
ಧಾರವಾಡ :69ನೇ ಕರ್ನಾಟಕ ರಾಜ್ಯೋತ್ಸವ. ಈ ಕನ್ನಡ ಹಬ್ಬವನ್ನು ನಾವೆಲ್ಲರೂ ಅತ್ಯಂತ ಸಡಗರ, ಸಂಭ್ರಮದಿಂದ ಧ್ವಜಾರೋಹಣ ಮಾಡುವ ಮೂಲಕ ಆಚರಿಸುತ್ತಿದ್ದೇವೆ. ಇದು ನಮಗೆಲ್ಲರಿಗೂ ಪ್ರಮುಖ ಮತ್ತು ಹೆಮ್ಮೆಯ ಹಬ್ಬವಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೇಳಿದರು.

ನಗರದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ 69ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ರಾಷ್ಟ್ರೀಯ ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು.

ಕರ್ನಾಟಕ ಏಕೀಕರಣ ದೇಶದ ಸ್ವಾತಂತ್ರ್ಯ ಹೋರಾಟದಂತೆ ಪ್ರಾಮುಖ್ಯತೆ ಪಡೆದಿದೆ. ಇದೇ ಸಂದರ್ಭದಲ್ಲಿ ಭೌಗೋಳಿಕವಾಗಿ 19 ವಿವಿಧ ಆಡಳಿತ ಭಾಗಗಳಲ್ಲಿ ಹರಿದು ಹಂಚಿ ಹೋಗಿದ್ದ ಕನ್ನಡದ ಮನಸ್ಸುಗಳನ್ನು ಭಾಗಾವಾರು ಪ್ರಾಂತ್ಯಗಳ ಆಧಾರದ ಮೇಲೆ 1956 ರಲ್ಲಿ ಒಗ್ಗೂಡಿಸಲಾಯಿತು.ಕನ್ನಡ ಮಾತನಾಡುವ ವಿವಿಧ ಭಾಗಗಳು ಸೇರಿ ಮೈಸೂರು ರಾಜ್ಯವು ಉದಯವಾಯಿತು ಎಂದರು.




