ಆಡಳಿತದಲ್ಲಿನ ಅಕ್ರಮ, ಅವ್ಯವಹಾರ, ಕರ್ತವ್ಯಲೋಪ ಮತ್ತು ಭ್ರಷ್ಟಾಚಾರವನ್ನು ನಿಯಂತ್ರಿಸಬೇಕಾದ ಲೋಕಾಯುಕ್ತ ಸಂಸ್ಥೆಯೆ ನಿರಂತರವಾಗಿ ಅಕ್ರಮಗಳಲ್ಲಿ ಮತ್ತು ಅವ್ಯವಹಾರಗಳಲ್ಲಿ ಸಿಲುಕುತ್ತಿರುವುದು ದುರದೃಷ್ಟಕರ. ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗುವ ಬಹುತೇಕ ಪ್ರಕರಣಗಳು ತಾರ್ಕಿಕ ಅಂತ್ಯ ಕಾಣದೆ ಮುಕ್ತಾಯವಾಗುತ್ತಿವೆ ಮತ್ತು ಸ್ಪಷ್ಟವಾಗಿ ಭ್ರಷ್ಟಾಚಾರವೆಸಗಿರುವ ಪ್ರಕರಣಗಳು ಕೂಡ ವಿಲೇವಾರಿಯಾಗದೆ ದೂಳು ಹಿಡಿಯುತ್ತಿವೆ. ಇದು ಲೋಕಾಯುಕ್ತ ಸಂಸ್ಥೆಯೆ ಹಳ್ಳ ಹಿಡಿದಿರುವುದನ್ನು ತೋರಿಸುತ್ತದೆ.

ಲೋಕಾಯುಕ್ತ ಸಂಸ್ಥೆಯ ಘನತೆಯನ್ನು ಮತ್ತು ವಿಶ್ವಾಸವನ್ನು ಎತ್ತಿ ಹಿಡಿಯಬೇಕಾದ ಹೊಣೆಗಾರಿಕೆ ಹಾಲಿ ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ್ ಅವರ ಮೇಲಿರುತ್ತದೆ, ಆದರೆ ಪ್ರಸ್ತುತ ಲೋಕಾಯುಕ್ತರು ಈ ಕಾರ್ಯದಲ್ಲಿ ಸಂಪೂರ್ಣವಾಗಿ ವಿಫಲರಾಗಿರುವುದು ಸ್ಪಷ್ಟವಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ವ್ಯಾಪಕವಾಗಿ ಅಕ್ರಮಗಳು ನಡೆಯುತ್ತಿದ್ದರೂ ಕೂಡ ಅದನ್ನು ನಿಯಂತ್ರಿಸುವಲ್ಲಿ ಅವರು ವಿಫಲರಾಗಿದ್ದಾರೆ. ಹಾಗೆಯೆ, ಅವರ ಕುಟುಂಬದವರು ಅವರ ಸ್ಥಾನವನ್ನು ದುರ್ಬಳಕೆ ಮಾಡಿರುವ ಬಗ್ಗೆ ಗಂಭೀರ ಆರೋಪವಿದ್ದು, ಆ ಬಗೆಗಿನ ಪ್ರಕರಣವು ನ್ಯಾಯಾಲಯದಲ್ಲಿದೆ. ಇಂತಹವರು ಲೋಕಾಯುಕ್ತರ ಸ್ಥಾನದಲ್ಲಿ ಮುಂದುವರೆಯುವುದು ಉಚಿತವಲ್ಲ. ಈ ಬಗ್ಗೆ ನೈತಿಕ ಹೊಣೆಗಾರಿಕೆ ಹೊತ್ತು ಲೋಕಾಯುಕ್ತರು ರಾಜಿನಾಮೆ ನೀಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆಗ್ರಹಿಸುತ್ತದೆ.
