ಬೆಳಗಾವಿ:ನಿನ್ನೆ ಸಂಜೆ ರಸ್ತೆ ಅಪಘಾತದಲ್ಲಿ ವಿಧಿವಶರಾಗಿರುವ ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಅವರ ಹುಟ್ಟೂರು ಬೆಳಗಾವಿ ಜಿಲ್ಲೆಯ ರಾಮದುರ್ಗಕ್ಕೆ ಆಗಮಿಸಿದೆ.

ಆಂಬುಲೆನ್ಸ್ ನಲ್ಲಿ ಆಗಮಿಸಿದ ಪಾರ್ಥಿವ ಶರೀರವನ್ನು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರಾಮದುರ್ಗ ಪಟ್ಟಣದಲ್ಲಿರುವ ನಮಿಪೇಟ ಬಳಿ ಇರುವ ಬೀಳಗಿ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.

ಬಳಿಕ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ತಾಲೂಕು ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಮಹಾಂತೇಶ ಬೀಳಗಿ ಅವರು ತಮ್ಮ ಸೇವೆಯ ಮೂಲಕವೇ ರಾಜ್ಯದೆಲ್ಲೆಡೆ ಹೆಸರು ಮಾಡಿರುವ ಅಧಿಕಾರಿಯಾಗಿದ್ದರು. ಹೀಗಾಗಿ ಅವರ ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಬರುವ ಸಾಧ್ಯತೆ ಹಿನ್ನಲೆಯಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಮಾಡಿಕೊಂಡಿದೆ.







