ಬೆಂಗಳೂರು, ಆಗಸ್ಟ್ 31: ಬೆಂಗಳೂರು ಅಭಿವೃದ್ಧಿಯ ಹಿಂದೆ ಸಾವಿರಾರು ರೈತರು ಹಾಗೂ ಭೂ ಮಾಲೀಕರ ತ್ಯಾಗವಿದೆ. ಅಭಿವೃದ್ಧಿಗಾಗಿ ಭೂಮಿ ನೀಡಿದವರ ಕುಟುಂಬಗಳ ಬದುಕು ಕೂಡ ಅಭಿವೃದ್ಧಿಯಾಗಬೇಕು. ಅಭಿವೃದ್ಧಿಯ ಫಲದಲ್ಲಿ ಅವರಿಗೆ ನ್ಯಾಯಯುತ ಪಾಲು ಸಿಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.ಬೆಂಗಳೂರು ನೆಹರೂ ತಾರಾಲಯದ ಯು.ಆರ್. ಭವನದಲ್ಲಿ ನಡೆದ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ಭೂ ಮಾಲೀಕರಿಗೆ ನಿವೇಶನ ಹಂಚಿಕೆ ಪತ್ರ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭೂಮಿ ನೀಡಿದ ರೈತರ ಕೊಡುಗೆಯನ್ನು ಸರ್ಕಾರ ಎಂದಿಗೂ ಮರೆಯುವುದಿಲ್ಲ. ಅವರ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ ಎಂದರು.
ಇದು ಕೇವಲ ನಿವೇಶನ ಪತ್ರ ವಿತರಿಸುವ ಕಾರ್ಯಕ್ರಮವಲ್ಲ. ಹಲವು ವರ್ಷಗಳಿಂದ ಕಾಯುತ್ತಿದ್ದ ಭೂ ಮಾಲೀಕರ ನಿರೀಕ್ಷೆಗಳಿಗೆ ಉತ್ತರ ನೀಡುವ ದಿನ. ಬೆಂಗಳೂರಿನ ಅಭಿವೃದ್ಧಿಗಾಗಿ ಭೂಮಿ ನೀಡಿದವರಿಗೆ ಅಭಿವೃದ್ಧಿಯಲ್ಲೇ ಪಾಲು ನೀಡುವ ದಿನವಾಗಿದೆ ಎಂದು ಹೇಳಿದರು.
ಡಾ. ಕೆ. ಶಿವರಾಮ ಕಾರಂತ ಬಡಾವಣೆ ಯೋಜನೆ ಹಲವು ವರ್ಷಗಳಿಂದ ಭೂಸ್ವಾಧೀನ, ಕಾನೂನು ವ್ಯಾಜ್ಯ ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳಿಂದಾಗಿ ವಿಳಂಬವಾಗಿತ್ತು. ನ್ಯಾಯಾಲಯದ ನಿರ್ದೇಶನ ಹಾಗೂ ಕಾನೂನು ಪ್ರಕ್ರಿಯೆಗಳನ್ನು ಗೌರವಿಸುತ್ತಲೇ ಅರ್ಹ ಭೂ ಮಾಲೀಕರ ಹಕ್ಕುಗಳನ್ನು ರಕ್ಷಿಸುವ ಕೆಲಸವನ್ನು ಸರ್ಕಾರ ಮಾಡಿದೆ. ದಾಖಲೆಗಳ ಆಧಾರದ ಮೇಲೆ ಅರ್ಹರಿಗೆ ಅವರ ಹಕ್ಕುಗಳನ್ನು ನೀಡುವುದು ಸರ್ಕಾರದ ಉದ್ದೇಶವಾಗಿದೆ ಎಂದರು.
ಬಡಾವಣೆಯ ರಸ್ತೆಯೊಂದಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರಿಡಲಾಗುವುದು. ಇದೇ ವೇಳೆ ಬಡಾವಣೆಗೆ ಭೂಮಿ ನೀಡಿದ ಪ್ರತಿಯೊಬ್ಬರ ಹೆಸರನ್ನೂ ಶಾಶ್ವತವಾಗಿ ನೆನಪಿನಲ್ಲಿ ಉಳಿಸುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
‘ನಿವೇಶನಗಳನ್ನು ಈಗಲೇ ಮಾರಾಟ ಮಾಡಬೇಡಿ’
ಭೂ ಮಾಲೀಕರಿಗೆ ತಮ್ಮ ನಿವೇಶನಗಳನ್ನು ಈಗಲೇ ಮಾರಾಟ ಮಾಡದಂತೆ ಸಲಹೆ ನೀಡಿದ ಡಿ.ಕೆ. ಶಿವಕುಮಾರ್, ಮುಂದಿನ ದಿನಗಳಲ್ಲಿ ನಿವೇಶನಗಳ ಮೌಲ್ಯ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದರು.
