• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಸ್ವಚ್ಚ ಭಾರತದ ಸವಿಗನಸೂ ಪೌರಕಾರ್ಮಿಕರ ಬವಣೆಯೂ – ನಾ ದಿವಾಕರ

ನಾ ದಿವಾಕರ by ನಾ ದಿವಾಕರ
July 5, 2022
in ಅಭಿಮತ, ಕರ್ನಾಟಕ
0
ಸ್ವಚ್ಚ ಭಾರತದ ಸವಿಗನಸೂ ಪೌರಕಾರ್ಮಿಕರ ಬವಣೆಯೂ – ನಾ ದಿವಾಕರ
Share on WhatsAppShare on FacebookShare on Telegram

ತಳಮಟ್ಟದ ಜನಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಗಳಿಗೆ ಕಿವಿಗೊಡದಂತಿರುವುದು ನವ ಉದಾರವಾದದ ಆಡಳಿತ ವ್ಯವಸ್ಥೆಯಲ್ಲಿ ಬಹುಪಾಲು ಸ್ವೀಕೃತ ಧೋರಣೆಯಾಗಿದೆ. ಜಾಗತೀಕರಣದ ಜಗತ್ತು ಸೃಷ್ಟಿಸಿರುವ ಒಂದು ಸಾಮಾಜಿಕ ಹಿತವಲಯ ಎಲ್ಲ ವರ್ಗಗಳ ಜನರನ್ನೂ ಆಕ್ರಮಿಸಿಕೊಂಡಿದ್ದು, ಪ್ರಚಲಿತ ಆರ್ಥಿಕ ವ್ಯವಸ್ಥೆಯಲ್ಲಿ ತಮ್ಮ ಬದುಕಿನ ಗೋಡೆಗಳಿಂದಾಚೆಗಿನ ವಾಸ್ತವ ಪ್ರಪಂಚದತ್ತ ನೋಡದಂತೆ ಈ ಹಿತವಲಯದ ಮನಸುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಮಾರುಕಟ್ಟೆ ಬಂಡವಾಳ ವ್ಯವಸ್ಥೆಯ ಆರ್ಥಿಕ ಫಲಾನುಭವಿಗಳು ಮತ್ತು ಸಾಂವಿಧಾನಿಕ ಸವಲತ್ತುಗಳ ಸಾಮಾಜಿಕ ಫಲಾನುಭವಿಗಳು ಈ ಕಿವಿಗೊಡದ ಆಳುವ ವರ್ಗಗಳಿಗೆ ಒತ್ತಾಸೆಯಾಗಿ ನಿಲ್ಲುತ್ತಿರುವ ಈ ಹೊತ್ತಿನಲ್ಲಿ, ಸಮಸ್ತ ಜನತೆಯ ಉತ್ತಮ ಆರೋಗ್ಯಕ್ಕಾಗಿ ವಾತಾವರಣವನ್ನು ಸ್ವಚ್ಚವಾಗಿರಿಸಲು ಶ್ರಮಿಸುವ ಸಾವಿರಾರು ಕಾರ್ಮಿಕರು ತಮ್ಮ ನೌಕರಿಯ ಖಾಯಮಾತಿಗಾಗಿ ಹೋರಾಡುತ್ತಿದ್ದಾರೆ. ಭಾರತದ “ ಆಂದೋಲನ ಜೀವಿಗಳ ” ಪೈಕಿ ಅತಿ ನಿಕೃಷ್ಟ ಬದುಕು ಸಾಗಿಸುತ್ತಿರುವ ಈ ವರ್ಗದ ಜನತೆಗೆ ನಮ್ಮ ಸಮಾಜ ಹೇಗೆ ಸ್ಪಂದಿಸುತ್ತಿದೆ ಎನ್ನುವುದರ ಮೇಲೆ ನಾವು ಎಂತಹ ಸಮಾಜದಲ್ಲಿ ಬದುಕುತ್ತಿದ್ದೇವೆ ಎನ್ನುವುದನ್ನೂ ನಿರ್ಧರಿಸಬಹುದು.

ADVERTISEMENT

ಏಳು ವರ್ಷಗಳ ಹಿಂದೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಹಳ ಮಹತ್ವಾಕಾಂಕ್ಷೆಯೊಂದಿಗೆ ಆರಂಭಿಸಿದ ಸ್ವಚ್ಚ ಭಾರತ ಅಭಿಯಾನ ಸ್ವತಂತ್ರ ಭಾರತದ ಒಂದು ಮಹತ್ವದ ಯೋಜನೆಯೇನೋ ಹೌದು. ಆದರೆ ಈ ಅಭಿಯಾನ ಕೇವಲ ಶೌಚಾಲಯ ನಿರ್ಮಾಣ ಮತ್ತು ಬಳಕೆ, ಬಯಲುಶೌಚದ ನಿವಾರಣೆಗಷ್ಟೇ ಸೀಮಿತವಲ್ಲ ಎನ್ನುವುದು ಸರ್ಕಾರಗಳಿಗೂ ತಿಳಿದಿರಬೇಕು. ದೇಶದ ಭೌತಿಕ ಸ್ವಾಸ್ಥ್ಯವನ್ನು ಉತ್ತಮ ಸ್ಥಿತಿಯಲ್ಲಿ ಕಾಪಾಡಿಕೊಂಡು ಬರುವ ನಿಟ್ಟಿನಲ್ಲಿ ಆರೋಗ್ಯ ಸೇವೆಯಷ್ಟೇ ಪ್ರಾಮುಖ್ಯತೆಯನ್ನು ನಿರ್ಮಲೀಕರಣದ ಸೇವೆಯೂ ಪಡೆಯುತ್ತದೆ. ಹಾಗೆಯೇ ನಮ್ಮ ಸಮಾಜದ ಬೌದ್ಧಿಕ ಸ್ವಾಸ್ಥ್ಯವೂ ಮುಖ್ಯವಾಗುತ್ತದೆ. ಬೌದ್ಧಿಕವಾಗಿ ಸಂವೇದನೆ, ಸಂಯಮ ಮತ್ತು ಸೌಜನ್ಯವನ್ನು ಕಳೆದುಕೊಳ್ಳುತ್ತಲೇ ಇರುವ ಸುತ್ತಲಿನ ಸಮಾಜದಲ್ಲಿ ತುಳಿತಕ್ಕೊಳಗಾದ ಒಂದು ಬೃಹತ್‌ ಸಮುದಾಯ ಇಂದು ತಮ್ಮ ಭವಿಷ್ಯದ ಬದುಕಿಗಾಗಿ “ ಅಂದೋಲನ ಜೀವಿಗಳಾಗಿದ್ದಾರೆ. ”

