ಗಣಿಗಾರಿಕೆಗೆ ಸಂಬಂಧಿಸಿದಂತೆ ಕಾನೂನಿನಲ್ಲಿ ಇರುವ ತೊಡಕುಗಳನ್ನು ನಿವಾರಿಸಿ, ನಿಯಮಗಳನ್ನು ಸರಳಿಕರಣ ಮಾಡುವ ಬಗ್ಗೆ ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರುವದಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿ ಜಿಲ್ಲೆಯ ಗಣಿಗಾರಿಕೆ ಸಂಘಗಳ ಪ್ರತಿನಿಧಿಗಳೊಂದಿಗೆ ಬೆಂಗಳೂರಿನಲ್ಲಿ ಶನಿವಾರ (ಸೆಪ್ಟೆಂಬರ್ 2) ನಡೆದ ಸಭೆಯಲ್ಲಿ ಸಂಘದ ಅಧ್ಯಕ್ಷರಾದ ಪ್ರಕಾಶ್ ಜೈನ್ ಹಾಗೂ ಪದಾಧಿಕಾರಿಗಳು ಪಾಲ್ಗೊಂಡು ಗಣಿ ಉದ್ದಿಮೆಯಲ್ಲಿ ತೊಡಗಿರುವವರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.
![ಪ್ರಿಯಾಂಕ್ ಖರ್ಗೆ](https://pratidhvani.com/wp-content/uploads/2023/09/proakaa-1024x601.jpeg)
ಶಿಲಾ ಗಣಿಗಾರಿಕೆಗೆ ಸಂಬಂಧಿಸಿದಂತೆ ಡ್ರೋಣ್ ಸರ್ವೆ ಹಾಗೂ ಸರಕು ಸಾಗಣಿಕೆ ವಾಹನಗಳನ್ನು ಜಿಪಿಎಸ್ ವ್ಯವಸ್ಥೆಗೆ ಒಳಪಡಿಸುವ ಕ್ರಮವನ್ನುಹಿಂದಕ್ಕೆ ಪಡೆಯಬೇಕೆಂದು ಸಂಘದ ಅಧ್ಯಕ್ಷರು ಒತ್ತಾಯಿಸಿದರು. ಆದರೆ, ಸರ್ಕಾರ ನಿಗದಿಪಡಿಸಿರುವ ನಿಯಮಗಳಂತೆ ಈ ಎರಡೂ ಕ್ರಮಗಳಿಗೆ ಗಣಿ ಗುತ್ತಿಗೆದಾರರು ಬಾಧ್ಯರಾಗಿರಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಗಿರೀಶ್ ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ವಿಡಿಯೋ ಸಮಾವೇಶದ ಮೂಲಕ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಲ್ಲಾ ರಕ್ಷಣಾಧಿಕಾರಿ ಇಶಾಪಂತ್ ಪಾಲ್ಗೊಂಡಿದ್ದರು.