
ಜನರು ದಡ್ಡರಲ್ಲ, ತಮ್ಮ ಬದುಕು ಯಾರು ಕಟ್ಟಿಕೊಡುತ್ತಾರೋ ಅವರಿಗೆ ಬೆಂಬಲ ನೀಡುತ್ತಾರೆ. ಕಾಂಗ್ರೆಸ್ ಪಕ್ಷ ಜನರ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದ್ದು, ಒಕ್ಕಲಿಗರೂ ಸೇರಿದಂತೆ ಎಲ್ಲಾ ವರ್ಗದ ಜನ ಕಾಂಗ್ರೆಸ್ ಗೆ ಬೆಂಬಲ ನೀಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಶಿವಕುಮಾರ್ ಅವರು ಗುರುವಾರ ಮಾತನಾಡಿದರು.“ಒಕ್ಕಲಿಗರಾಗಲಿ, ಬೇರೆ ಸಮುದಾಯದವರಾಗಲಿ ಯಾರೂ ದಡ್ಡರಲ್ಲ. ತಮಗೆ ಯಾರು ಅನುಕೂಲ ಮಾಡಿಕೊಡಲಿದ್ದಾರೆ ಹಾಗೂ ದೇಶಕ್ಕೆ ಯಾರು ಸೂಕ್ತ ಎಂದು ನೋಡುತ್ತಾರೆ. ತಮಗೆ, ರಾಜ್ಯಕ್ಕೆ, ದೇಶಕ್ಕೆ ಯಾರು ಉತ್ತಮರು ಎಂದು ಜನ ಆಲೋಚನೆ ಮಾಡುತ್ತಾರೆ. ಜನ ಅವರ ಬದುಕು ನೋಡುತ್ತಾರೆ ಹೊರತು, ಭಾವನೆ ನೋಡುವುದಿಲ್ಲ” ಎಂದರು.
ಮೈತ್ರಿ ನಾಯಕರು ಆದಿಚುಂಚನಗಿರಿ ಸ್ವಾಮೀಜಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ಕೊಟ್ಟ ಅವರು,ಸ್ವಾಮೀಜಿಗಳು ಉತ್ತರ ನೀಡಬೇಕು ಎಂದು ನಾನು ಕೇಳಿಲ್ಲ. ಕುಮಾರಸ್ವಾಮಿ ಹಾಗೂ ಕೆಲವು ಮಂತ್ರಿಗಳು ಸ್ವಾಮೀಜಿಗಳ ಕಾರ್ಯಕ್ರಮಕ್ಕೆ ಹೋಗಿದ್ದರು. ಅವರು ವಾಪಸ್ ಬರುವ ವೇಳೆಗೆ ಆಪರೇಷನ್ ಕಮಲ ನಡೆದಿತ್ತು. ಸ್ವಾಮೀಜಿಗಳಿಗೂ ಒಕ್ಕಲಿಗ ವ್ಯಕ್ತಿ ಸಿಎಂ ಆಗಿರುವ ಬಗ್ಗೆ ಅಭಿಮಾನ ಇರುತ್ತದೆ. ಆದರೆ ಈಗ ಒಕ್ಕಲಿಗ ಸಿಎಂಅನ್ನು ತೆಗೆದವರನ್ನೇ ಜತೆಗೆ ಕರೆದುಕೊಂಡು ಹೋದರೆ ಹೇಗೆ? ಸ್ವಾಮೀಜಿಗಳ ಆಶೀರ್ವಾದ ಎಲ್ಲರಿಗೂ ಬೇಕು. ಹೀಗಾಗಿ ಚೆಲುವರಾಯಸ್ವಾಮಿ ಅವರು ನಮ್ಮ ಅಭ್ಯರ್ಥಿಗಳನ್ನು ಕರೆದುಕೊಂಡು ಹೋಗಿದ್ದರು. ಅದೇ ರೀತಿ ಇವರು ಕೂಡ ಆಶೀರ್ವಾದ ಪಡೆಯಲು ಹೋಗಿದ್ದಾರೆ. ಕುಮಾರಸ್ವಾಮಿ, ಮಂಜುನಾಥ್ ಅವರು ಸ್ವಾಮೀಜಿಗಳ ಆಶೀರ್ವಾದ ಕೇಳಿದ್ದರಲ್ಲಿ ತಪ್ಪೇನಿಲ್ಲ. ಆದರೆ ಸರ್ಕಾರ ತೆಗೆದವರನ್ನೇ ಜತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ. ಇದರಿಂದ ಅವರು ಸಮಾಜಕ್ಕೆ ಏನು ಉತ್ತರ ನೀಡುತ್ತಾರೆ ಎಂದಷ್ಟೇ ನಾನು ಕೇಳಿದೆ” ಎಂದು ತಿಳಿಸಿದರು.