ದುರಂತ ಎಂದರೆ ಆಧುನಿಕ ಜೀವನ ಶೈಲಿಗೆ ಒಗ್ಗಿಹೋಗಿರುವ ಭಾರತೀಯ ಸಮಾಜದ ಒಂದು ವರ್ಗ ಸ್ವಚ್ಚತೆಯನ್ನೂ ಸಾಪೇಕ್ಷ ನೆಲೆಯಲ್ಲೇ ನೋಡುತ್ತದೆ. “ ನಮ್ಮ ಸುತ್ತಲಿನ ಪರಿಸರ ” ಎನ್ನುವ ಪರಿಕಲ್ಪನೆ ನಾಲ್ಕಾರು ರಸ್ತೆಗಳ ಬಡಾವಣೆಯನ್ನು ದಾಟಿ ಹೋಗುವುದಿಲ್ಲ. ಮರಗಿಡಗಳು, ಅರಣ್ಯ, ಜನಸಂಪನ್ಮೂಲಗಳನ್ನು ಸಂರಕ್ಷಿಸಲು ಕೆಲವೇ ಪ್ರಗತಿಪರ ಹೋರಾಟಗಾರರಿಗೆ ಗುತ್ತಿಗೆ ನೀಡಿರುವ ಸುಶಿಕ್ಷಿತ ಸಮುದಾಯವೂ ಸಹ ನಿರ್ಲಿಪ್ತತೆಯಿಂದಲೇ ತಮ್ಮ ಸುತ್ತಲೂ ಇರುವ ವಾಯುಮಾಲಿನ್ಯ, ಜಲಮಾಲಿನ್ಯ ಮತ್ತು ನಿತ್ಯಜೀವನದ ತ್ಯಾಜ್ಯ ಮಾಲಿನ್ಯವನ್ನು ಸಹಿಸಿಕೊಳ್ಳುತ್ತಲೇ ಇದೆ. ಹಾಗಾಗಿಯೇ ಈ ಸಮುದಾಯವನ್ನೇ ಪ್ರಧಾನವಾಗಿ ಪ್ರತಿನಿಧಿಸುವ ಭಾರತದ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯ ದೃಷ್ಟಿಯಲ್ಲೂ ಸಹ ನಿರ್ಮಲೀಕರಣ ಸಾರ್ವಜನಿಕ ಜವಾಬ್ದಾರಿಯಾಗುವುದಕ್ಕಿಂತಲೂ ಹೆಚ್ಚಾಗಿ, ತಳಸಮುದಾಯದ ಒಂದು ವರ್ಗದ ಜವಾಬ್ದಾರಿಯಾಗಿಬಿಡುತ್ತದೆ.  ಈ ತಳಸಮುದಾಯವನ್ನೇ ಪ್ರತಿನಿಧಿಸುವ ಲಕ್ಷಾಂತರ ಸ್ವಚ್ಚತಾ ಕಾರ್ಮಿಕರು ಮೇಲ್ವರ್ಗದ ಜನತೆ ವಾಸಿಸುವ ಪರಿಸರವನ್ನು ಸ್ವಚ್ದಗೊಳಿಸಲು ಮಲಗುಂಡಿಗೂ ಇಳಿಯುತ್ತಾರೆ, ತ್ಯಾಜ್ಯದ ಗುಡ್ಡಗಳನ್ನೇರುತ್ತಾರೆ, ಹರಿದು ಚೆಲ್ಲಿದ ತ್ಯಾಜ್ಯದ ದುರ್ನಾತವನ್ನೂ ಸಹಿಸಿಕೊಂಡು, ರಸ್ತೆಗಳನ್ನು, ಚರಂಡಿಗಳನ್ನು, ಪಾದಚಾರಿ ರಸ್ತೆಗಳನ್ನು, ಖಾಲಿ ನಿವೇಶನಗಳನ್ನು, ರಾಜಕಾಲುವೆಗಳನ್ನು ಸ್ವಚ್ಚಗೊಳಿಸುವುದರಲ್ಲಿ ತಮ್ಮ ಜೀವ ಸವೆಸುತ್ತಿರುತ್ತಾರೆ.

