ಶಿವಮೊಗ್ಗದಲ್ಲಿ ನಡೆದ ಸಿಆರ್ ಪಿಎಫ್ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಸಂಪೂರ್ಣ ಹಿಂದಿ ಬ್ಯಾನರುಗಳನ್ನು ಬಳಸಿ, ಹಿಂದಿಯಲ್ಲೇ ನಿರೂಪಣೆ ಮಾಡಿರುವುದು ಕನ್ನಡ ಪರ ಸಂಘಟನೆಗಳ ಹಾಗೂ ಇತರ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಈ ಕುರಿತಾಗಿ ಖಾರವಾಗಿ ಪ್ರತಿಕ್ರಿಯಿಸಿರುವ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ನಾರಾಯಣಗೌಡ ಅವರು, ಇದು ಕನ್ನಡಿಗರಿಗೆ ಮಾಡಿರುವ ದ್ರೋಹ ಎಂದಿದ್ದಾರೆ.
“ಕನ್ನಡಿಗರ ಮೇಲೆ ಹಿಂದಿ ಸಾಮ್ರಾಜ್ಯಶಾಹಿಗಳು ಹೂಡಿರುವ ಪರೋಕ್ಷ ಯುದ್ಧ. ಕನ್ನಡತನವನ್ನು ನಾಶಗೊಳಿಸುವ ವ್ಯವಸ್ಥಿತ ದಾಳಿ. ಇದನ್ನು ಕನ್ನಡಿಗರೆಲ್ಲರೂ ಒಟ್ಟಾಗಿ ಖಂಡಿಸಬೇಕಿದೆ. ಕನ್ನಡನಾಡಲ್ಲಿ ಕನ್ನಡವನ್ನೇ ಬಳಸಬೇಕೆಂಬುದು ಯಾವುದೇ ಸರ್ಕಾರಕ್ಕೆ ಇರಬೇಕಾದ ಸಾಮಾನ್ಯ ಪ್ರಜ್ಞೆ. ಇದು ಅವರಿಗೆ ಗೊತ್ತಿಲ್ಲವೆಂದೇನಿಲ್ಲ. ಉದ್ದೇಶಪೂರ್ವಕವಾಗಿಯೇ ಕನ್ನಡಿಗರ ಮೇಲೆ ಹಿಂದಿಯನ್ನು ಹೇರುತ್ತಿರುವ ಈ ದುರಹಂಕಾರವನ್ನು ಕನ್ನಡಿಗರು ಸಹಿಸಬೇಕಿಲ್ಲ,” ಎಂದಿದ್ದಾರೆ.
“ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದಿಯಾಗಿ ಹಲವಾರು ಸಚಿವ ಸಂಪುಟದ ಸದಸ್ಯರು ಭಾಗವಹಿಸಿದ್ದರು. ಯಾರೊಬ್ಬರಿಗೂ ಸಹ ಈ ಕನ್ನಡವಿಲ್ಲದ ಹಿಂದೀಮಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಮುಜುಗರ, ನಾಚಿಕೆ ಆಗಲಿಲ್ಲವೇ? ಇವರೆಲ್ಲರೂ ತಮ್ಮ ಕನ್ನಡತನವನ್ನು ದಿಲ್ಲಿ ಹಿಂದೀವಾಲಾಗಳಿಗೆ ಅಡವಿಟ್ಟಿದ್ದಾರೆಯೇ?”, ಎಂದು ನಾರಾಯಣಗೌಡ ಅವರು ಕಿಡಿಕಾರಿದ್ದಾರೆ.
ಹಿಂದೀ ಸಾಮ್ರಾಜ್ಯಶಾಹಿ ಹಿಂದೆಂದಿಗಿಂತಲೂ ಇಂದು ಆಕ್ರಮಣಕಾರಿಯಾಗಿದೆ. ಕನ್ನಡಿಗರೇ, ಏನು ಮಾಡ್ತೀರೋ ಮಾಡಿ ನೋಡೋಣ ಎಂದು ಸವಾಲು ಹಾಕುತ್ತಿದೆ. ಈ ಸವಾಲನ್ನು ನಾವು ಎದುರಿಸುತ್ತೇವೆ. ಕನ್ನಡ ನೆಲವನ್ನು, ಕನ್ನಡಿಗರ ಅಸ್ಮಿತೆಯನ್ನು ಉಳಿಸಿಕೊಳ್ಳುತ್ತೇವೆ. ಈ ಮರಾಮೋಸದ ಸಮರದಲ್ಲಿ ಗೆದ್ದೇಗೆಲ್ಲುತ್ತೇವೆ, ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನು ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿರುವ ಮಾಜಿ ಮುಖ್ಯಮಮತ್ರಿ ಹೆಚ್ ಡಿಕುಮಾರಸ್ವಾಮಿಯವರು, ಕಾರ್ಯಕ್ರಮದಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ.
“ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ,ಕನ್ನಡಿಗರಿಗೆ ಮಾಡಿದ ಅಗೌರವ.ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ,” ಎಂದಿದ್ದಾರೆ.
ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ. ಕೇಂದ್ರ ಸರ್ಕಾರದ ಅಧೀನದಲ್ಲಿರುವ RAF ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ, ಎಂದು ಟೀಕಿಸಿದ್ದಾರೆ.
“ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು. ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ,” ಎಂದು ಹೆಚ್ಡಿಕೆ ಗರಂ ಆಗಿದ್ದಾರೆ.






