ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವ ಬದಲಾವಣೆ ಚರ್ಚೆಗೆ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.ಹೈಕಮಾಂಡ್ ಸೂಚನೆ ನೀಡುವವರೆಗೆ ತಾನೇ ಬಜೆಟ್ ಮಂಡಿಸುತ್ತೇನೆ ಎಂದು ಹೇಳಿದ್ದಾರೆ. ಹಾಗೂ ಮುಂದಿನ ಬಜೆಟ್ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ, ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಮಾಧ್ಯಮಗಳಲ್ಲಿ ಮಾತ್ರ ನಡೆಯುತ್ತಿದೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಹೈಕಮಾಂಡ್ ನಿರ್ಧಾರಕ್ಕೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರೂ ಒಪ್ಪಿದ್ದಾರೆ. ಆದ್ದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದಿದ್ದಾರೆ.

ಸಿಎಂ ಸಿದದರಾಮಯ್ಯ ಆಪ್ತರು ಐದು ವರ್ಷ ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿ ಇರುತ್ತಾರೆ ಎನ್ನುತ್ತಿದ್ದಾರೆ. ಮತ್ತೊಂದು ಕಡೆಯಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ಅಧಿಕಾರ ಹಸ್ತಾಂತರದ ಮಾತನ್ನು ಆಡುತ್ತಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, ಬಜೆಟ್ ನಂತರ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ, ವಿಶೇಷವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರೊಂದಿಗೆ ಸಭೆ ನಡೆಸಿ ಬಹು ಕಾಲದಿಂದ ಬಾಕಿಯಿರುವ ಸಚಿವ ಸಂಪುಟ ಪುನಾರಚನೆಗೆ ಅನುಮತಿ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.