ಸ್ವಚ್ಚ ಭಾರತ ಅಭಿಯಾನವನ್ನು ಹೆಮ್ಮೆಯಿಂದ ವೈಭವೀಕರಿಸುವ ನಾಗರಿಕರು ಈ ಸ್ವಚ್ಚತೆಗಾಗಿ ದಿನನಿತ್ಯ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಶ್ರಮಿಸುವ ಲಕ್ಷಾಂತರ ನಿರ್ಮಲೀಕರಣದ ಕಾಲಾಳುಗಳನ್ನು ಲೆಕ್ಕಿಸುವುದೂ ಇಲ್ಲ ಎನ್ನುವುದು ಕಟು ವಾಸ್ತವ. ಏಕೆಂದರೆ ಹಿತವಲಯದ ಜನತೆಗೆ ಕಸ ಹಾಕುವ ಕಲೆ ತಿಳಿದಿದೆ, ಕಸ ಹೆಕ್ಕುವ ಕಸುಬು ತಿಳಿದಿಲ್ಲ. ರಸ್ತೆ ಬದಿಯಲ್ಲೋ, ಖಾಲಿ ನಿವೇಶನಗಳಲ್ಲೋ, ಕೆರೆಯ ದಡದಲ್ಲೋ ಅಥವಾ ಯಾವುದೋ ಖಾಲಿ ಜಾಗದಲ್ಲೋ ತಮ್ಮ ಮನೆಯ ಎಲ್ಲ ತ್ಯಾಜ್ಯವನ್ನೂ ಕಾರುಗಳಲ್ಲಿ ಬಂದು ಸುರಿಯುವ ಮೇಲ್ವರ್ಗದ ಜನತೆಗೆ ಚೀಲದೊಳಗಿನ ತ್ಯಾಜ್ಯ ಮತ್ತೊಂದು ಜೀವಕ್ಕೆ ಹಾನಿ ಉಂಟುಮಾಡುತ್ತದೆ ಎಂಬ ಪರಿಜ್ಞಾನವೂ ಇರುವುದಿಲ್ಲ. ಏಕೆಂದರೆ ಈ ಬಿಸಾಡಿದ ಕಸ ಹೆಕ್ಕಲೆಂದೇ ನಮ್ಮ ಶ್ರೇಣೀಕೃತ ಜಾತಿ ವ್ಯವಸ್ಥೆ ಒಂದು ಸಮುದಾಯವನ್ನೇ ತಯಾರು ಮಾಡಿಬಿಟ್ಟಿದೆ. ಈ ಸಮುದಾಯವೇ ಮಲಮೂತ್ರಗಳನ್ನು ಬಳಿಯುತ್ತಾ, ಕಸದ ತೊಟ್ಟಿಗಳಲ್ಲಿರುವ ಕೊಳೆತ ಕಸವನ್ನೂ ಬರಿಗೈಯ್ಯಿಂದಲೇ ಬುಟ್ಟಿಗಳಲ್ಲಿ ತುಂಬಿಸಿಕೊಂಡು ಲಾರಿಗಳಿಗೆ ತುಂಬಿಸುತ್ತಾ, ಎಲ್ಲವನ್ನೂ ಸ್ವಚ್ಚಗೊಳಿಸುತ್ತಾ ಹೋಗುತ್ತದೆ. ಒಂದು ಕಸದ ಲಾರಿ ರಸ್ತೆಯಲ್ಲಿ ಹೋಗುತ್ತಿದ್ದರೆ ಅಕ್ಕಪಕ್ಕದ ವಾಹನ ಸವಾರರು ಮೂಗು ಮುಚ್ಚಿಕೊಂಡು ತುಸುದೂರದಲ್ಲೇ ನಿಂತು ಲಾರಿ ದೂರ ಹೋದ ನಂತರ ಮುಂದುವರೆಯುತ್ತಾರೆ. ಆದರೆ ಆ ದುರ್ನಾತ ಬೀರುವ ಲಾರಿಗೆ ಒಬ್ಬ ಚಾಲಕನಿರುತ್ತಾನೆ,  ಕಸದ ರಾಶಿಯ ನಡುವೆಯೇ ರಾಜಾರೋ಼ಷದಿಂದ ಕುಳಿತುವ ಒಬ್ಬ ಸ್ವಚ್ಚತಾ ಕಾರ್ಮಿಕ ಇರುತ್ತಾನೆ/ಳೆ ಎನ್ನುವುದನ್ನು ಗಮನಿಸುವ ಗೊಡವೆಗೇ ಹೋಗುವುದಿಲ್ಲ.

