ಬೆಂಗಳೂರು: ಕೆಪಿಎಸ್ಸಿ ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಹಾಗೂ ಎಂಎಸ್ಎಂಇ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಗುರುವಾರ ಬೆಳಗ್ಗೆ ಅವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದರು ಎನ್ನಲಾಗಿದೆ. ದೆಹಲಿಗೆ ತೆರಳಲು ವಿಮಾನದ ಟಿಕೆಟ್ ಕೂಡ ಬುಕ್ ಮಾಡಿದ್ದರು. ಆದರೆ ವಿಮಾನ ನಿಲ್ದಾಣಕ್ಕೆ ತೆರಳಿದ ಬಳಿಕ ಅವರು ವಿಮಾನ ಹತ್ತಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇದೇ ವೇಳೆ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ.

ಕುಟುಂಬದವರಿಗೂ ಅವರೊಂದಿಗೆ ಸಂಪರ್ಕ ಸಾಧ್ಯವಾಗದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ವಿಮಾನ ನಿಲ್ದಾಣದವರೆಗಿನ ಅವರ ಚಲನವಲನ ಹಾಗೂ ಬಳಿಕ ಅವರು ಎಲ್ಲಿಗೆ ತೆರಳಿದ್ದಾರೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಸಿಸಿಟಿವಿ ದೃಶ್ಯಗಳನ್ನೂ ಪರಿಶೀಲಿಸಲಾಗುತ್ತಿದೆ. ಜ್ಞಾನೇಂದ್ರ ಕುಮಾರ್ ಅವರಿಗೆ ಈ ಹಿಂದೆ ಆರೋಗ್ಯ ಸಮಸ್ಯೆ ಇದ್ದುದಾಗಿ ತಿಳಿದುಬಂದಿದೆ. ಅವರು ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಕಾರ್ಯನಿರ್ವಹಿಸಿದ್ದರು.

ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವ ವಿಚಾರವನ್ನು ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಬಳಿಕ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವ ಸಮಯವೂ ಗಮನ ಸೆಳೆಯುತ್ತಿದೆ. ಇತ್ತೀಚೆಗೆ KPSC ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಅಕ್ರಮ ಪ್ರಕರಣದ ತನಿಖೆ ನಡೆಯುತ್ತಿದ್ದು, ಬುಧವಾರ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದರು.

KPSCಯಲ್ಲಿ ಜ್ಞಾನೇಂದ್ರ ಕುಮಾರ್ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿನ ಕೆಲವು ವಿಚಾರಗಳ ಬಗ್ಗೆಯೂ ತನಿಖಾ ಸಂಸ್ಥೆಗಳು ಪರಿಶೀಲನೆ ನಡೆಸುತ್ತಿವೆ ಎನ್ನಲಾಗಿದೆ. ED ದಾಳಿ ನಡೆದ ಮರುದಿನವೇ ಅವರು ನಾಪತ್ತೆಯಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸದ್ಯ ಪೊಲೀಸರು ಅಧಿಕಾರಿಯ ಪತ್ತೆಗೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಅವರ ನಾಪತ್ತೆಯ ನಿಖರ ಕಾರಣ ಹಾಗೂ ಅವರು ಎಲ್ಲಿದ್ದಾರೆ ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.






