
ಮಡಿಕೇರಿ -ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದೆ.
ಜಿಲ್ಲೆಯಲ್ಲಿನ ನದಿ, ತೊರೆ, ಹಳ್ಳಕೊಳ್ಳ, ಜಲಾಶಯಗಳಲ್ಲಿನ ನೀರಿನ ಮಟ್ಟ ಏರಿಕೆಯಾಗಿದೆ. ಜಿಲ್ಲೆಯ ಶಾಂತಳ್ಳಿ, ಭಾಗಮಂಡಲ, ಸೋಮವಾರಪೇಟೆ, ಮಡಿಕೇರಿ, ಸುಂಟಿಕೊಪ್ಪ, ನಾಪೋಕ್ಲು, ಶನಿವಾರಸಂತೆ, ಶ್ರೀಮಂಗಲ, ಸಂಪಾಜೆ, ಹೀಗೆ ವಿವಿಧ ಕಡೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.
ಮಡಿಕೇರಿ ನಗರದಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆ ಬಿರುಸು ಪಡಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲಾಡಳಿತ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಮಳೆಯ ಕಾರಣ ಅಲ್ಲಲ್ಲಿ ಅನಾಹುತಗಳು ಸಂಭವಿಸುತ್ತಿವೆ. ತಲಕಾವೇರಿ ಬಳಿ ಬೃಹತ್ ಗಾತ್ರ ಮರವೊಂದು ನೆಲಕ್ಕುರುಳಿರುವದರಿಂದ ಭಾಗಮಂಡಲಕ್ಕೆ ತೆರಳುವ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳದಲ್ಲಿರುವ ವಿದ್ಯುತ್ ಕಂಬಗಳು ಸಹ ಉರುಳಿ ಬಿದ್ದಿವೆ. ನಮ್ಮ ಮಡಿಕೇರಿ ವರದಿಗಾರ ನೀಡಿರುವ ಮಾಹಿತಿಯ ಪ್ರಕಾರ ಅರಣ್ಯ ಇಲಾಖೆಯ ಸಿಬ್ಬಂದಿ ಮರ ತೆರವು ಮಾಡಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡಿದ್ದಾರೆ. ಮಳೆ ನಿಲ್ಲದ ಸೂಚನೆಯಿರದ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾಗಮಂಡಲ ಭಾಗದಲ್ಲಿ ವಿಪರೀತ ಮಳೆಯಾಗುತ್ತಿದೆ .
ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ 10 ಸಾವಿರ ಕ್ಯೂಸೆಕ್ಗೆ ಏರಿಕೆಯಾಗಿದೆ. ಕ್ಷಣ ಕ್ಷಣಕ್ಕೂ ಒಳಹರಿವು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವುದರಿಂದ ರಾತ್ರಿ 12 ಗಂಟೆ ಸುಮಾರಿಗೆ ಜಲಾಶಯದಿಂದ ಸುಮಾರು 10 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದರಿಂದ ಕಾವೇರಿ ಮತ್ತು ಹಾರಂಗಿ ನದಿ ದಂಡೆಯಲ್ಲಿ ಪ್ರವಾಹದ ಭೀತಿ ಸೃಷ್ಟಿಯಾಗಿದೆ.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಜಡಿಮಳೆಯ ನಡುವೆಯೂ ನಾಲ್ವರು ಲೈನ್ ಮ್ಯಾನ್ಗಳು ವಿದ್ಯುತ್ ಲೈನ್ ರಿಪೇರಿಯಲ್ಲಿ ತೊಡಗಿರುವ ವೀಡಿಯೋ ಭಾರೀ ವೈರಲ್ ಆಗಿತ್ತು. ಇದಕ್ಕೆ ಸಹಸ್ರಾರು ಮೆಚ್ಚುಗೆ ವ್ಯಕ್ತವಾಗಿದ್ದು ವೀಕ್ಷಕರು ಭೇಷ್ ಎಂದಿದ್ದಾರೆ.
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಭಾಗಮಂಡಲ ತ್ರಿವೇಣಿ ಸಂಗಮ ತುಂಬಿ ಹರಿಯುತ್ತಿದೆ. ಕಾವೇರಿ ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಕೃಷಿ ಚಟುವಟಿಕೆ ಸಹ ಬಿರುಸಿನಿಂದ ನಡೆದಿದೆ. ಮಡಿಕೇರಿ ತಹಶೀಲ್ದಾರರಾದ ಕಿರಣ್ ಗೌರಯ್ಯ, ಪ್ರವೀಣ್ ಕುಮಾರ್, ರಾಮಚಂದ್ರ, ಪೌರಾಯುಕ್ತರಾದ ವಿಜಯ್, ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎ .ಯತ್ನಟ್ಟಿ ಇತರರು ತಮ್ಮ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದ್ದಾರೆ. ಮಳೆಗಾಲದಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಕಾರ್ಮಿಕರಿಗೆ ತಾಲ್ಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ ಅವರು ಸಲಹೆ ಮಾಡಿದ್ದಾರೆ.
ಶಾಲಾ ಕಾಲೇಜುಗಳಿಗೆ ನಾಳೆಯೂ ರಜೆ ಘೋಷಿಸಲಾಗಿದೆ.