ಆಧುನಿಕತೆಯನ್ನು ಮೈಗೂಡಿಸಿಕೊಂಡ ಒಂದು ಸಮಾಜ ಹೀಗೆ ತಮ್ಮ ನಿತ್ಯ ಬದುಕಿನ ಸ್ವಚ್ಚತೆಗಾಗಿ ಶ್ರಮಿಸುವ ಪರಿಚಾರಕರನ್ನು ಅಲಕ್ಷಿಸುತ್ತಿರುವುದರಿಂದಲೇ ಆಡಳಿತಾರೂಢ ಸರ್ಕಾರಗಳೂ ಸಹ ಈ ನಿರ್ಮಲೀಕರಣದ ಕಾಲಾಳುಗಳಿಗೆ ಸುರಕ್ಷತಾ ಉಪಕರಣಗಳನ್ನೂ ನೀಡುವುದಿಲ್ಲ. ಕೈಗಳಿಗೆ ಗವುಸು, ಮೂಗು ಮುಚ್ಚಿಕೊಳ್ಳುವ ಮುಖಗವುಸು , ತಲೆಗೆ ಧರಿಸಬೇಕಾದ ಒಂದು ಟೊಪ್ಪಿಗೆ, ಕಾಲ್ಗಳಿಗೆ ಬೇಕಾದ ಉದ್ದನೆಯ ಬೂಟು ಮತ್ತು ಒಂದು ಸಮವಸ್ತ್ರ ಇವೆಲ್ಲವೂ ಈ ಸ್ವಚ್ಚತಾ ಕಾರ್ಮಿಕರ ಮೂಲಭೂತ ಹಕ್ಕು ಎಂದು ತಿಳಿದಿದ್ದರೂ ಈ ಪರಿಕರಗಳನ್ನು ಪೂರೈಸುವ ಇಚ್ಚಾಶಕ್ತಿಯೇ ಇಲ್ಲದೆ ಆಡಳಿತ ವ್ಯವಸ್ಥೆ ಸ್ವಚ್ಚ ನಗರಿಯ ಪ್ರಶಸ್ತಿಗಳನ್ನು ಬಾಚಿಕೊಳ್ಳಲು ಸುಶಿಕ್ಷಿತರ ಎಸ್‌ಎಂಎಸ್‌ ಸಂದೇಶಗಳನ್ನು ಅವಲಂಬಿಸಿರುತ್ತದೆ. ಸ್ವಚ್ಚ ನಗರಿಯ ಪ್ರಶಸ್ತಿಯ ಗರಿ ಮುಡಿಗೇರಿಸಿಕೊಳ್ಳುವ ಒಂದು ನಗರದ ಆಡಳಿತ ವ್ಯವಸ್ಥೆಗೆ ಈ ಪ್ರಶಸ್ತಿಗೆ ಭಾಜನರಾಗಬೇಕಾದವರು ಯಾರು ಎಂಬ ಪರಿಜ್ಞಾನವೇ ಇರುವುದಿಲ್ಲ. ಏಕೆಂದರೆ ಈ ಪ್ರಶಸ್ತಿ ಪಡೆಯಲೆಂದೇ ಇಡೀ ನಗರವನ್ನು ನಳನಳಿಸುವಂತೆ ಸ್ವಚ್ಚಗೊಳಿಸುವ ಸಾವಿರಾರು ಕಾರ್ಮಿಕರು ಅದೇ ಅನೈರ್ಮಲ್ಯದ ಪ್ರಪಂಚದಲ್ಲಿ ಬದುಕು ಸವೆಸುತ್ತಿರುತ್ತಾರೆ. ವ್ಯಕ್ತಿಗತ ನೆಲೆಯಲ್ಲಿ ಯಾವುದೇ ಸುರಕ್ಷತಾ ಕವಚ ಇಲ್ಲದೆ ನಿರ್ಮಲೀಕರಣದ ಕಾರ್ಯದಲ್ಲಿ ತೊಡಗುವ ಈ ನತದೃಷ್ಟ ಕಾರ್ಮಿಕರು, ಕೌಟುಂಬಿಕ ನೆಲೆಯಲ್ಲೂ ಸೂಕ್ತ ಶೌಚ ವ್ಯವಸ್ಥೆಯಿಲ್ಲದ, ವಸತಿ ಸೌಕರ್ಯಗಳಿಲ್ಲದ, ವಿದ್ಯುತ್‌ ಸಂಪರ್ಕವಿಲ್ಲದ ಮತ್ತು ಆಧುನಿಕ ಸಮಾಜ ಅನುಭೋಗಿಸುವ ಯಾವುದೇ ಹಿತಕರ ಸವಲತ್ತುಗಳಿಲ್ಲದ ಅನಾರೋಗ್ಯಕರ ವಾತಾವರಣದಲ್ಲಿ ತಮ್ಮ ಜೀವನ ಸವೆಸುತ್ತಾರೆ. ಬಹುಶಃ ಪ್ರಶಸ್ತಿಯ ರೂಪದಲ್ಲಿ ಪಡೆಯುವ ಪಾರಿತೋಷಕವನ್ನು ಸ್ಪರ್ಶಿಸುವ ಅವಕಾಶವನ್ನೂ ಈ ಸಮುದಾಯದ ಜನತೆಗೆ ನೀಡಲು ನಮ್ಮ ಸಮಾಜ ಒಪ್ಪುವುದಿಲ್ಲ !!!!

ಈ ಸಾಮಾಜಿಕ ಮನಸ್ಥಿತಿ ಮತ್ತು ಬೌದ್ಧಿಕ ನಿಷ್ಕ್ರಿಯತೆಯ ನಡುವೆಯೇ ರಾಜ್ಯದ ಸಾವಿರಾರು ಸ್ವಚ್ಚತಾ ಕಾರ್ಮಿಕರು, ನಿರ್ಮಲೀಕರಣದ ಕಾಲಾಳುಗಳು ತಮ್ಮ ನೌಕರಿಯ ಖಾಯಮಾತಿಗಾಗಿ ನಾಲ್ಕು ದಿನಗಳಿಂದ ಹೋರಾಡುತ್ತಿದ್ದಾರೆ. ರಾಜ್ಯ ಸರ್ಕಾರ ಈ ಕಾರ್ಮಿಕರನ್ನು ಖಾಯಂಗೊಳಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸುವ ಆಶ್ವಾಸನೆ ನೀಡಿದ್ದು, ಒಂದು ಸಮಿತಿಯನ್ನು ರಚಿಸಲು ಮುಂದಾಗಿದೆ. ದಿನನಿತ್ಯ ಸಮಸ್ತ ಸಮಾಜದ ಕಣ್ಣೆದುರಿನಲ್ಲೇ ತಮ್ಮ ಕಾರ್ಯನಿರ್ವಹಿಸುತ್ತಾ, ಎಲ್ಲರ ಕಣ್ಣಿಗೆ ಕಾಣುವಂತೆಯೇ ನಿಕೃಷ್ಟ ಜೀವನ ನಡೆಸುತ್ತಾ, ಅನಾರೋಗ್ಯದಿಂದ ಪೀಡಿತರಾಗಿ, ಶಿಕ್ಷಣವಂಚಿತರಾಗಿ ಬಾಳುತ್ತಿರುವ ಶ್ರಮಜೀವಿಗಳ ಖಾಯಮಾತಿಯ ಬೇಡಿಕೆ ನ್ಯಾಯಯುತವಾದದ್ದೇ ಎನ್ನುವುದಾದರೆ, ವರ್ಷಗಟ್ಟಲೆ ಕಾಲ ಹರಣ ಮಾಡುವ ಸಮಿತಿ, ಆಯೋಗಗಳ ರಚನೆ ಏಕೆ ಬೇಕು ? ಭಾರತವನ್ನು ಸ್ವಚ್ಚ ರಾಷ್ಟ್ರವನ್ನಾಗಿ ಮಾಡುವ ಮಹತ್ವಾಕಾಂಕ್ಷೆ ಹೊಂದಿರುವ ಒಂದು ಆಡಳಿತ ವ್ಯವಸ್ಥೆಗೆ ಈ ಸ್ವಚ್ಚತೆಯನ್ನು ಕಾಪಾಡಲು ಅನಿವಾರ್ಯವಾಗಿ ಬೇಕಾಗುವ ಲಕ್ಷಾಂತರ ದುಡಿಯುವ ಕೈಗಳ ಘನತೆ, ಗೌರವ, ಆತ್ಮರಕ್ಷಣೆ, ಸುಸ್ಥಿರ ಬದುಕು, ಉತ್ತಮ ಆರೋಗ್ಯ ಮತ್ತು ಶಿಕ್ಷಣ ಹಾಗೂ ಹಿತಕರವಾದ ಜೀವನ ಇವೆಲ್ಲವೂ ಪ್ರಥಮ ಆದ್ಯತೆಯಾಗಬೇಕಲ್ಲವೇ ?

