ಕಳೆದ 20 ವರ್ಷದಿಂದ ಜೆಡಿಎಸ್ ಜತೆಗೆ ವೈಯಕ್ತಿಕವಾಗಿ ಸೆಣಸಾಟ ಮಾಡಿಕೊಂಡು ಬಂದಿದ್ದೇವೆ. ಜಡಿಎಸ್ ನವರ ಮಾನಸಿಕ ಕಿರುಕುಳವನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿ ವಿಚಾರವಾಗಿ ನನಗೂ ವೈಯಕ್ತಿಕವಾಗಿ ವಿರೋಧ ಇದೆ ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಬಗ್ಗೆ ವೈಯಕ್ತಿಕವಾಗಿ ನನಗೆ ವಿರೋಧ ಇದೆ. ಯಾವತ್ತೂ ಕೂಡ ನಮ್ಮ ಹಾಗೂ ಅವರ ಕಾರ್ಯಕರ್ತರಿಗೆ ಹೊಂದಾಣಿಕೆ ಆಗಿಲ್ಲ. ಅಧಿಕೃತವಾಗಿ ಮೈತ್ರಿಯಾದ ಬಳಿಕ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳುವ ಮೂಲಕ ಪಕ್ಷ ಬಿಡುವ ಸುಳಿವು ನೀಡಿದ್ದಾರೆ.
ಮುಂದುವರೆದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಇತ್ತು. ಅವರು ಇವರಿಗೆ ಮತ ಹಾಕಲಿಲ್ಲ, ಇವರು ಅವರಿಗೆ ಮತ ಹಾಕಲಿಲ್ಲ. ಯಾರೂ ಕೂಡ ಈ ಬಗ್ಗೆ ವೈಯಕ್ತಿಕವಾಗಿ ಮಾತನಾಡದಿದ್ದರೂ ಎಲ್ಲರಿಗೂ ಅಸಮಾಧಾನವಿದೆ ಎಂದು ಹೇಳಿದ್ದಾರೆ.
ನನ್ನ ಕ್ಷೇತ್ರ ಅಷ್ಟೇ ಅಲ್ಲ, ಅಶೋಕ್, ಮುನಿರತ್ನ, ದಾಸರಹಳ್ಳಿ ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿಗರೆಲ್ಲ ಪಕ್ಷ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ನಾನು ಇನ್ನೂ ಬಿಜೆಪಿಯಲ್ಲಿ ಇದ್ದೀನಿ, ಇದು ನೂರಕ್ಕೆ ನೂರರಷ್ಟು ಸತ್ಯ ನಾನು ಎಲ್ಲೂ ಹೋಗಿಲ್ಲ. ಆದರೆ, ಮೈತ್ರಿ ಬಳಿಕ ಯೋಚನೆ ಮಾಡಬೇಕಿದೆ. 6 ಬಾರಿ ನಾನು ಜೆಡಿಎಸ್ ಜೊತೆ ಹೊಡೆದಾಡಿಕೊಂಡು ಆ ಕಿರುಕುಳ ಅನುಭವಿಸಿ ಬಂದಿದ್ದೇನೆ ಎಂದು ಪಕ್ಷ ಬಿಡುವ ಸೂಚನೆ ನೀಡಿದರು.






