ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಇಡೀ ರಾಜ್ಯ ಸರ್ಕಾರವೇ ನವದೆಹಲಿಗೆ ಶಿಫ್ಟ್ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರೂ ನಾಯಕರು ಹೈಕಮಾಂಡ್ ನಡೆಸುತ್ತಿರುವ ಸಭೆಗಳಲ್ಲಿ ಭಾಗಿಯಾಗಿದ್ದಾರೆ.

ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ! ಎಂದು ವ್ಯಂಗ್ಯವಾಡಿದೆ. ರಾಜ್ಯದ ಅಭಿವೃದ್ಧಿಯನ್ನು ಗಾಳಿಗೆ ತೂರಿ, ಕೇವಲ ಅಧಿಕಾರಕ್ಕಾಗಿ ಕಿತ್ತಾಡುತ್ತಿರುವ ಕಾಂಗ್ರೆಸ್ಸಿಗರಿಗೆ ಕನ್ನಡಿಗರ ಹಿತಕ್ಕಿಂತ ಸ್ವಾರ್ಥವೇ ಮುಖ್ಯವಾಗಿದೆ ಎಂದು ಟೀಕಿಸಿದೆ.

ರಾಜ್ಯದಲ್ಲಿ ರೈತರು ತಮ್ಮ ಭೂಮಿ ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದರೆ, ಕಾಂಗ್ರೆಸ್ ನಾಯಕರಿಗೆ ಮಾತ್ರ ತಮ್ಮ ‘ಕುರ್ಚಿ’ ಉಳಿಸಿಕೊಳ್ಳುವದ್ದೇ ದೊಡ್ಡ ಚಿಂತೆ! ದೆಹಲಿ ‘ಹೈಕಮಾಂಡ್’ ಬಾಗಿಲಲ್ಲಿ ನಿಂತು ರಾಜ್ಯದ ಹಿತಾಸಕ್ತಿಯನ್ನು ಬಲಿಕೊಡುತ್ತಿರುವ ಈ ಕಾಂಗ್ರೆಸ್ಸಿಗರಿಗೆ ಜನರ ಕಷ್ಟಗಳು ಕಾಣುತ್ತಿಲ್ಲವೇ? ಕನ್ನಡಿಗರ ಸ್ವಾಭಿಮಾನವನ್ನು ಅಡಮಾನ ಇಟ್ಟಿರುವ ಈ ಸರ್ಕಾರಕ್ಕೆ ಧಿಕ್ಕಾರ ಎಂದು ರಾಜ್ಯ ಜೆಡಿಎಸ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.






