ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ಮಾರಣಹೋಮದ ಹಿಂದಿನ ಕೈವಾಡ ಪಾಕಿಸ್ತಾನದ್ದು ಅನ್ನೋ ಕಾರಣಕ್ಕೆ ಪಾಕಿಸ್ತಾನದ ವಿರುದ್ಧ ಭಾರತ ಕಠಿಣ ನಿಲುವುಗಳನ್ನು ತೆಗೆದುಕೊಳ್ಳುತ್ತಿದೆ. ಪಾಕಿಸ್ತಾನಿ ನಿವಾಸಿಗಳು ಭಾರತವನ್ನು ಬಿಟ್ಟು ತೊಲಗಿ ಎಂದಿದ್ದ ಭಾರತ, 48 ಗಂಟೆಗಳ ಗಡುವು ನೀಡಿತ್ತು. ಇನ್ನು ಮುಂದೆ ಪಾಕಿಸ್ತಾನಿಗಳಿಗೆ ವೀಸಾ ನಿರಾಕರಣೆ ಮಾಡಲಾಗುವುದು, ರಾಯಭಾರ ಕಚೇರಿಯ ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕಳುಹಿಸುವುದು, ಇಂಡಸ್ ವ್ಯಾಲಿ ಒಪ್ಪಂದ ರದ್ದು ಸೇರಿದಂತೆ ಸಾಕಷ್ಟು ಕಠಿಣ ನಿಲುವು ಘೋಷಣೆ ಆಗಿತ್ತು. ಆ ಬಳಿಕ ನಿನ್ನೆ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಒಗ್ಗಟ್ಟಿನ ಮಂತ್ರ ಉಚ್ಚಾರಣೆ ಆಗಿದೆ.

ಭಾರತ ಭಯೋತ್ಪಾದನೆ ವಿರುದ್ಧ ಹೋರಾಟ ಮಾಡುವ ಮುನ್ನ ಕೇಂದ್ರ ಸರ್ಕಾರ ಆಲ್ ಪಾರ್ಟಿ ಮೀಟಿಂಗ್ ಆಯೋಜನೆ ಮಾಡಿತ್ತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಂಸತ್ ಭವನದಲ್ಲಿ ನಡೆದ ಸಭೆಗೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುಕ ಖರ್ಗೆ ಸೇರಿದಂತೆ ಎನ್ಸಿಪಿ, ಶಿವಸೇನೆ, ಡಿಎಂಕೆ, ಟಿಎಂಸಿ ಸೇರಿದಂತೆ ಸಾಕಷ್ಟು ಪಕ್ಷಗಳ ಮುಖಂಡರು ಹಾಜರಿದ್ದರು. ಈ ವೇಳೆ ಭಯೋತ್ಪಾದಕರ ಮಟ್ಟ ಹಾಕಲು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ ಎನ್ನುವ ಒಗ್ಗಟ್ಟಿನ ಮಂತ್ರ ಪಠಣ ಆಗಿದೆ ಎನ್ನಲಾಗಿದೆ.

ಸರ್ವ ಪಕ್ಷ ಸಭೆಯಲ್ಲಿ ಪಕ್ಷ ಭೇದ ಮರೆತು ಒಗ್ಗಟ್ಟು ಪ್ರದರ್ಶನ ಮಾಡಿದ್ದು, ಕೇಂದ್ರ ಸರ್ಕಾರದ ಹೋರಾಟದಲ್ಲಿ ಸರ್ಕಾರದೊಂದಿಗೆ ನಿಲ್ಲುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಪ್ರಮುಖ ನಾಯಕರು ಭಾಗಿಯಾಗಿದ್ದ ಸಭೆಯಲ್ಲಿ ‘ಹಮ್ ಸಬ್ ಸಾಥ್ ಹೈ, ಆಕ್ಷನ್ ಲೋ’ ಎಂಬ ಘೋಷಣೆ ಮಾಡಿದ್ದಾರೆ. ಮುಂದಿನ ಹೋರಾಟದ ಬಗ್ಗೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ಮಾಡಿದ್ದು, ಉಗ್ರರ ಈ ಕೃತ್ಯವನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ ಎನ್ನುವ ಮಾತುಗಳು ಸಭೆಯಲ್ಲಿ ಕೇಳಿ ಬಂದಿವೆ.
ಕೇಂದ್ರ ಸಚಿವ ಕಿರಣ್ ರಿಜಿಜು ಮಾತನಾಡಿ ಪಾಕಿಸ್ತಾನಕ್ಕೆ ಸಂಬಂಧಿಸಿದಂತೆ CCS ನಿರ್ಧಾರಕ್ಕೆ ಎಲ್ಲರ ಬೆಂಬಲ ಸಿಕ್ಕಿದೆ. ಎಲ್ಲಾ ನಾಯಕರು ಸರ್ವಾನುಮತದಿಂದ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿದರು. ಉಗ್ರರ ಬಗ್ಗೆ ಕೇಂದ್ರ ಸರ್ಕಾರ ಶೂನ್ಯ ಸಹಿಷ್ಣುತೆ ಹೊಂದಿರುತ್ತದೆ. ಕೇಂದ್ರ ಸರ್ಕಾರದ ಮುಂದಿನ ಕಠಿಣ ಕ್ರಮಗಳಿಗೆ ಎಲ್ಲಾ ನಾಯಕರು ಒಗ್ಗಟ್ಟನ್ನು ವ್ಯಕ್ತಪಡಿಸಿದರು ಎಂದಿದ್ದಾರೆ.
ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಎಲ್ಲಾ ರಾಜಕೀಯ ಪಕ್ಷಗಳು ದಾಳಿಯನ್ನು ಖಂಡಿಸಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಕಾಪಾಡಬೇಕು. ಕೇಂದ್ರ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕೆಂದು ನಾವು ಹೇಳಿದ್ದೇವೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರದ ಜೊತೆಗೆ ಇರುತ್ತೇವೆ ಎಂದಿದ್ದಾರೆ. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾತನಾಡಿ, ಸರ್ವ ಪಕ್ಷದ ಸಭೆಯಲ್ಲಿ ಎಲ್ಲರೂ ಭಯೋತ್ಪಾದಕರ ದಾಳಿಯನ್ನು ಖಂಡಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಯಾವುದೇ ಕ್ರಮವನ್ನ ಬೆಂಬಲಿಸುತ್ತೇವೆ ಎಂದು ಘೋಷಿಸಿದ್ದಾರೆ.