ರಾಜ್ಯ ವಿಧಾನಸಭಾ ಚುನಾವಣೆಯು ಬಿಜೆಪಿಯ ಪಾಲಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದ್ದು ಹೇಗಾದರೂ ಮಾಡಿ ಅಧಿಕಾರ ಗದ್ದುಗೆಯನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿದೆ. ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ತಮ್ಮ ಭಾಗಶಃ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಆದರೆ ಚುನಾವಣೆಗೆ ದಿನಾಂಕ ಘೋಷಣೆಯಾಗಿ ವಾರಗಳೇ ಕಳೆದು ಪ್ರಚಾರಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದರೂ ಸಹ ಬಿಜೆಪಿ ಮಾತ್ರ ಇನ್ನೂ ತನ್ನ ಅಭ್ಯರ್ಥಿಗಳ ಒಂದೂ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ.
ಅಭ್ಯರ್ಥಿಗಳ ಘೋಷಣೆಗೂ ಮುನ್ನ ಬಿಜೆಪಿಯು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ ಎನ್ನಲಾಗಿದೆ. ಪ್ರತಿಯೊಂದು ಕ್ಷೇತ್ರದಿಂದಲೂ ಆಂತರಿಕ ಸಮೀಕ್ಷೆಯ ವರದಿಯನ್ನು ತರಿಸಿಕೊಳ್ಳುತ್ತಿರುವ ಬಿಜೆಪಿ ಅಳೆದು ತೂಗಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ತಂತ್ರದಲ್ಲಿದೆ ಎನ್ನಲಾಗಿದೆ.
ಈ ಬಾರಿ ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ನಿರೀಕ್ಷೆಯಿದ್ದು ಹೀಗಾಗಿ ಬಿಜೆಪಿಯಲ್ಲಿಯೂ ಬಂಡಾಯದ ಬೇಗುದಿ ಏಳುವ ಸಾಧ್ಯತೆಗಳು ದಟ್ಟವಾಗಿದೆ. ಇದೇ ಕಾರಣಕ್ಕೆ ಚುನಾವಣಾ ನಾಮನಿರ್ದೇಶನ ಪ್ರಕ್ರಿಯೆ ಆರಂಭಗೊಂಡ ಬಳಿಕ ಬಿಜೆಪಿ ತಮ್ಮ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿದರೆ ಯಾರಿಗೂ ಪಕ್ಷಾಂತರ ಮಾಡಲು ಅವಕಾಶ ಇರುವುದಿಲ್ಲ ಎಂಬುದೂ ಬಿಜೆಪಿ ಲೆಕ್ಕಾಚಾರವಾಗಿದೆ ಎನ್ನಲಾಗಿದೆ.
ಇಲ್ಲಿಯವರೆಗೆ ನಡೆದ ಸಮೀಕ್ಷೆಗಳಲ್ಲಿ ಕಾಂಗ್ರೆಸ್ಗೆ ಈ ಬಾರಿ ಗೆಲುವು ಎಂಬ ಫಲಿತಾಂಶಗಳು ಬಂದ ಹಿನ್ನೆಲೆಯಲ್ಲಿ ಬಿಜೆಪಿಯು ಜೆಡಿಎಸ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯ ಮೇಲೆ ಹದ್ದಿನ ಕಣ್ಣಿಟ್ಟಿದೆ ಎನ್ನಲಾಗಿದೆ. ಎರಡೂ ಪಕ್ಷಗಳ ಅಭ್ಯರ್ಥಿಗಳ ಪಟ್ಟಿಯನ್ನು ನೋಡಿಕೊಂಡು ಅವರ ವಿರುದ್ಧ ಗೆಲ್ಲುವ ಕುದುರೆಯನ್ನು ಕಣಕ್ಕಿಳಿಸುವುದು ಬಿಜೆಪಿಯ ಪ್ಲಾನ್ ಆಗಿದೆ.