ಆದರೆ ಸ್ವಚ್ಚ ಭಾರತದ ಬಜೆಟ್‌ ಅನುದಾನದಲ್ಲಿ ಶೌಚಾಲಯ ನಿರ್ಮಾಣಕ್ಕೆ ಇರುವ ಪ್ರಾಶಸ್ತ್ಯ ಮಲಗುಂಡಿಗಳನ್ನು ಸ್ವಚ್ಚಗೊಳಿಸುವ ಕಾರ್ಮಿಕರಿಗೆ ನೀಡಲಾಗಿಲ್ಲ ಎನ್ನುವುದು ವಾಸ್ತವ. ಭಾರತ ಸ್ವಚ್ಚ ಭಾರತದ ಅಭಿಯಾನದಿಂದ ಅತ್ಯಂತ ಸ್ವಚ್ಚ ರಾಷ್ಟ್ರವಾಗಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಲೂ ಆಗದಂತೆ, ಮಲಗುಂಡಿಯಲ್ಲಿ ಇಳಿದು ಸಾಯುತ್ತಿರುವವರ ಕಾರ್ಮಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಸಫಾಯಿ ಕರ್ಮಚಾರಿ ಆಂದೋಲನದ ಬೆಜವಾಡ ವಿಲ್ಸನ್‌ ಅವರು ಒದಗಿಸುವ ಮಾಹಿತಿಯ ಅನುಸಾರ ಸ್ವಚ್ಚ ಭಾರತ ಅಭಿಯಾನ ಆರಂಭದಾದ ನಂತರ, 2016 ರಿಂದ 2020ರ ಅವಧಿಯಲ್ಲಿ 472 ಸ್ವಚ್ಚತಾ ಕಾರ್ಮಿಕರು ಮಲಗುಂಡಿಗಳನ್ನು ಸ್ವಚ್ಚ ಮಾಡುವಾಗಲೇ ಮೃತಪಟ್ಟಿದ್ದಾರೆ. 2021ರಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ರಾಮದಾಸ್‌ ಅಥಾವಳೆ ಸಂಸತ್ತಿನಲ್ಲಿ ನೀಡಿದ ಮಾಹಿತಿಯ ಅನುಸಾರವೇ ಸರ್ಕಾರದ ದಾಖಲೆಗಳಲ್ಲಿ 66,692 ಕೈದುಡಿಮೆಯ ನಿರ್ಮಲೀಕರಣ ಕಾರ್ಮಿಕರಿದ್ದಾರೆ. ಇವರ ಪೈಕಿ                           ಶೇ 99ರಷ್ಟು ಪರಿಶಿಷ್ಟ ಜಾತಿ ಸಮುದಾಯದವರೇ ಇರುವುದು ಭಾರತದ ಜಾತಿ ವ್ಯವಸ್ಥೆಯಲ್ಲಿ ಅಚ್ಚರಿಯೇನಲ್ಲ. ಏಕೆಂದರೆ ಇದು ಈ ತಳಸಮುದಾಯದ ಕಾಯಕ ಎಂದೇ ನಮ್ಮ ಸಮಾಜವೂ ನಿರ್ಧರಿಸಿದೆ. ಈ ಕಾರ್ಮಿಕರು ಸಂಗ್ರಹಿಸುವ ತ್ಯಾಜ್ಯವನ್ನು ದೂರವಿಡುವಂತೆಯೇ ಈ ಸಮುದಾಯದ ಶ್ರಮಜೀವಿಗಳನ್ನೂ ಭೌತಿಕವಾಗಿ, ಬೌದ್ಧಿಕವಾಗಿ ದೂರ ಇಡುವಂತಹ ಒಂದು ಕ್ರೂರ ಜಾತಿ ವ್ಯವಸ್ಥೆಯನ್ನು ನಾವು ಬೆಳೆಸಿಕೊಂಡೇ ಬಂದಿದ್ದೇವಲ್ಲವೇ ?