ಡಾ. ಕೆ. ಶಿವರಾಮ ಕಾರಂತ ಬಡಾವಣೆಯಲ್ಲಿ ಒಟ್ಟು 24,714 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಈ ಪೈಕಿ 18,399 ನಿವೇಶನಗಳನ್ನು ರೈತರು ಮತ್ತು ಭೂ ಮಾಲೀಕರಿಗೆ ನೀಡಲಾಗಿದೆ. 3,500 ರೆವಿನ್ಯೂ ನಿವೇಶನಗಳು ಹಾಗೂ 2,815 ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
ಬಡಾವಣೆಯಲ್ಲಿ 40:60 ಅಭಿವೃದ್ಧಿ ಮಾದರಿ ಅನುಸರಿಸಲಾಗಿದ್ದು, ಒಂದು ಎಕರೆ ಭೂಮಿಗೆ 9,583 ಚದರ ಅಡಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ಭೂ ಮಾಲೀಕರಿಗೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಬಡಾವಣೆಯ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕ ಮೂಲಸೌಕರ್ಯಕ್ಕಾಗಿ ಕಾರ್ನರ್ ಸೈಟ್, ಕಮರ್ಷಿಯಲ್ ಸೈಟ್, ಸಿಎ ಸೈಟ್, ಪಾರ್ಕ್ ಹಾಗೂ ಅಗಲವಾದ ರಸ್ತೆಗೆ ಹೊಂದಿಕೊಂಡಿರುವ ಕೆಲವು ನಿವೇಶನಗಳನ್ನು ಭೂ ಮಾಲೀಕರಿಗೆ ನೀಡಲು ಸಾಧ್ಯವಾಗುವುದಿಲ್ಲ. ನಗರ ಯೋಜನೆಯ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಪ್ರತ್ಯೇಕವಾಗಿ ಪರಿಗಣಿಸಲಾಗಿದೆ ಎಂದರು.ತಾನು ರೈತನ ಮಗನಾಗಿದ್ದು, ರೈತರ ಕಷ್ಟಗಳ ಅರಿವಿದೆ. ಅಭಿವೃದ್ಧಿಗಾಗಿ ಭೂಮಿ ನೀಡುವ ಪ್ರತಿಯೊಬ್ಬರಿಗೂ ನ್ಯಾಯ ದೊರಕಬೇಕು. ಇದು ತಮ್ಮ ಸರ್ಕಾರದ ‘ಭೂ ಗ್ಯಾರಂಟಿ’ ಯೋಜನೆಯ ಭಾಗವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರು ಸುತ್ತಮುತ್ತ ಜಮೀನು ಹೊಂದಿರುವ ಕೆಲವರು ತಮ್ಮನ್ನು ರೈತರ ಮಕ್ಕಳು ಎಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ಯಾವುದಾದರೂ ಸರ್ಕಾರಿ ಯೋಜನೆಗಾಗಿ ತಮ್ಮ ಜಮೀನು ಬಿಟ್ಟುಕೊಟ್ಟಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.ಶಿವರಾಮ ಕಾರಂತ ಬಡಾವಣೆ ಕುಮಾರಸ್ವಾಮಿ ಅವರ ಕಾಲದಲ್ಲೇ ಆರಂಭವಾಗಿತ್ತು. ತಾವು ಬಿಡಿಎ ಜವಾಬ್ದಾರಿ ವಹಿಸಿಕೊಂಡಾಗ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿತ್ತು ಎಂದು ಆರೋಪಿಸಿದ ಅವರು, ಪೆರಿಫೆರಲ್ ರಿಂಗ್ ರಸ್ತೆ ಸೇರಿದಂತೆ ಹಲವು ಯೋಜನೆಗಳಿಗೆ ಸಂಬಂಧಿಸಿದಂತೆ ಭೂಸ್ವಾಧೀನ ವಿಚಾರದಲ್ಲೂ ಟೀಕೆ ಮಾಡಿದರು.
ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು, ನಗರದಲ್ಲಿ ಜನಸಂಖ್ಯೆ ಹಾಗೂ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಸಂಚಾರ ದಟ್ಟಣೆ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. “ಭೂಮಿ ನಿಮ್ಮದು, ತ್ಯಾಗ ನಿಮ್ಮದು, ಅಭಿವೃದ್ಧಿ ಬೆಂಗಳೂರಿನದ್ದು” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರು ಉತ್ತರ ಭಾಗದ 17 ಗ್ರಾಮಗಳ ವ್ಯಾಪ್ತಿಯಲ್ಲಿ ಬಿಡಿಎ ವತಿಯಿಂದ ಡಾ. ಕೆ. ಶಿವರಾಮ ಕಾರಂತ ಬಡಾವಣೆ ನಿರ್ಮಿಸಲಾಗಿದೆ. ಸುಮಾರು 3,000 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ಬಡಾವಣೆಯಲ್ಲಿ ಭೂ ಮಾಲೀಕರಿಗೆ ಸುಮಾರು 3 ಕೋಟಿ ಚದರ ಅಡಿ ವಿಸ್ತೀರ್ಣದ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ.
ಭೂ ಮಾಲೀಕರ ಒಟ್ಟು ಸಂಖ್ಯೆ 3,886 ಹಾಗೂ ರೆವಿನ್ಯೂ ನಿವೇಶನದಾರರ ಸಂಖ್ಯೆ 3,500 ಆಗಿದ್ದು, ಒಟ್ಟಾರೆ ಸುಮಾರು ₹16,419.89 ಕೋಟಿ ವೆಚ್ಚದಲ್ಲಿ ಬಡಾವಣೆ ಅಭಿವೃದ್ಧಿಪಡಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ವಹಿಸಿದ್ದರು. ಗ್ರೇಟರ್ ಬೆಂಗಳೂರು ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ಎಸ್.ಆರ್. ವಿಶ್ವನಾಥ್, ಎಸ್. ಮುನಿರಾಜು, ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್ ಪಿ. ಸೇರಿದಂತೆ ಬಿಡಿಎ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.






