ಬೆಂಗಳೂರು : ಮೈಸೂರು ದಸರಾದ ವೇಳೆ ಕಂಬಳವನ್ನು ಆಯೋಜಿಸುವ ವಿಚಾರದಲ್ಲಿ ಈಗಾಗಲೇ ರಾಜಕೀಯ ಜಟಾಪಟಿ ಜೋರಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ತಮ್ಮದೇ ಆದ ರೀತಿಯಲ್ಲಿ ಹೇಳಿಕೆಗಳನ್ನು ನೀಡುವ ಮೂಲಕ ಇಡೀ ಹಬ್ಬದ ವಿಷಯವನ್ನು ರಾಜಕೀಯಕ್ಕೆ ಬಳಸಲು ಮುಂದಾದಂತೆ ಕಂಡು ಬರುತ್ತಿದೆ.

ಇನ್ನೂ ಇದೇ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಪರಂಪರಾಗತವಾಗಿ ತನ್ನದೇ ಆದ ವೈಶಿಷ್ಟ್ಯದಿಂದ ಕಂಗೊಳಿಸುತ್ತಿರುವ ಮೈಸೂರು ದಸರಾ ಉತ್ಸವದಲ್ಲಿ ಕಂಬಳವನ್ನು ಸೇರಿಸುವ ಅಗತ್ಯವಿಲ್ಲ. ಈವರೆಗೂ ನಡೆದುಕೊಂಡು ಬಂದಿರುವ ದಸರಾಕ್ಕೆ ಧಕ್ಕೆ ತರುವ ಪ್ರಯತ್ನ ಖಂಡಿತ ಬೇಡ ಎಂದು ಹೇಳಿದ್ದಾರೆ.
ಕಂಬಳವು ಕರಾವಳಿ ಭಾಗದ ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ನಂಬಿಕೆಯ ಪ್ರತೀಕ. ಭೌಗೋಳಿಕವಾಗಿ ಆ ಭಾಗಕ್ಕೆ ಮಾತ್ರ ಸರಿಹೊಂದುವ ಆಚರಣೆಯೂ ಹೌದು. ಅದನ್ನು ಮೈಸೂರಿಗೆ ತಂದು ದೈವಿಕ ಹಿನ್ನೆಲೆಯ ಆ ಪರಂಪರೆ, ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಒಪ್ಪಲಾಗದು. ಕರಾವಳಿ ಪ್ರದೇಶ ಹಸಿರು ಮತ್ತು ನೀರಿನ ಸಂಗಮ. ಇಂಥ ಪ್ರಾಕೃತಿಕ ಹಿನ್ನೆಲೆಯಲ್ಲಿ ಕಂಬಳವನ್ನು ಕಣ್ತುಂಬಿಕೊಳ್ಳುವುದೇ ಧನ್ಯತೆಯ ಅನುಭವ ಎನ್ನುವುದು ನನ್ನ ಭಾವನೆ. ಹೀಗಾಗಿ ಮೈಸೂರು ಮತ್ತು ಕರಾವಳಿ ಜನರ ಭಾವನೆಗಳಿಗೆ ನೋವುಂಟು ಮಾಡುವುದು ಬೇಕಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ಇದನ್ನೂ ಓದಿ : ಜನಾರ್ದನ ರೆಡ್ಡಿಗೆ ನಾಯ್ಡು ಸರ್ಕಾರದ ಶಾಕ್ : ಬ್ರಾಹ್ಮಣಿ ಸ್ಟೀಲ್ಸ್ಗೆ ನೀಡಿದ್ದ ಜಮೀನು ವಾಪಸ್..!
ಪೊಲೀಸರ ವರ್ತನೆ ಉಗ್ರವಾಗಿ ಖಂಡಿಸುತ್ತೇನೆ..
ಬಿಡದಿ ರೈತರಿಗೆ ಮರಣಶಾಸನ ಬರೆಯಲು ಹೊರಟಿರುವ ರಾಜ್ಯ ಸರಕಾರ, ತನಗೆ ಕೃಷಿಗಿಂತ ರಿಯಲ್ ಎಸ್ಟೇಟ್ ಮುಖ್ಯ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಟ್ರ್ಯಾಕ್ಟರ್’ಗಳ ಮೂಲಕ ಪ್ರತಿಭಟನೆ ನಡೆಸಲು ಬಂದ ಅನ್ನದಾತರ ಮೇಲೆ ಪೊಲೀಸರು ದರ್ಪ ತೋರಿಸಿರುವುದು ನಿರಂಕುಶತೆಯ ಪರಮಾವಧಿ. ಪೊಲೀಸರ ವರ್ತನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಲಾಠಿಗಳಿಂದ ಹೋರಾಟವನ್ನು ಹತ್ತಿಕ್ಕುತ್ತೇವೆ ಎನ್ನುವುದು ಕೇವಲ ಭ್ರಮೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ..






