ರಾಜ್ಯದಲ್ಲಿ ಅಗತ್ಯ ಸೇವೆ ಒದಗಿಸುವಂತ ಇಲಾಖೆಯ ಎಲ್ಲಾ ವರ್ಗದ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಬೇಕು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸಚಿವಾಲಯದಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಗ್ರಾಮೀಣಾಭೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ ಮಕ್ಕಳ ರಕ್ಷಣಾ ಸೇವೆಗಳನ್ನು ಒದಗಿಸುತ್ತಿರುವ ಮಕ್ಕಳ ರಕ್ಷಣಾ ನಿರ್ದೇಶನಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗತಕ್ಕದ್ದು.
ಮೇಲ್ಕಾಣಿಸಿದ ಇಲಾಖೆಗಳನ್ನು ಹೊರತುಪಡಿಸಿ, ಉಳಿದ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್-ಎ ವೃಂದದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕಚೇರಿಗೆ ಹಾಜರಾಗತಕ್ಕದ್ದು ಮತ್ತು ಗ್ರೂಪ್ ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ ಮತ್ತು ಸಿಬ್ಬಂದಿಗಳು ಶೇ.50ರಂತೆ ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗತಕ್ಕದ್ದು. ಮುಂದುವರೆದು ಇಲಾಖೆಯ ಕಾರ್ಯದರ್ಶಿಯವರು, ಇಲಾಖಾ ಮುಖ್ಯಸ್ಥರು ಇಚ್ಛಿಸಿದಲ್ಲಿ ಅವರು ಬಯಸುವಂತ ಅಧಿಕಾರಿ, ಸಿಬ್ಬಂದಿಗಳು ಯಾವುದೇ ಕಾರಣ ನೀಡದೇ ಕಚೇರಿಗೆ ಹಾಜರಾಗವುದು.
ಹೀಗೆ ಹಾಜರಾತಿಯಿಂದ ವಿನಾಯಿತಿ ನೀಡಲ್ಪಟ್ಟ ಗ್ರೂಪ್ ಬಿ, ಸಿ ಮತ್ತು ಡಿ ವೃಂದದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿ ಲಭ್ಯವಿರುವುದು ಹಾಗೂ ಕೋವಿಡ್-19 ಕರ್ತವ್ಯಕ್ಕಾಗಿ ನಿಯೋಜಿಸಿದ್ದಲ್ಲಿ ತಪ್ಪದೇ ಹಾಜರಾಗಿ, ಕರ್ತವ್ಯ ನಿರ್ವಹಿಸತಕ್ಕದ್ದು. ದೃಷ್ಠಿಹೀನ ಹಾಗೂ ಇತರೆ ದೈಹಿಕ ಅಂಗವೈಕಲ್ಯ ಹೊಂದಿರುವ ಅಧಿಕಾರಿ, ಸಿಬ್ಬಂದಿಗಳು ಮತ್ತು ಗರ್ಭಿಣಿ ಮಹಿಳಾ ಸಿಬ್ಬಂದಿಗಳು ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಈ ಸುತ್ತೋಲೆಯು ದಿನಾಂಕ 30-06-2021ರವರೆಗೆ ಅಸ್ತಿತ್ವದಲ್ಲಿರುತ್ತದೆ ಎಂದು ತಿಳಿಸಿದ್ದಾರೆ.