ಕಳೆದ ನಾಲ್ಕು ದಿನಗಳಿಂದ ಮುಷ್ಕರನಿರತರಾಗಿರುವ ಈ ಕಾರ್ಮಿಕರ ನಡುವೆ ನಾವು ಜಾತಿ ವ್ಯವಸ್ಥೆಯ ಕರಾಳ ಮುಖವನ್ನು ಕಂಡಂತೆಯೇ ಬಂಡವಾಳಶಾಹಿ ಅರ್ಥವ್ಯವಸ್ಥೆಯ ಕ್ರೌರ್ಯವನ್ನೂ ಕಾಣಬಹುದು.ರಾಜ್ಯದಲ್ಲಿ 41,373 ಪೌರ ಕಾರ್ಮಿಕರು ಇದ್ದಾರೆ. ಇವರ ಪೈಕಿ ದಿನನಿತ್ಯ ಕಸ ಸಂಗ್ರಹಿಸುವವರು, ವಾಹನ ಚಾಲಕರು, ಮೇಸ್ತ್ರಿಗಳು, ರಸ್ತೆ ಗುಡಿಸುವವರು ಹೀಗೆ ಹಲವು ವಿಭಾಗಗಳೂ ಇವೆ. ದೀರ್ಘ ಹೋರಾಟದ ನಂತರ ಗುತ್ತಿಗೆದಾರರ ಮುಷ್ಟಿಯಿಂದ ಮುಕ್ತಿ ಪಡೆದ ಈ ಕಾರ್ಮಿಕರಿಗೆ ನೇರ ವೇತನ ಪಾವತಿಯ ಸೌಲಭ್ಯವನ್ನೂ ಒದಗಿಸಲಾಗಿದ್ದು 26,349 ಕಾರ್ಮಿಕರಿಗೆ ನೇರ ವೇತನ ಪಾವತಿಯಾಗುತ್ತಿದೆ. 651 ದಿನಗೂಲಿ ನೌಕರರಿದ್ದಾರೆ. ಒಟ್ಟು ಕಾರ್ಮಿಕರ ಪೈಕಿ 10,527 ಸಿಬ್ಬಂದಿಗೆ ನೌಕರಿ ಖಾಯಂ ಆಗಿದೆ. 2,267 ಕಾರ್ಮಿಕರು ಗುತ್ತಿಗೆಯ ಮೇಲೆ ನೇಮಕಗೊಂಡಿದ್ದಾರೆ. 67 ಕಾರ್ಮಿಕರು ಹೊರಗುತ್ತಿಗೆಯ ಮೇಲೆ ಕೆಲಸ ಮಾಡುತ್ತಿದ್ದಾರೆ. (ಟೈಮ್ಸ್‌ ನೌ ವರದಿ).

ಅಂದರೆ 30 ಸಾವಿರಕ್ಕೂ ಹೆಚ್ಚು ಸ್ವಚ್ಚತಾ ಕಾರ್ಮಿಕರು ಸೇವಾ ಖಾಯಮಾತಿಗಾಗಿ ಹೋರಾಡುತ್ತಿದ್ದಾರೆ. ಇದರರ್ಥ ನಾವು ದಿನನಿತ್ಯ ಎದುರುಗೊಳ್ಳುವ ನಾಲ್ಕು ಜನ ಸ್ವಚ್ಚತಾ ಕಾರ್ಮಿಕರ ಪೈಕಿ ಮೂರು ಜನರು ಅನಿಶ್ಚಿತ ಬದುಕು ಎದುರಿಸುತ್ತಿದ್ದಾರೆ. ಇವರಿಗೆ ಕನಿಷ್ಠ ವೇತನವನ್ನೂ ನೀಡಲಾಗುತ್ತಿಲ್ಲ. ತಾತ್ಕಾಲಿಕ ನೌಕರರಾಗಿಯೇ ದುಡಿಯುವ ಇವರಿಗೆ ಇಎಸ್‌ಐ, ವಿಮೆ, ಭವಿಷ್ಯನಿಧಿ ಮುಂತಾದ ಸವಲತ್ತುಗಳೂ ಲಭಿಸುವುದಿಲ್ಲ. ಸಾಮಾನ್ಯವಾಗಿ ಊರಿನ ಹೊರವಲಯದಲ್ಲಿ ತಮ್ಮದೇ ಆದ ಕಾಲೋನಿಗಳಲ್ಲಿ ವಾಸಿಸುವ ಈ ಕಾರ್ಮಿಕರ ಮಕ್ಕಳಿಗೆ ಶಾಲಾ ಸೌಲಭ್ಯಗಳೂ ಸಹ ಸಮರ್ಪಕವಾಗಿರುವುದಿಲ್ಲ. ತಮ್ಮ ಭವಿಷ್ಯದ ಬದುಕು ರೂಪಿಸಿಕೊಳ್ಳಲು, ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಮತ್ತು ಉತ್ತಮ ಆರೋಗ್ಯ ಒದಗಿಸಲು ಈ ಸಾವಿರಾರು ಕಾರ್ಮಿಕರು ನಾಲ್ಕು ದಿನಗಳ ಮುಷ್ಕರ ಮಾಡಬೇಕಾಗಿರುವುದೇ ನಮ್ಮ ಆಡಳಿತ ವ್ಯವಸ್ಥೆಯೊಳಗಿನ ನಿರ್ದಾಕ್ಷೀಣ್ಯತೆ ಮತ್ತು ನಿರ್ಲಕ್ಷತೆಗೆ ಸಾಕ್ಷಿಯಾಗುತ್ತದೆ. ಮಾನ್ಯ ಮುಖ್ಯಮಂತ್ರಿಗಳು ನೀಡಿರುವ ಭರವಸೆ ಈಡೇರುವುದೆಂಬ ವಿಶ್ವಾಸವನ್ನೂ ಈ ಕಾರ್ಮಿಕರು ಕಳೆದುಕೊಂಡಿರುವುದಕ್ಕೆ ಕಾರಣ, ನಮ್ಮ ಸರ್ಕಾರಗಳು ಅಂತಹ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿಲ್ಲ. ಬಾಯಿ ಮಾತಿನ ಭರವಸೆಗಳನ್ನೇ ನಂಬಿ 75 ವರ್ಷಗಳನ್ನು ಕಳೆದಿರುವ ಸ್ವತಂತ್ರ ಭಾರತದಲ್ಲಿ, ರಾಜಕೀಯ ಪಕ್ಷಗಳ ಅಲಂಕಾರಿಕ ಆಶ್ವಾಸನೆಗಳು ತಮ್ಮ ಬಣ್ಣ ಕಳೆದುಕೊಳ್ಳುತ್ತಿವೆ ಎನ್ನುವುದನ್ನು ಈ ಕಾರ್ಮಿಕರು ನಿರೂಪಿಸಿದ್ದಾರೆ.

