ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.
ಇಂದಿನಿಂದ ಮಾರ್ಚ್ 28ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಇಂದು ನಾಳೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಾರ್ಚ್ 28ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕೆಲವು ಭಾಗಗಳು ಮಾರ್ಚ್ 28ರವರೆಗೆ ಚದುರಿದ ಮಳೆಯಾಗಲಿದೆ. ಮುಂದಿನ ಸೋಮವಾರದ ನಂತರವೂ ಈ ರಾಜ್ಯಗಳಲ್ಲಿ ಆರ್ದ್ರ ಪರಿಸ್ಥಿತಿಗಳು ಮುಂದುವರಿಯಬಹುದು. ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾದಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆ ಹೆಚ್ಚಾಗಲಿದೆ ಎಂದು ಹೇಳಿದೆ.
ಮುಂದಿನ ಮೂರು ದಿನಗಳಲ್ಲಿ ಸಮುದ್ರದ ಪರಿಸ್ಥಿತಿ ಅತ್ಯಂತ ಪ್ರಕ್ಷುಬ್ಧವಾಗಲಿದ್ದು, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶದ ಮೀನುಗಾರರಿಗೆ ಮಾರ್ಚ್ 25 ರಿಂದ 27 ರವರೆಗೆ ಪೂರ್ವ-ಮಧ್ಯ ಮತ್ತು ಪಕ್ಕದ ಈಶಾನ್ಯ ಬಂಗಾಳಕೊಲ್ಲಿಗೆ ತೆರಳದಂತೆ ತಿಳಿಸಲಾಗಿದೆ.
ಒಡಿಶಾದ ವಿಶೇಷ ಪರಿಹಾರ ಆಯುಕ್ತರು (ಎಸ್ಆರ್ಸಿ) ಹವಾಮಾನ ಮುನ್ಸೂಚನೆಯ ದೃಷ್ಟಿಯಿಂದ ಮುಂಜಾಗ್ರತೆ ವಹಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.