ಕಾಂಗ್ರೆಸ್ನ ಹಿರಿಯ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ನಿಧನ ರಾಜ್ಯ ರಾಜಕೀಯಕ್ಕೆ ತುಂಬಲಾರದ ನಷ್ಟ ಎನಿಸಿದೆ. ಇಂದು ಬೆಳಗ್ಗೆ ರಕ್ತದ ವಾಂತಿ ಮಾಡಿಕೊಂಡಿದ್ದ ಆರ್.ಧ್ರುವ ನಾರಾಯಣ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದರು. ದಲಿತ ಮುಖಂಡನಾಗಿ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದ ಧ್ರುವ ನಾರಾಯಣ ರಾಜ್ಯ ರಾಜಕಾರಣಕ್ಕೆ ಮರಳುವ ಆಸೆಯನ್ನೂ ಇಟ್ಟುಕೊಂಡಿದ್ದರು.
ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿಯಲ್ಲಿ 1961ರ ಜುಲೈ 31ರಂದು ಜನಿಸಿದ ಆರ್.ಧ್ರುವ ನಾರಾಯಣ ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಕೃಷಿಕರಾಗಿದ್ದ ಧ್ರುವ ನಾರಾಯಣ 1983ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. 2004 ಹಾಗೂ 2008ರಲ್ಲಿ ಕ್ರಮವಾಗಿ ಸಂತೇಮರಹಳ್ಳಿ ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದರು.

1999ರಲ್ಲಿ ಸಂತೇಮರಹಳ್ಳಿ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು. ಆದರೆ 2004ರಲ್ಲಿ ಕೇವಲ 1 ಮತಗಳ ಅಂತರದಲ್ಲಿ ಈ ಕ್ಷೇತ್ರವನ್ನು ಗೆದ್ದುಕೊಂಡಿದ್ದರು.2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದ್ದರು.
ರಾಜಕೀಯ ಜೀವನದಲ್ಲಿ ಸೋತಾಗಲೂ ಕಾಂಗ್ರೆಸ್ ಪಕ್ಷವನ್ನು ಬಿಟ್ಟುಕೊಟ್ಟಿರಲಿಲ್ಲ. ಚುನಾವಣೆಯಲ್ಲಿ ಗೆದ್ದಾಗ ಎಷ್ಟು ಪಕ್ಷದ ಕಾರ್ಯದಲ್ಲಿ ಸಕ್ರಿಯರಾಗಿ ಗುರುತಿಸಿಕೊಳ್ಳುತ್ತಿದ್ದರೋ ಚುನಾವಣೆಯಲ್ಲಿ ಪರಭಾವಗೊಂಡ ಬಳಿಕವೂ ಅವರು ಪಕ್ಷದ ಕಾರ್ಯಗಳಲ್ಲಿ ನಿರತರಾಗಿರುತ್ತಿದ್ದರು. ಈ ಬಾರಿಯ ಚುನಾವಣೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂಬ ಆಶಯ ಧ್ರುವ ನಾರಾಯಣರಿಗೆ ಬಲವಾಗಿತ್ತು. ಅಲ್ಲದೇ ಕೆಪಿಸಿಸಿ ಕೂಡ ಧ್ರುವ ನಾರಾಯಣರಿಗೆ ನಂಜನಗೂಡು ಕ್ಷೇತ್ರದ ಟಿಕೆಟ್ ನೀಡಲು ಉತ್ಸುಕವಾಗಿತ್ತು.






