ದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ(National Herald Case) ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K. Shivakumar) ಅವರಿಗೆ ದೆಹಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಇಂದು ದೆಹಲಿ ಪೊಲೀಸರ ಎದುರಿಗೆ ಹಾಜರಾಗಬೇಕಿತ್ತು.

ಈ ಬಗ್ಗೆ ಸ್ವತಃ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ತಿಯಿಸಿದ್ದು, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ. “ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ ಎಂದಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ನೀಡಿರುವ ನೋಟಿಸ್ಗೆ ನನ್ನ ಉತ್ತರದ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇನೆ. ಏಕೆಂದರೆ ಅವರು ಎಫ್ಐಆರ್ ಪ್ರತಿಯನ್ನು ಲಗತ್ತಿಸಿಲ್ಲ. ಇ.ಡಿ.ಗೆ ಈಗಾಗಲೇ ಉತ್ತರ ನೀಡಿದ್ದೇವೆ. ಎಫ್ಐಆರ್ ಪ್ರತಿಯಲ್ಲಿ ಏನಿದೆ ಎಂದು ಓದಿಲ್ಲ. ಕೇವಲ ನೋಟಿಸ್ ಮಾತ್ರ ನೀಡಿದ್ದಾರೆ. ಎಫ್ಐಅರ್ ಪ್ರತಿ ನೀಡಿ ಎಂದು ಕೇಳುತ್ತೇನೆ ಎಂದು ತಿಳಿಸಿದರು.

ಕೆ.ಸಿ ವೇಣುಗೋಪಾಲ್ ಹಾಗೂ ಸುರ್ಜೆವಾಲ ಅವರನ್ನು ಭೇಟಿಯಾಗಿರುವ ಬಗ್ಗೆ ಮಾತನಾಡಿದ ಅವರು, ನಾನು ದೆಹಲಿಗೆ ಬಂದಾಗ ಎಲ್ಲರನ್ನೂ ಭೇಟಿ ಮಾಡಬೇಕು. ಸುರ್ಜೆವಾಲ ಅವರನ್ನು, ಮಲ್ಲಿಕಾರ್ಜುನ ಖರ್ಗೆ ಸಾಹೇಬರನ್ನು, ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಬೇಕು. ನಿನ್ನೆ ಇಂದಿರಾ ಭವನದಲ್ಲಿ ನಡೆದ ಭೋಜನ ಕೂಟದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನೂ ಭೇಟಿ ಮಾಡಿದ್ದೆ̤ ಇಂದು ಖರ್ಗೆ ಸಾಹೇಬರ ಜೊತೆಯಲ್ಲೇ ದಾವಣಗೆರೆಗೆ ಹೋಗುತ್ತಿದ್ದೇವೆ. ತುರ್ತು ಕಾರಣಕ್ಕೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿತ್ತು. ಮಂಜು ಕವಿದ ವಾತಾವರಣ ಇರುವ ಕಾರಣಕ್ಕೆ ತಡವಾಯಿತು ಎಂದರು.






