ಜಾತ್ಯತೀತ ಜನತಾದಳದ (ಜೆಡಿಎಸ್) ಸಂಘಟನೆಗಾಗಿ ಪಕ್ಷದ ನಾಯಕರ ಸಂಘಟಿತ ಹೋರಾಟ ಅಗತ್ಯವಿದೆ. ಅದಕ್ಕಾಗಿ ಇದೇ 15ರ ನಂತರ ಪಕ್ಷ ಸಂಘಟನೆಗಾಗಿ ಪಕ್ಷದ ಮುಖಂಡರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಮುಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ, ಪಕ್ಷ ಸಂಘಟನೆ ಹಾಗೂ ನೂತನ ಕೋರ್ ಕಮಿಟಿ ರಚನೆ ಸೇರಿದಂತೆ ಹಲವು ವಿಷಯಗಳ ಚರ್ಚೆಗಾಗಿ ಸೋಮವಾರ (ಆಗಸ್ಟ್ 7) ನಗರದಲ್ಲಿ ಆಯೋಜಿಸಿದ್ದ ಪಕ್ಷದ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆಯ ಬಗ್ಗೆ ಎದೆಗುಂದದೆ ಪಕ್ಷದ ಸಂಘಟನೆ ಕಡೆ ಹೆಚ್ಚು ಗಮನ ನೀಡಬೇಕು ಎಂದು ಎಚ್.ಡಿ.ದೇವೇಗೌಡ ತಾಕೀತು ಮಾಡಿದ್ದಾರೆ.
ಮಾಜಿ ಸಚಿವರಾದ ಜಿ.ಟಿ ದೇವೇಗೌಡರ ಅಧ್ಯಕ್ಷತೆಯಲ್ಲಿ ನೂತನ ಕೋರ್ ಕಮಿಟಿ ರಚನೆಗೆ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು. ಮಾಜಿ ಶಾಸಕರಾದ ವೈ ಎಸ್ ವಿ ದತ್ತಾ ಅವರು ಈ ಕಮಿಟಿಗೆ ಸಂಚಾಲಕರಾಗಿರುತ್ತಾರೆ. ಒಟ್ಟು 20 ಸದಸ್ಯರು ಕಮಿಟಿಯಲ್ಲಿ ಇರುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
“ಪಕ್ಷದ ಸಂಘಟನೆ ಹಾಗೂ ಲೋಕಸಭೆ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ನಿಟ್ಟಿನಲ್ಲಿ ಆಗಸ್ಟ್ 15ರ ನಂತರ ರಾಜ್ಯಾಧ್ಯಂತ ಪಕ್ಷದ ಪ್ರಮುಖ ಮುಖಂಡರು ಪ್ರವಾಸ ಮಾಡಲಿದ್ದಾರೆ. ಎಚ್.ಡಿ.ದೇವೇಗೌಡ, ನಾನೂ ಸೇರಿ ಪಕ್ಷದ ಬಹುತೇಕ ಹಿರಿಯ ನಾಯಕರು ಪ್ರವಾಸ ಕೈಗೊಳ್ಳಲಿದ್ದಾರೆ” ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.
“ನಮ್ಮ ಹೋರಾಟ ಸಂಘಟಿರವಾಗಿರಬೇಕು ಹಾಗೂ ವಿಷಯಾಧಾರಿತ ಆಗಿರಬೇಕು. ಜನಪರವಾಗಿ ಇರಬೇಕು ಎಂದು ರಾಷ್ಟ್ರೀಯ ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ. ಅದರಂತೆ ನಾವು ಹೋರಾಟ ಮಾಡುತ್ತೇವೆ: ಎಂದು ಅವರು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಯಾರ ಜಾಯಮಾನ ಏನು ಅಂತ ನಾಳೆ ಮಾತನಾಡೋಣ ; ಡಿಸಿಎಂ ಡಿ.ಕೆ.ಶಿವಕುಮಾರ್
ಅಲ್ಲದೆ, ಪಕ್ಷದ ವಿವಿಧ ವಿಭಾಗಗಳಿಗೆ ಮುಖ್ಯಸ್ಥರನ್ನು ನೇಮಕ ಮಾಡುವ ಬಗ್ಗೆಯೂ ಎಚ್.ಡಿ.ದೇವೇಗೌಡ ಅವರ ನೇತೃತ್ವದ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಸಭೆಯಲ್ಲಿ ಹಿರಿಯ ನಾಯಕರಾದ ಬಂಡೆಪ್ಪ ಕಾಷೆಂಪೂರ್, ಎಚ್.ಕೆ.ಕುಮಾರಸ್ವಾಮಿ, ಅಲ್ಕೊಡ್ ಹನುಮಂತಪ್ಪ, ಸುರೇಶಗೌಡ, ಅನ್ನದಾನಿ, ನಿಸರ್ಗ ನಾರಾಯಣಸ್ವಾಮಿ, ಕೆ.ಎನ್.ತಿಪ್ಪೇಸ್ವಾಮಿ, ನೆಮಿರಾಜ್ ನಾಯ್ಕ, ವೈಎಸ್ ವಿ ದತ್ತಾ, ಲಿಂಗೇಶ್, ಅಪ್ಪಾಜಿ ಗೌಡ, ವೀರಭದ್ರಯ್ಯ ಹಾಲರವಿ, ಮಾಗಡಿ ಮಂಜುನಾಥ್, ಸೂರಜ್ ನಾಯಕ್ ಸೋನಿ, ತಿಮ್ಮರಾಯಪ್ಪ, ದೊಡ್ಡನಗೌಡ ಪಾಟೀಲ್, ಅಶ್ವಿನ್ ಕುಮಾರ್, ಚೌಡರೆಡ್ಡಿ, ಶ್ರೀಕಂಠೇಗೌಡ ಮತ್ತು ಇತರ ನಾಯಕರು ಇದ್ದರು.