ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಹೈಕೋರ್ಟ್ ಇಂದು ಸರ್ಕಾರಕ್ಕೆ ಹಾಗೂ ಕಾಂಗ್ರೆಸ್ ವಿರುದ್ಧ ಚಾಟಿ ಬೀಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಯಾವುದೇ ಕ್ಷಣದಲ್ಲಿ ಪೊಲೀಸ್ ಅಧಿಕಾರಿಗಳು ರಾಮನಗರದಲ್ಲಿ ಬಂಧಿಸುವ ಸಾಧ್ಯತೆ ಇದೆ.
ಜಯಮಹಲ್ ನಲ್ಲಿರುವ ಗೃಹ ಸಚಿವರ ನಿವಾಸದಲ್ಲಿ ಇಂದು ಸಂಜೆ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಸರಣಿ ಸಭೆ ನಡೆಸಿದ್ದು, ಡಿಕೆಶಿ ಅವರನ್ನು ಬಂಧಿಸುವ ನಿರ್ಧಾರಕ್ಕೆ ಬರಲಾಗಿದೆ ಎನ್ನುವ ಮಾಹಿತಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಇತ್ತ ಹೈಕೋರ್ಟ್ ಸೂಚನೆ ಪಾಲಿಸುವ ನಿಟ್ಟಿನಲ್ಲಿ ಡಿಕೆಶಿ ಬಂಧನದ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಡಿವಾಣ ಹಾಕಲು ಸರ್ಕಾರ ಚಿಂತಿಸುತ್ತಿದೆ. ನಾಲ್ಕನೇ ದಿನದ ಮೇಕೆದಾಟು ಪಾದಯಾತ್ರೆ ರಾಮನಗರ ಪ್ರವೇಶಿಸಿದ್ದು, ಡಿಕೆಶಿ ಅವರಿಗೆ ಭವ್ಯ ಸ್ವಾಗತ ಸಿಕ್ಕಿದೆ. ರಾಮನಗರದಲ್ಲಿ ರಾತ್ರಿ ಜನಸಭೆ ನಡೆಯಲಿದ್ದು, ಡಿಕೆಶಿ ಪ್ರಧಾನ ಭಾಷಣ ಮಾಡಲಿದ್ದಾರೆ.
ಡಿಕೆಶಿ ಅವರನ್ನು ಬಂಧಿಸುವ ನಿಟ್ಟಿನಲ್ಲಿ ಈಗಾಗಲೇ ಹೆಚ್ಚುವರಿ ಪೊಲೀಸರನ್ನು ರಾಮನಗರದಲ್ಲಿ ಗೃಹ ಇಲಾಖೆ ನಿಯೋಜನೆ ಮಾಡಿದೆ. ಜನಸಭೆಯ ನಂತರ ರಾತ್ರಿ ಡಿಕೆಶಿ ಅವರ ಬಂಧನ ಆಗಬಹುದು ಎನ್ನಲಾಗಿದೆ. ಯಾವುದೇ ಕಾರಣಕ್ಕೂ ಪಾದಯಾತ್ರೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎನ್ನುತ್ತಿದ್ದ ಕಾಂಗ್ರೆಸ್ ನಾಯಕರಲ್ಲಿ ಹೈಕೋರ್ಟ್ ಚಾಟಿ ಮತ್ತಷ್ಟು ಆತಂಕ ಹೆಚ್ಚಿಸಿದೆ.
![](https://pratidhvani.com/wp-content/uploads/2022/01/FIqVyOFUcAE_0uj-1024x766.jpg)
ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ನಿರ್ಬಂಧ ಹೇರಿರುವ ಮಧ್ಯೆಯೂ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕೆಪಿಸಿಸಿ ಭಾನುವಾರದಿಂದ 10 ದಿನಗಳ ಪಾದಯಾತ್ರೆ ಆರಂಭಿಸಿದೆ. ‘ನಮ್ಮ ನೀರು ನಮ್ಮ ಹಕ್ಕು’ ಎಂಬ ಘೋಷದೊಂದಿಗೆ ನಡೆಯುತ್ತಿರುವ ಪಾದಯಾತ್ರೆಯ ನೇತೃತ್ವವವನ್ನು ಕೆಪಿಸಿಸಿ ಅಧ್ಯಕ್ಷ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಹಿಸಿದ್ದಾರೆ. ಈ ಮಧ್ಯೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ಬೆನ್ನು ನೋವಿನ ಕಾರಣದಿಂದ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.
ಮೂರನೇ ದಿನವಾದ ಸೋಮವಾರ ನೀರಿಗಾಗಿ ನಡಿಗೆಯ ನೇತೃತ್ವ ವಹಿಸಿದ್ದ ಕಾಂಗ್ರೆಸ್ ನ 64 ನಾಯಕರ ವಿರುದ್ಧ ಕನಕಪುರ ಟೌನ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಡಿ.ಕೆ. ಸುರೇಶ್, ಎಸ್. ರವಿ, ಧ್ರುವನಾರಾಯಣ ಜೊತೆಗೆ ಮೈಸೂರು ಭಾಗದ ನಾಯಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು ಮೊದಲಾದ ಮುಖಂಡರ ಮೇಲೂ ಪೊಲೀಸರು ಎಫ್ ಐಆರ್ ದಾಖಲು ಮಾಡಿದ್ದಾರೆ. ಹಾಗೆಯೇ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಮಂಜುನಾಥ್ ಮೊದಲಾದವರ ಹೆಸರೂ ಎಫ್ ಐಆರ್ ನಲ್ಲಿದೆ.