ಕೋಲಾರ : ಹೂಡಿ ವಿಜಯ್ ಕುಮಾರ್ ಅವರ ಸೇರ್ಪಡೆಯಿಂದ ಜೆಡಿಎಸ್ ಪಕ್ಷಕ್ಕೆ ಮಾಲೂರು ಕ್ಷೇತ್ರದಲ್ಲಿ ಮಾತ್ರವಲ್ಲ, ಇಡೀ ರಾಜ್ಯದ ಮಟ್ಟದಲ್ಲಿಯೂ ಶಕ್ತಿ ದೊರೆಯಲಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಮಾಲೂರು ಕ್ಷೇತ್ರದ ಹೂಡಿ ವಿಜಯ್ ಕುಮಾರ್ ಹಾಗೂ ಅವರ ಬೆಂಬಲಿಗರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ನಂತರ ಅವರು ಮಾತನಾಡಿದರು. ಪಕ್ಷವನ್ನು ಬಲಿಷ್ಠವಾಗಿ ಕಟ್ಟುವ ಉದ್ದೇಶದಿಂದ ವಿವಿಧ ನಾಯಕರು ಮತ್ತು ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕೋಲಾರ ಲೋಕಸಭೆ ಕ್ಷೇತ್ರದಲ್ಲಿ ಮಲ್ಲೇಶ್ ಬಾಬು ಅವರು ಆಯ್ಕೆಯಾಗಿದ್ದಾರೆ. ಆದರೆ ಮಾಲೂರು ಕ್ಷೇತ್ರದಲ್ಲಿ ಅವರಿಗೆ ದೊರೆತಿರುವ ಲೀಡ್ ಬಗ್ಗೆ ತೃಪ್ತಿ ಇಲ್ಲ ಎಂದು ಹೇಳಿದರು. ನನ್ನ ಅಭಿಪ್ರಾಯದಲ್ಲಿ ಮಾಲೂರು ಕ್ಷೇತ್ರದಲ್ಲೇ ಕನಿಷ್ಠ 70 ಸಾವಿರಕ್ಕೂ ಹೆಚ್ಚು ಲೀಡ್ ಬರಬೇಕಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಇದರ ಬಗ್ಗೆ ಪಕ್ಷದ ಒಳಗೆ ಅವಲೋಕನ ಮಾಡಿಕೊಳ್ಳಬೇಕಿದೆ. ಲೀಡ್ ಕಡಿಮೆಯಾಗಲು ಕಾರಣವಾದ ವಿಚಾರಗಳನ್ನು ಕೆಲವರ ಆತ್ಮಸಾಕ್ಷಿಗೆ ಬಿಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ರಾಜಕೀಯವಾಗಿ ನಿರ್ಲಕ್ಷ್ಯಕ್ಕೆ ಒಳಗಾದ ಅನೇಕ ಸಮುದಾಯಗಳನ್ನು ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರು ಮೇಲಕ್ಕೆತ್ತಿದವರು. ಸಾಮಾಜಿಕ ನ್ಯಾಯದ ವಿಚಾರದಲ್ಲಿ ಅವರು ಸದಾ ಬದ್ಧರಾಗಿದ್ದಾರೆ. ಇದೇ ನಂಬಿಕೆಯಿಂದ ಹೂಡಿ ವಿಜಯ್ ಕುಮಾರ್ ಅವರಂತಹ ನಾಯಕರು ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಮುಂದೆಯೂ ಸಾಮಾಜಿಕ ನ್ಯಾಯದ ತತ್ವದ ಆಧಾರದ ಮೇಲೆಯೇ ಪಕ್ಷವನ್ನು ಕಟ್ಟಲಾಗುತ್ತದೆ ಎಂದು ಅವರು ತಿಳಿಸಿದರು.