ಅವರೇ ಜೆಡಿಎಸ್ ಗೆ ಮುಕ್ತಿ ಕೊಟ್ಟಿದ್ದಾರೆ:
ಸ್ವಾಮೀಜಿಗಳು ಕೃಷ್ಣನಂತೆ ಅವರು ಪಾಂಡವರಂತೆ ಇರುವ ಜೆಡಿಎಸ್ ಪರವಾಗಿ ನಿಲ್ಲಲಿದ್ದಾರೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಜೆಡಿಎಸ್ ಎಲ್ಲಿದೆ? ಜೆಡಿಎಸ್ ಗೆ ಅವರೇ ಮುಕ್ತಿ ಕೊಟ್ಟಿದ್ದಾರೆ. ಜೆಡಿಎಸ್ ಇರಬೇಕು ಎಂಬ ಆಸೆ ನನಗಿದೆ. ಆದರೆ ಅಳಿಯನನ್ನೇ ಬಿಜೆಪಿಗೆ ಕಳುಹಿಸಿ ಜೆಡಿಎಸ್ ವಿಸರ್ಜನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ. ನಾವು ಹಿಂದೆ ಒಂದು ತಪ್ಪು ಮಾಡಿದ್ದೆವು. ಆದರೆ ಈಗ ಅದಕ್ಕಿಂತ ದೊಡ್ಡ ತಪ್ಪು ಜೆಡಿಎಸ್ ನವರು ಮಾಡಿದ್ದಾರೆ” ಎಂದು ಲೇವಡಿ ಮಾಡಿದರು.
ಎಸ್ ಟಿಎಸ್, ಹೆಬ್ಬಾರ್ ಬಿಜೆಪಿ ಶಾಸಕರು..!
“ನಾನು ಅವರನ್ನು ಎಲ್ಲಿ ಸೇರಿಸಿಕೊಂಡಿದ್ದೇನೆ. ಅವರು ತಮ್ಮ ಕ್ಷೇತ್ರದ ವಿಚಾರವಾಗಿ ನಮ್ಮ ಜತೆ ಚರ್ಚೆ ಮಾಡಿದ್ದಾರೆ. ಆ ಕ್ಷೇತ್ರಕ್ಕೆ ಹೋಗಿ ಅಲ್ಲಿ ಕೇಳಿ. ಸೋಮಶೇಖರ್ ಹಾಗೂ ಹೆಬ್ಬಾರ್ ಅವರು ಬಿಜೆಪಿಯ ಅಧಿಕೃತ ಶಾಸಕರು. ಅವರು ತಮ್ಮದೇ ಆದ ಲೆಕ್ಕಾಚಾರ, ನಂಬಿಕೆ ಮೇಲೆ ಯಾವ ಪಕ್ಷಕ್ಕೆ ಸಹಾಯ ಮಾಡುತ್ತಿದ್ದಾರೋ ನನಗೆ ಗೊತ್ತಿಲ್ಲ” ಎಂದು ತಿಳಿಸಿದರು.












