ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಗದ್ದಲ ಎಬ್ಬಿಸಿರುವ ಪ್ರಥಮ ದರ್ಜೆ ಗುತ್ತಿಗೆದಾರ ಸಂತೋಷ್ ಅತ್ಮಹತ್ಯೆ ಪ್ರಕರಣದ ಸಮಂಬಂಧ ಮುಖ್ಯಮಂತ್ರಿ ಬಸವಾರಜ್ ಬೊಮ್ಮಾಯಿ ರಾಜೀನಾಮೆ ಪಡೆಯುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಇಲ್ಲಿದೆ ಪ್ರಮುಖ ಅಂಶಗಳು
1) ನಿನ್ನೆ ಉಡುಪಿಯ ಲಾಡ್ಜ್ ಒಂದರಲ್ಲಿ ಸಚಿವ ಕೆ.ಎಸ್.ಈಶ್ವರಪ್ಪರ ಹೆಸರನ್ನು ಡೆತ್ ನೋಟ್ನಲ್ಲಿ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ದ ಪೊಲೀಸ್ ಪ್ರಕರಣ ದಾಖಲಾಗಿದೆ.
2) ಪ್ರಥಮ ಮಾಹಿತಿ ವರದಿ ಅಥವಾ ಏಫ್ಐಆರ್ನಲ್ಲಿ ಅತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಈಶ್ವರಪ್ಪ ಮತ್ತು ಇಬ್ಬರು ಸಹಚರರಾದ ಬಸವರಾಜ್ ಹಾಗೂ ರಮೇಶ್ ಹೆಸರನ್ನು ಸಹ ಪ್ರಕರಣದಲ್ಲಿ ದಾಖಲಿಸಲಾಗಿದೆ.
3) ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯಲ್ಲಿ 4 ಕೋಟಿ ರೂಪಾಯಿ ವೆಚ್ಚದ 108 ಕಾಮಗಾರಿಗಳ ಬಿಲ್ ಕ್ಲಿಯರ್ ಮಾಡಲು ಸಚಿವರ ಸಹಚರರು 40% ಕಮಿಷನ್ ಕೇಳುತ್ತಿದ್ದರು ಎಂದು ಸಂತೋಷ್ ಈ ಹಿಂದೆ ಆರೋಪಿಸಿದ್ದರು.
4) ಸಂತೋಷ್ ಬರೆದಿರುವ ಡೆತ್ ನೋಟ್ನಲ್ಲಿ ಸಚಿವ ಈಶ್ವರಪ್ಪ ನನ್ನ ಸಾವಿಗೆ ನೇರ ಕಾರಣ ಎಂದು ಆರೋಪಿಸಲಾಗಿದೆ. ನನ್ನ ಸಾವಿಗೆ RDPR ಸಚಿವ ಈಶ್ವರಪ್ಪ ಒಬ್ಬರೇ ಕಾರಣ ನಾನು ನನ್ನ ಆಕಾಂಕ್ಷೆಗಳನ್ನು ಬದಿಗಿಟ್ಟು ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದು ಪತ್ರದಲ್ಲಿ ಬರೆಯಲಾಗಿದೆ.

5) ಈ ಹಿಂದೆ ಗುತ್ತಿಗೆದಾರರ ಸಂಘ ಹಾಗೂ ಸಂತೋಷ್ ಆತ್ಮಹತ್ಯೆ ಸಂಬಂಧ ಬಿಜೆಪಿ ಹೈಕಮಾಂಡ್ ಈಶ್ವರಪ್ಪ ರಾಜೀನಾಮೆ ಕೇಳುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಈ ಕುರಿತು ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ರಾಜ್ಯ ಹಾಗೂ ಕೇಂದ್ರದ ವರಿಷ್ಠರೊಂದಿಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.
6) ಈ ಕುರಿತು ಉಡುಪಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಈಶ್ವರಪ್ಪರವರ ರಾಜೀನಾಮೆ ಅಗತ್ಯತೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ಅವರೊಂದಿಗೆ ಮಾತನಾಡುತ್ತೇನೆ. ರಾಜೀನಾಮೆ ಬಗ್ಗೆ ಅವರು ಏನು ಹೇಳಿದ್ದಾರೋ ಗೊತ್ತಿಲ್ಲ ಅವರ ಜೊತೆ ನೇರವಾಗಿ ಮಾತನಾಡಿದ ನಂತರ ನನಗೆ ಸ್ಪಷ್ಟ ಚಿತ್ರಣ ಸಿಗುತ್ತದೆ ಆ ನಂತರ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದರು.