ಕರ್ನಾಟಕ ಏಕೀಕರಣ ಚಳವಳಿಯನ್ನು ಹುಟ್ಟುಹಾಕಿದ್ದು ಧಾರವಾಡ ಜಿಲ್ಲೆ. ಈ ಸಂಗತಿ ನಮ್ಮೆಲ್ಲರ ಅಭಿಮಾನದ ಸಂಕೇತವಾಗಿದೆ. ಏಕೀಕರಣ ಚಳವಳಿಯ ಪ್ರಮುಖರಾದ ಆಲೂರ ವೆಂಕಟರಾವ್, ರಾ.ಹ.ದೇಶಪಾಂಡೆ, ಡೆಪ್ಯೂಟಿ ಚನ್ನಬಸಪ್ಪ, ಅದರಗುಂಚಿ ಶಂಕರಗೌಡ ಪಾಟೀಲ ಮತ್ತು ಇತರರನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಕರ್ನಾಟಕವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ರಾಜ್ಯವಾಗಿದೆ. ಕನ್ನಡ ಭಾμÉಯು ನಮ್ಮ ಪರಂಪರೆ, ಸಾಹಿತ್ಯವನ್ನು ಸಾರಿ ಹೇಳುತ್ತದೆ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಎಲ್ಲಾ ಕಚೇರಿಗಳು, ಅಂಗಡಿಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಲು ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತರಲಾಗಿದೆ. ಇಂದು ರಾಜ್ಯದಾದ್ಯಂತ ಸರ್ಕಾರದಿಂದ ಕನ್ನಡಾಂಬೆಗೆ ನುಡಿ-ನಮನ ಅರ್ಪಿಸಲಾಗುತ್ತಿದೆ ಎಂದು ಸಚಿವ ಸಂತೋಷ ಲಾಡ್ ತಿಳಿಸಿದರು.
ನರೇಂದ್ರ ಗ್ರಾಮದ ರಾಮಚಂದ್ರ ಹನುಮಂತ ದೇಶಪಾಂಡೆಯವರು ಕನ್ನಡದ ಕವಿ ಹಾಗೂ ಇತಿಹಾಸಕಾರರಾಗಿದ್ದರು. ಧಾರವಾಡ ಜಿಲ್ಲೆಯು ಸಾಹಿತ್ಯ ಹಾಗೂ ಸಾಂಸ್ಕಂತಿಕವಾಗಿ ಶ್ರೀಮಂತ ಜಿಲ್ಲೆಯಾಗಿದೆ. ಕರ್ನಾಟಕ ಸರ್ಕಾರವು ಡಾ. ದ.ರಾ.ಬೇಂದ್ರೆ, ಡಾ.ಮಲ್ಲಿಕಾರ್ಜುನ ಮನಸೂರ, ಬಸವರಾಜ ರಾಜಗುರು, ಆಲೂರು ವೆಂಕಟರಾವ್, ಡಿ.ವ್ಹಿ.ಹಾಲಭಾವಿ, ಡಾ. ಗಂಗೂಬಾಯಿ ಹಾನಗಲ್, ಡಾ. ಎಂ.ಎಂ. ಕಲಬುರ್ಗಿ ಅವರ ಹೆಸರಿನಲ್ಲಿ ಟ್ರಸ್ಟ್ಗಳನ್ನು ಸ್ಥಾಪಿಸುವ ಮುಖಾಂತರ ಕನ್ನಡ ಸಂಸ್ಕೃತಿಗೆ ಪ್ರೋತ್ಸಾಹ ನೀಡುತ್ತಿದೆ ಎಂದರು.
ರಾಜ್ಯ ಸರ್ಕಾರವು ನುಡಿದಂತೆ ನಡೆದಿದ್ದು, ಜನಪರ ಯೋಜನೆಗಳಾದ ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಯೋಜನೆ, ಗೃಹ ಜ್ಯೋತಿ ಹಾಗೂ ಯುವ ನಿಧಿ ಯೋಜನೆಯನ್ನು ಇಡೀ ರಾಜ್ಯವು ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ.
ನಾವು ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತೇವೆ. ಬರೆಯುತ್ತೇವೆ, ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇವೆ. ಕನ್ನಡ ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಶ್ರಮಿಸುತ್ತೇವೆ ಎಂದು ಇದೇ ವೇಳೆ ಪ್ರಮಾಣ ಮಾಡೋಣ ಎಂದು ಸಾರ್ವಜನಿಕರಲ್ಲಿ ಸಚಿವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರೊ ಐ.ಜಿ.ಸನದಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಮಾನಿಂಗ್ ನಂದಗಾವಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಡಾ ಆಯುಕ್ತ ಡಾ.ಸಂತೋಷ ಬಿರಾದಾರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ, ತಹಶೀಲದಾರರಾದ ಡಿ.ಎಚ್.ಹೂಗಾರ, ಕೆ.ಆರ್.ಪಾಟೀಲ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು, ಹಿರಿಯ ಅಧಿಕಾರಿ ಸಿಬ್ಬಂದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಹನೀಯರ ಪ್ರತಿಮೆಗೆ ಮಾಲಾರ್ಪಣೆ: ಕಾರ್ಯಕ್ರಮ ಪೂರ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಬಳಿಯ ಕಾರ್ಗಿಲ್ ಸ್ಮಾರಕ, ಡೆಪ್ಯೂಟಿ ಚನ್ನಬಸಪ್ಪ ಪ್ರತಿಮೆ, ಕೆ.ಜಿ.ಕುಂದಣಗಾರ ಪ್ರತಿಮೆಗೆ ಸಚಿವ ಸಂತೋಷ ಲಾಡ್ ಅವರು ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.
ಕಾರ್ಮಿಕ ಇಲಾಖೆಯಿಂದ ಅಸಂಘಟಿತ ವರ್ಗದ ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ಸಾರ್ವಜನಿಕ ಪ್ರಚಾರಕ್ಕಾಗಿ ರೂಪಿಸಿರುವ ಆರು ಆಟೋಗಳಿಗೆ ಸಚಿವರು ಹಸಿರು ಬಾವುಟ ತೋರಿ ಚಾಲನೆ ನೀಡಿದರು.
ಹಲ್ಮಡಿ ಶಾಸನದ ಪ್ರತಿಕೃತಿಯ ಅನಾವರಣ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ ಅಭಿಯಾನದಡಿ, ಇಂದು ಬೆಳಿಗ್ಗೆ, ಕನ್ನಡದ ಮೊದಲ ಶಾಸನವಾದ ಹಲ್ಮಡಿ ಶಾಸನದ ಪ್ರತಿಕೃತಿಯನ್ನು ಕಾರ್ಮಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕøತಿಕ ಭವನದ ಆವರಣದಲ್ಲಿ ಅನಾವರಣಗೊಳಿಸಿದರು.





