2019 ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಬಳಿಕ ಅಸಮಾಧಾನಗೊಂಡಿರುವ ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಎಸ್. ಪಿ. ಮುದ್ದಹನುಮೇಗೌಡ ಕಾಂಗ್ರೆಸ್ ತೊರೆಯುವುದಾಗಿ ಘೋಷಣೆ ಮಾಡಿದರು.
ಗುರುವಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮುದ್ದಹನುಮೇಗೌಡ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ತಮಗಾದ ಅನ್ಯಾಯದ ಬಗ್ಗೆ ಅಸಮಾಧಾನ ತೋಡಿಕೊಂಡಿದ್ದಾರೆ.
“ಕಾಂಗ್ರೆಸ್ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆ ಮಾಡಿ. ಪಕ್ಷದ ಜೊತೆಗೆ ಮುಂದುವರೆಯಲು ಸಾಧ್ಯವೇ ಇಲ್ಲ” ಎಂದು ಎಸ್. ಪಿ. ಮುದ್ದಹನುಮೇಗೌಡ ಡಿ. ಕೆ. ಶಿವಕುಮಾರ್ಗೆ ಮನವಿ ಮಾಡಿದ್ದಾರೆ.
ನಾನು ಯಾವತ್ತೂಅಧಿಕಾರ ಕೇಳಲಿಲ್ಲ. ಕೇವಲ ಟಿಕೆಟ್ ಕೊಡಿ ಎಂದಷ್ಟೇ ಕೇಳಿದ್ದೇನೆ. ಆದರೂ ನಾಲ್ಕು ಬಾರಿ ನನಗೆ ಟಿಕೆಟ್ ತಪ್ಪಿಸಿದ್ದಾರೆ. 2019 ರಲ್ಲಿ ಟಿಕೆಟ್ ನೀಡದೆ ಇರಲು ಯಾವುದೇ ಕಾರಣ ಇರಲಿಲ್ಲ. ಮೋದಿ ಹವಾ ಇದ್ದರೂ ಅದರ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಗೆಲುವು ಸಾಧಿಸಿದ್ದೆ ಎಂದರು.
2014ರ ಲೋಕಸಭೆ ಚುನಾವಣೆಯಲ್ಲಿ ಎಸ್. ಪಿ. ಮುದ್ದಹನುಮೇಗೌಡ ತುಮಕೂರು ಕ್ಷೇತ್ರದಲ್ಲಿ 4,29,868 ಮತಗಳನ್ನು ಪಡೆದು ಜಯಗಳಿಸಿದ್ದರು. ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಪಕ್ಷದ ಟಿಕೆಟ್ ಕೈ ತಪ್ಪಿತ್ತು, ಈ ಕುರಿತು ಅವರು ಅಸಮಾಧಾನ ಹೊರಹಾಕಿದ್ದರು.