ಖಾಯಮಾತಿ ಮಾಡುವುದರಿಂದಲೇ ಈ ಬೃಹತ್‌ ಜನಸಮುದಾಯದ ಸಮಸ್ಯೆಗಳೆಲ್ಲವೂ ಬಗೆಹರಿಯುತ್ತದೆ ಎನ್ನಲಾಗುವುದಿಲ್ಲ. ಏಕೆಂದರೆ ನಿತ್ಯ ಕಸ ಸಂಗ್ರಹಣೆ ಮಾಡುವ ಮತ್ತು ತ್ಯಾಜ್ಯ ಸಂಸ್ಕರಣಾ ಘಟಕಗಳಲ್ಲಿ ಕಾರ್ಯ ನಿರ್ವಹಿಸುವ ಹಾಗೂ ತ್ಯಾಜ್ಯ ಸಾಗಣೆಯ ವಾಹನವನ್ನು ನಿರ್ವಹಿಸುವ ಸಾವಿರಾರು ಕಾರ್ಮಿಕರಿಗೆ ಆರೋಗ್ಯ ರಕ್ಷಣೆಯ ಕವಚಗಳನ್ನೂ ಸರ್ಕಾರಗಳು ಸಮರ್ಪಕವಾಗಿ ಒದಗಿಸುತ್ತಿಲ್ಲ. ಶ್ರೀಮಂತರ ಮನೆಗಳ ಅಡುಗೆ ಕೋಣೆಯಷ್ಟಿರುವ ನಾಲ್ಕು ಗೋಡೆಗಳನ್ನೇ ತಮ್ಮ ʼ ಮನೆ ʼ ಎಂದು ಭಾವಿಸಿ ಬದುಕುತ್ತಿರುವ ಈ ಶ್ರಮಜೀವಿಗಳ ನಿತ್ಯ ಬದುಕಿನ ಬವಣೆಗಳನ್ನು ನಮ್ಮ ಸಮಾಜ ಅಥವಾ ನಮ್ಮ ಜನಪ್ರತಿನಿಧಿಗಳು ಗಮನಿಸುತ್ತಿದ್ದಾರೆಯೇ ಎಂಬ ಜ್ವಲಂತ ಪ್ರಶ್ನೆಯೂ ನಮ್ಮನ್ನು ಕಾಡಬೇಕಲ್ಲವೇ ? ಸಾವಿರಾರು ರೂಗಳ ಮೌಲ್ಯದ ಕಮ್ಮೋಡುಗಳಿಂದ ಬರುವ ಮಲಮೂತ್ರಾದಿ ತ್ಯಾಜ್ಯವಾಗಲೀ, ಬಯಲು ಶೌಚದ ತ್ಯಾಜ್ಯವಾಗಲೀ ಅಥವಾ ಶ್ರೀಮಂತ/ಮಧ್ಯಮ ವರ್ಗಗಳ ಮನೆಯ ಸಾಕುನಾಯಿಗಳು ರಸ್ತೆ ಬದಿಯಲ್ಲಿ ಬಿಟ್ಟು ಹೋಗುವ ತ್ಯಾಜ್ಯವಾಗಲೀ ಎಲ್ಲವನ್ನೂ ಸ್ವಚ್ಚಗೊಳಿಸಲು ಈ ನತದೃಷ್ಟ ಸಮುದಾಯದ ಕಾರ್ಮಿಕರೇ ಬರಬೇಕಲ್ಲವೇ ?

ಕನಿಷ್ಠ ಈ ಪಾಪಪ್ರಜ್ಞೆಯಾದರೂ ನಮ್ಮನ್ನು ಕಾಡದೆ ಹೋದರೆ ನಾವು ಇನ್ನೆಂತಹ ನಾಗರಿಕತೆಯನ್ನು ರೂಢಿಸಿಕೊಂಡಿದ್ದೇವೆ ? ಸ್ವಚ್ಚತಾ ಕಾರ್ಮಿಕರು ಅತ್ಯಂತ ಬದ್ಧತೆಯಿಂದ, ನಿಷ್ಠೆಯಿಂದ ತಮಗೆ ದೊರೆತುದನ್ನೇ ಪರಮಾನ್ನ ಎಂದು ಭಾವಿಸಿ ಕರ್ತವ್ಯನಿರತರಾಗಿರುತ್ತಾರೆ. ಅವರ ನಿತ್ಯ ಜೀವನಾವಶ್ಯ ಕನಿಷ್ಠ ಸೌಕರ್ಯಗಳ ಬಗ್ಗೆ ಮತ್ತು ಅವರ ದೈಹಿಕ ಆರೋಗ್ಯವನ್ನು, ಬೌದ್ಧಿಕ ವಿಕಾಸವನ್ನು ಗಮನಿಸಬೇಕು ಎನ್ನುವ ಕನಿಷ್ಠ ವ್ಯವಧಾನವಾದರೂ ನಮ್ಮ ಸಮಾಜದಲ್ಲಿ ಇರಬೇಕಲ್ಲವೇ ? ಎಷ್ಟು ಜನಪ್ರತಿನಿಧಿಗಳು, ಅಧಿಕಾರಶಾಹಿಯ ಪರಿಚಾರಕರು, ಆಳುವ ವರ್ಗಗಳ ಫಲಾನುಭವಿಗಳು ಈ ಕುರಿತು ಯೋಚಿಸುತ್ತಿದ್ದಾರೆ ? ಒಂದೆಡೆ ಜಾತಿ ತಾರತಮ್ಯ ಮತ್ತು ಸದ್ದಿಲ್ಲದ ದೌರ್ಜನ್ಯ ಮತ್ತೊಂದೆಡೆ ವರ್ಗ ತಾರತಮ್ಯ ಮತ್ತು ನೇರವಾದ ಆರ್ಥಿಕ ಶೋಷಣೆ ಈ ಎರಡಲಗಿನ ಕತ್ತಿಯ ಮೇಲೆ ನಡೆಯುತ್ತಲೇ ನಮ್ಮ ಸುತ್ತಲಿನ ವಾತಾವರಣವನ್ನು ಸ್ವಚ್ಚವಾಗಿರಿಸಲು ಬೆವರು ಸುರಿಸುತ್ತಿರುವ ಈ  ಶ್ರಮಜೀವಿಗಳೇಕೆ ನಮಗೆ ಗೋಚರಿಸುತ್ತಿಲ್ಲ ?