7) ಇಂದು ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಸಚಿವ ಸಂಪುಟದಿಂದ ಉಚ್ಚಾಟನೆ ಹಾಗೂ ಬಂಧಿಸುವಂತೆ ಆಗ್ರಹಿಸಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ಗೆ ಮನವಿ ಸಲ್ಲಿಸಿತ್ತು.
8) ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, 2016-17ರಲ್ಲಿ ಮಡಿಕೇರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಕೆ.ಗಣಪತಿ ಸಾವಿನ ಪ್ರಕರಣದಲ್ಲಿ ಅಂದಿನ ಗೃಹ ಸಚಿವರಾಗಿದ್ದ ಕೆ.ಜೆ.ಜಾರ್ಜ್ ಹೆಸರು ಕೇಳಿ ಬಂದಿತ್ತು ನಾನು ಅಂದು ಮುಖ್ಯಮಂತ್ರಿಯಾಗಿ ಜಾರ್ಜ್ ಅವರ ರಾಜೀನಾಮೆಯನ್ನು ಅಂಗೀಕರಿಸಿದೆ. ಈಗಿರುವ ಮುಖ್ಯಮಂತ್ರಿ ಬೊಮ್ಮಾಯಿರವರು ಅದೇ ಕ್ರಮವನ್ನ ಅನುಸರಿಸಬೇಕು ಎಂದು ಆಗ್ರಹಿಸಿದ್ದಾರೆ.
9) ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿಪಕ್ಷಗಳು ಆತ್ಮಹತ್ಯೆ ಪ್ರಕರಣದಲ್ಲಿ ತಪ್ಪು ಹುಡುಕುವ ಕೆಲಸ ಮಾಡುತ್ತಿದ್ದಾರೆ. ತನಿಖೆಯ ನಂತರ ಸತ್ಯಾಂಶ ಹೊರಬರಲಿದೆ ನಾವು ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಕಾನೂನಿನ ಪ್ರಕಾರವೇ ವಿಚಾರಣೆ ನಡೆಯಲಿದೆ ಎಂದು ಹೇಳಿದ್ದಾರೆ.

10) ಈ ಕುರಿತು ಮಾತನಾಡಿರುವ ಸಂತೋಷ್ ಸಹೋದರ ಪ್ರಶಾಂತ್ ಪಾಟೀಲ್, ನನ್ನ ಸಹೋದರನ ಸಾವಿಗೆ ಸಚಿವ ಈಶ್ವರಪ್ಪ ಹಾಗೂ ಅವರ ಸಹಚರರೆ ನೇರ ಕಾರಣ. ನನ್ನ ಸಹೋದರನ ಬಳಿ ಕಾಮಗಾರಿ ವಿಚಾರವಾಗಿ ಕಮಿಷನ್ ಹಣಕ್ಕೆ ಬೇಡಿಕೆ ಇಟ್ಟಿದ್ದರು ಈ ಕುರಿತು ಧ್ವನಿ ಎತ್ತಿದ್ದಕೆ ನನ್ನ ಸಹೋದರನ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಸಿದ್ದರು. ಸಚಿವ ಈಶ್ವರಪ್ಪನ ಬಂಧನವಾಗುವವರೆಗೂ ನನ್ನ ಸಹೋದರನ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಹೇಳಿದ್ದಾರೆ.
11) ಈ ಮಧ್ಯೆ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಘೋಷ್ಠಿ ನಡೆಸಿದ್ದು ಕಾಂಗ್ರೆಸ್ನವರು ಕೈಲಾಸಕ್ಕೆ ಹೋಗಿ ಪ್ರತಿಭಟನೆ ನಡೆಸಿದ್ದರು ನಾನು ಯಾವುದೇ ಕಾರಣಕ್ಕು ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
12) ಸಂತೋಷ್ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಆ ನಂತರ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.






