
ಬೀದರ್ :ಪರಕೀಯರ ಆಳ್ವಿಕೆಯಿಂದ ಮುಕ್ತಿಗೊಳಿಸಿ ದೇಶವನ್ನು ಸ್ವಾತಂತ್ರ್ಯಗೊಳಿಸಲು ಅಸಂಖ್ಯಾತ ಹೋರಾಟಗಾರರು ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ಅವರ ಹೋರಾಟವನ್ನು ಸ್ಮರಿಸಬೇಕು. ದೇಶದ ಪ್ರತಿಯೊಬ್ಬರಲ್ಲಿಯೂ ದೇಶಪ್ರೇಮ ಜಾಗೃತಗೊಳ್ಳಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.

ಔರಾದ(ಬಿ) ತಾಲ್ಲೂಕು ಆಡಳಿತದ ವತಿಯಿಂದ ಆಗಸ್ಟ್ 15ರಂದು ಪಟ್ಟಣದ ತಹಸೀಲ್ ಕಚೇರಿ ಆವರಣದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮಹಾತ್ಮಗಾಂಧಿ, ಸುಭಾಷಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್, ವೀರ ಸಾವರ್ಕರ್, ಬಾಲ ಗಂಗಾಧರ ತಿಲಕ್, ಭಗತಸಿಂಗ್, ಚಂದ್ರಶೇಖರ್ ಆಜಾದ್, ರಾಜಗುರು, ಸುಖದೇವರಂತಹ ಅನೇಕ ಹೋರಾಟಗಾರರು ತಮ್ಮ ಜೀವನವನ್ನೇ ದೇಶಕ್ಕಾಗಿ ಮುಡಿಪಾಗಿಟ್ಟಿದ್ದರು. ಅಂತಹ ದೇಶದಲ್ಲಿ ಹುಟ್ಟಿದಕ್ಕೆ ಗರ್ವಪಡಬೇಕು ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರಿಂದ ದೇಶದಲ್ಲಿ ಉತ್ತಮ ಕೆಲಸಗಳಾಗುತ್ತಿದೆ. ವಿಕಸಿತ ಬಾರತದ ಕನಸು ನನಸಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲಿ ದೇಶ ಪ್ರಗತಿ ಸಾಧಿಸುತ್ತಿದೆ. ಬಜೆಟ್ನಲ್ಲಿ ರೈತರಿಗಾಗಿ ವಿಶೇಷ ಆದ್ಯತೆ, ದೇಶದ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ. ಸ್ವಾತಂತ್ರö್ಯ ದಿನಾಚರಣೆಯನ್ನು ವಿಶೇಷವಾಗಿಸಲು ಮತ್ತು ಜನರಲ್ಲಿ ದೇಶಭಕ್ತಿ ಮೂಡಿಸಲು ಆರಂಭಿಸಿರುವ ‘ಹರ್ ಘರ್ ತಿರಂಗಾ’ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿದರು.
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಸರ್ವಾಂಗೀಣ ಅಭಿವೃದ್ಧಿಪಡಿಸುವುದು ನನ್ನ ಆದ್ಯತೆಯಾಗಿದ್ದು, ಅದರಂತೆ ಕೆಲಸ ಮಾಡುತ್ತಿದ್ದೇನೆ. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ಕೊಡಲಾಗಿದೆ. ತರಗತಿ ಕೋಣೆಗಳ ನಿರ್ಮಾಣ, ಕಾಂಪೌಂಡ್, ಶೌಚಾಲಯ, ಆಟದ ಮೈದಾನ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಸಲಾಗುತ್ತಿದೆ. ವಸತಿ ಶಾಲೆಗಳು, ಆಸ್ಪತ್ರೆ, ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ.

ಯುವಜನತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಪ್ರಯತ್ನಸುತ್ತಿದ್ದೇನೆ. ಸಿಪೆಟ್ ಕೇಂದ್ರಕ್ಕೆ ಮುಖ್ಯಮಂತ್ರಿಯವರಿAದ ಭೂಮಿ ಪೂಜೆ ನೆರವೇರಿಸಲಾಗಿದೆ. ಹೆಡಗಾಪೂರನಲ್ಲಿ ಗೋಶಾಲೆ ನಿರ್ಮಾಣಗೊಂಡಿದೆ. ಜಾನುವಾರು ತಳಿ ಸಂವರ್ಧನ ಕೇಂದ್ರಕ್ಕೆ ಪೂಜೆ ನೆರವೇರಿಸಲಾಗಿದೆ. ಚಿಂತಾಕಿ, ಹೊರಂಡಿ, ಬಲ್ಲೂರ(ಜೆ)ನಲ್ಲಿ ವಸತಿ ಶಾಲೆಗಳನ್ನು ನಿರ್ಮಿಸಲಾಗುತ್ತಿದೆ. ನಾಗೂರ್ನಲ್ಲಿ 220 ಕೆ.ವಿ ವಿದ್ಯುತ್ ಉಪ ಕೇಂದ್ರ ಹೀಗೆ ಹತ್ತು ಹಲವು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಹೇಳಿದರು.

ತಹಸೀಲ್ದಾರರಾದ ಮಲಶೆಟ್ಟಿ ಚಿದ್ರೆ ಅವರು ಧ್ವಜಾರೋಹಣ ನೆರವೇರಿಸಿದರು.ಶಿಕ್ಷಕ ಸಂಜೀವಕುಮಾರ ಬಿರಾದಾರ ಸ್ವಾತಂತ್ರ್ಯ ದಿನಾಚರಣೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಎಪಿಎಂಸಿ ಅಧ್ಯಕ್ಷ ದೊಂಡಿಬಾ ನರೋಟೆ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬೀರೇಂದ್ರ ಸಿಂಗ್ ಠಾಕೂರ್, ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾರಾಣಿ, ಪೊಲೀಸ್ ವೃತ್ತ ನಿರೀಕ್ಷಕರಾದ ರಘುವೀರಸಿಂಗ್ ಠಾಕೂರ್, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸ್ವಾಮಿದಾಸ, ಅಧಿಕಾರಿಗಳಾದ ಶಿವಕುಮಾರ ಘಾಟೆ, ವೆಂಕಟೇಶ ಶಿಂಧೆ, ಡಾ.ಗಾಯತ್ರಿ, ರವೀಂದ್ರ, ಧೂಳಪ್ಪ ಸೇರಿದಂತೆ ಅಧಿಕಾರಿಗಳು, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಶಾಸಕರು ಸನ್ಮಾನಿಸಿದರು. ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಕಾರ್ಯಕ್ರಮ ನಡೆಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶಾಸಕರು ಬಹುಮಾನ ನೀಡಿ ಪ್ರೋತ್ಸಾಹಿಸಿದರು.
ಬಿಜೆಪಿ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಔರಾದ(ಬಿ) ಬಿಜೆಪಿ ಮಂಡಲ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ, ಬಿಜೆಪಿ ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಶಿವರಾಜ ಅಲ್ಮಾಜೆ, ಸಚಿನ ರಾಠೋಡ್, ಬಸವರಾಜ ಹಳ್ಳೆ, ರಮೇಶ ಗೌಡ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.