ಈ ಜಟಿಲ ಪ್ರಶ್ನೆಗಳ ನಡುವೆಯೇ ನಾವು, ಅಂದರೆ ನಾಗರಿಕರು ಎಂದು ಬೆನ್ನುತಟ್ಟಿಕೊಳ್ಳುವ ಸಮಸ್ತ ಸಮಾಜ, ನಾಲ್ಕು ದಿನಗಳಿಂದ ತಮ್ಮ ನಿಶ್ಚಿತ ಭವಿಷ್ಯಕ್ಕಾಗಿ ಹೋರಾಡುತ್ತಿರುವ ಸಾವಿರಾರು ಶ್ರಮಜೀವಿಗಳತ್ತ ನೋಡಬೇಕಿದೆ. ರಸ್ತೆಗಳಲ್ಲಿ, ಮನೆಗಳಲ್ಲಿ, ಶ್ರೀಮಂತರ ಕಾಂಪೌಂಡುಗಳಲ್ಲಿ ಕೊಳೆತು ನಾರುವ ಕಸದ ಚೀಲಗಳನ್ನು ನೋಡುವಾಗಲಾದರೂ, ಇವುಗಳ ಹಿಂದೆ ಹಸಿದ ಹೊಟ್ಟೆಗಳಿವೆ, ನಿರ್ವಸಿತ ದೇಹಗಳಿವೆ, ನಿರ್ಗತಿಕ ಕುಟುಂಬಗಳಿವೆ, ಶಿಕ್ಷಣವಂಚಿತ ಕೂಸುಗಳಿವೆ, ಆರೋಗ್ಯ ವಂಚಿತ ಹೆಣ್ಣುಮಕ್ಕಳಿದ್ದಾರೆ, ಸ್ಪರ್ಶವಂಚಿತ ಬೃಹತ್‌ ಸಮುದಾಯವೇ ಇದೆ ಎನ್ನುವ ಸುಡು ಸತ್ಯವನ್ನು ನಾಗಕರಿತೆಯಿರುವ ಸಮಾಜ ಅರ್ಥಮಾಡಿಕೊಳ್ಳಬೇಕು. ಆಳುವ ವರ್ಗಗಳಿಗೆ, ಆಡಳಿತ ವ್ಯವಸ್ಥೆಗೆ ಇದು ಕೇವಲ ಪರಿಹರಿಸಬೇಕಾದ ಸಮಸ್ಯೆಯಾಗಷ್ಟೇ ಕಾಣುತ್ತದೆ. ಆದರೆ ಸಮಾಜದ ದೃಷ್ಟಿಯಲ್ಲಿ ಇದು ಸಮಸ್ಯೆ ಅಲ್ಲ, ನಾವೇ ನಿರ್ಮಿಸಿಕೊಂಡ ಒಂದು ಸಾಮಾಜಿಕ ವ್ಯವಸ್ಥೆಯ ಮೂಲಕ ನಾವೇ ಹೇರಿಕೊಂಡಿರುವ ಒಂದು ಜವಾಬ್ದಾರಿ.  ಹೀಗೆ ಭಾವಿಸಿದಾಗ, ನಮ್ಮೊಳಗಿನ ಪ್ರತಿಯೊಂದು ಮನಸ್ಸೂ ಜಾಗೃತವಾಗಿ, ಈ ಸಾವಿರಾರು “ ಆಂದೋಲನ ಜೀವಿಗಳಿಗೆ ” ಒತ್ತಾಸೆಯಾಗಿ ನಿಲ್ಲಲು ಸಾಧ್ಯ.

ಪೌರ ಕಾರ್ಮಿಕರ ಮುಷ್ಕರ ಯಶಸ್ವಿಯಾಗಿದೆ ಮುಷ್ಕರವನ್ನು ಹಿಂಪಡೆಯಲಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಮುಷ್ಕರ ಜಾರಿಯಲ್ಲಿತ್ತು. ಹಾಗಾಗಿ ಮುಷ್ಕರದ ವಿಷಯ ಅಪ್ರಸ್ತುತ ಎನಿಸಬಹುದು ಆದರೂ ಸ್ವಚ್ವತಾ ಕಾರ್ಮಿಕರ ಬವಣೆ ತಗ್ಗುವುದಿಲ್ಲ

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಾಸಕ ಜಮೀರ್ ಅಹ್ಮದ್ಗೆ ಎಸಿಬಿ ಶಾಕ್

Next Post

ಉತ್ತರ ಪ್ರದೇಶ | ಎರಡನೇ ಅವಧಿಯ ಆದಿತ್ಯನಾಥ್ ಸರ್ಕಾರಕ್ಕೆ 100 ದಿನ : ಸಾಧನೆಗಳೇನು?

Related Posts

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!
ಕರ್ನಾಟಕ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

by ಪ್ರತಿಧ್ವನಿ
April 14, 2026
0

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭದ್ರತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಡಳಿತ...

Read moreDetails
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

April 14, 2026
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

April 13, 2026
ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

April 13, 2026
“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

April 13, 2026
Next Post
ಉತ್ತರ ಪ್ರದೇಶ | ಎರಡನೇ ಅವಧಿಯ ಆದಿತ್ಯನಾಥ್ ಸರ್ಕಾರಕ್ಕೆ 100 ದಿನ : ಸಾಧನೆಗಳೇನು?

ಉತ್ತರ ಪ್ರದೇಶ | ಎರಡನೇ ಅವಧಿಯ ಆದಿತ್ಯನಾಥ್ ಸರ್ಕಾರಕ್ಕೆ 100 ದಿನ : ಸಾಧನೆಗಳೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada