ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಜನಪ್ರತಿನಿಧಿಗಳ ಕುಟುಂಬಸ್ಥರು ಹಾಗೂ ರಾಜಕೀಯ ನಾಯಕರ ದರ್ಪದ ಘಟನೆಗಳು ಚರ್ಚೆಗೆ ಗ್ರಾಸವಾಗುತ್ತಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜು ಅವರು ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ಆರೋಪ ಕೇಳಿಬಂದಿದೆ.ಬೆಂಗಳೂರಿನ ಗೊಟ್ಟಿಗೆರೆ ಪ್ರದೇಶದಲ್ಲಿ ಟ್ರಾಫಿಕ್ ನಿಯಂತ್ರಣ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿ, ವಾಹನಗಳ ಸಂಚಾರ ಸರಾಗಗೊಳಿಸುವ ಸಲುವಾಗಿ ಗೊಟ್ಟಿಗೆರೆ ಮಂಜು ಅವರ ಕಾರನ್ನು ಹ್ಯಾಂಡ್ ಸಿಗ್ನಲ್ ಮೂಲಕ ನಿಲ್ಲಿಸಲು ಸೂಚಿಸಿದ್ದಾರೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಮಂಜು, “ನನ್ನ ಗಾಡಿಯನ್ನೇ ಸ್ಟಾಪ್ ಮಾಡ್ತೀಯಾ?” ಎಂದು ಪ್ರಶ್ನಿಸಿ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂದು ವರದಿಯಾಗಿದೆ.

ವಾಗ್ವಾದದ ವೇಳೆ ಪೊಲೀಸ್ ಸಿಬ್ಬಂದಿಯ ಕೊರಳಪಟ್ಟಿ ಹಿಡಿದು ಹಲ್ಲೆಗೆ ಮುಂದಾಗಿದ್ದರು ಎನ್ನಲಾಗಿದ್ದು, ಕಾಲಿನಿಂದ ಹೊಡೆಯಲು ಯತ್ನಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ಮುಂದಿನ ಕ್ರಮದ ಬಗ್ಗೆ ಮಾಹಿತಿ ನಿರೀಕ್ಷಿಸಲಾಗಿದೆ.

ಇದೇ ವೇಳೆ ಬೆಂಗಳೂರಿನ ಭಟ್ಟರಹಳ್ಳಿ ಬಳಿ ಟ್ರಾಫಿಕ್ ನಿರ್ವಹಣೆ ಮಾಡುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ ಕೆಲವರು ಅನುಚಿತವಾಗಿ ವರ್ತಿಸಿದ ಆರೋಪವೂ ಕೇಳಿಬಂದಿದೆ.ಮಂಜುನಾಥ್ ಎಂಬ ಸಿಬ್ಬಂದಿ ಟ್ರಾಫಿಕ್ ನಿರ್ವಹಣೆ ಮಾಡುತ್ತಿದ್ದ ವೇಳೆ ಹೇಮಂತ್ ರೆಡ್ಡಿ, ರಾಧಾಕೃಷ್ಣ ರೆಡ್ಡಿ, ಹರ್ಷಿತ್ ರೆಡ್ಡಿ ಹಾಗೂ ರಾಹುಲ್ ಎಂಬವರು ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಮಹಿಳಾ ಪಿಎಸ್ಐ ನಯನಾ ಸ್ಥಳಕ್ಕೆ ಆಗಮಿಸಿದ್ದರು.
ಜಗಳ ಬಿಡಿಸಲು ಮುಂದಾದ ವೇಳೆ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಲ್ಲದೆ, ಬಾಡಿ ಶೇಮಿಂಗ್ ಮಾಡಿದ ಆರೋಪವೂ ಕೇಳಿಬಂದಿದೆ. ಘಟನೆಯ ಕೆಲವು ದೃಶ್ಯಗಳು ಬಾಡಿ-ವೋರ್ನ್ ಕ್ಯಾಮೆರಾದಲ್ಲಿ ಸೆರೆಯಾಗಿವೆ ಎನ್ನಲಾಗಿದೆ.
ಈ ಸಂಬಂಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.ಒಂದೇ ದಿನದಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆಯ ಎರಡು ಪ್ರತ್ಯೇಕ ಘಟನೆಗಳು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.






