟೆ ತೆಗೆದುಕೊಂಡಿದ್ದಾಳೆ ಎಂಬುದಾಗಿ ಪೊಲೀಸ್ ಕಮಿಷನರ್ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.

ಪ್ರಕರಣದ ತನಿಖೆ ಸಂಪೂರ್ಣವಾಗಿ ಕಾನೂನಿನ ಚೌಕಟ್ಟಿನೊಳಗೆ ನಡೆಯುತ್ತಿದೆ ಎಂದು ಗೃಹ ಸಚಿವರು ಭರವಸೆ ನೀಡಿದರು. ಸತ್ಯಾಂಶಗಳ ಆಧಾರದ ಮೇಲೆ ತನಿಖೆ ನಡೆಯುತ್ತಿದ್ದು, ಯಾರೇ ತಪ್ಪಿತಸ್ಥರಾಗಿದ್ದರೂ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ ಪ್ರಕರಣವನ್ನು ಆಧಾರವನ್ನಾಗಿ ಮಾಡಿಕೊಂಡು ರಾಜ್ಯದಲ್ಲಿ ಶಾಂತಿ ಕದಡುವ ಅಥವಾ ಜನರನ್ನು ಪ್ರಚೋದಿಸುವ ಪ್ರಯತ್ನಗಳು ನಡೆಯಬಾರದು. ಈ ವಿಚಾರದಲ್ಲಿ ಅನಗತ್ಯ ರಾಜಕೀಯ ಮಾಡಬಾರದುಎಂದು ಎಚ್ಚರಿಕೆ ನೀಡಿದರು. ಅಲ್ಲದೇ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.