ಕರ್ನಾಟಕ ಲೋಕಾಯುಕ್ತವು ದೇಶಕ್ಕೆ ಮಾದರಿಯಾದಂತಹ ಸಂಸ್ಥೆಯಾಗಿತ್ತು, ಆದರೆ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಅದಕ್ಷತೆ, ಅಕ್ರಮಗಳಿಗೆ ಕುಖ್ಯಾತಿ ಪಡೆದು ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಲೋಕಾಯುಕ್ತ ಸಂಸ್ಥೆಯ ಅಕ್ರಮಗಳ ವಿರುದ್ದ ಮತ್ತು ಅದರ ಬಲವರ್ಧನೆಗಾಗಿ ಕೆ.ಆರ್.ಎಸ್. ಪಕ್ಷವು ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದೆ. ಈ ವಿಚಾರಗಳ ಬಗ್ಗೆ ಧ್ವನಿ ಎತ್ತಬೇಕಾದ ವಿರೋಧ ಪಕ್ಷಗಳು ಗಾಢ ಮೌನವಹಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ ಮತ್ತು ಬಲಿಷ್ಠ ಲೋಕಾಯುಕ್ತವು ಅವರಿಗೂ ಕೂಡ ಬೇಕಾಗಿದಿಲ್ಲ ಎನ್ನುವುದು ಸ್ಪಷ್ಟವಾಗಿದೆ. ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಾಲು ಸಾಲು ಹಗರಣಗಳು ನಡೆಯುತ್ತಿದ್ದು, ನಿಯಂತ್ರಿಸಲು ಸರ್ಕಾರದ ವತಿಯಿಂದ ಯಾವುದೇ ಕ್ರಮವಾಗುತ್ತಿಲ್ಲ.

ಸಿದ್ದರಾಮಯ್ಯನವರ ಸರ್ಕಾರವು ಕೇವಲ ಗ್ಯಾರೆಂಟಿಗಳ ಸುತ್ತ ಗಿರಕಿ ಹೊಡೆಯುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಸಂಪನ್ಮೂಲದ ಕೊರತೆ ಕಾಡಲಿದ್ದು, ದಕ್ಷ ಆಡಳಿತ ಮತ್ತು ಭ್ರಷ್ಟಾಚಾರ ನಿಯಂತ್ರಣದ ಮೂಲಕ ಕಲ್ಯಾಣ ಯೋಜನೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಂಪನ್ಮೂಲ ಕ್ರೋಢೀಕರಿಸಬಹುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಹೇಳುತ್ತಾ ಬಂದಿದೆ. ಈ ಬಗ್ಗೆ ಗಮನ ನೀಡದೆ, ಈಗ ಸ್ವಪಕ್ಷೀಯರಿಂದಲೆ ಅಪಸ್ವರ ಕೇಳಿಬರುವಂತಾಗಿದೆ. ಸರ್ಕಾರದ ಬಹುತೇಕ ಮಂತ್ರಿಗಳೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎನ್ನುವುದಕ್ಕೆ ಕಾಂಗ್ರೆಸ್ ಪಕ್ಷದ ಶಾಸಕರುಗಳು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಗಂಭೀರ ಆರೋಪ ಮಾಡಿರುವುದೆ ಸಾಕ್ಷಿಯಾಗಿದೆ. ಇನ್ನು ಲೋಕಾಯುಕ್ತ ಪೊಲೀಸರ ವಸೂಲಿಬಾಜಿಗೆ ಪ್ರಮುಖವಾಗಿ ಅಬಕಾರಿ ಇಲಾಖೆಯ ಬಹುತೇಕ ಅಧಿಕಾರಿಗಳು ಗುರಿಯಾಗಿದ್ದಾರೆ. ಇಂದು ಅಬಕಾರಿ ಇಲಾಖೆಯಲ್ಲಿ ಅಸಹ್ಯಕರ ಅವ್ಯವಹಾರ, ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆಯುತ್ತಿರುವುದು ಸ್ಪಷ್ಟವಾಗಿದೆ.
ಇವನ್ನೆಲ್ಲ ನಿಯಂತ್ರಿಸಬೇಕಾದ ಅಬಕಾರಿ ಸಚಿವರಾದ ಆರ್. ಬಿ. ತಿಮ್ಮಾಪುರ ಅವರು ಆರೋಪಿಯೊಂದಿಗೆ ಸಂಪರ್ಕದಲ್ಲಿದ್ದರು ಎನ್ನುವುದು ಗಂಭೀರ ವಿಷಯವಾಗಿದೆ. ಆದ್ದರಿಂದ ಈ ಕೂಡಲೆ ಆರ್. ಬಿ. ತಿಮ್ಮಾಪುರ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು, ಇಲ್ಲದಿದ್ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರನ್ನು ತಮ್ಮ ಸಚಿವ ಸಂಪುಟದಿಂದ ವಜಾ ಮಾಡಬೇಕು. ಹಾಗೆಯೆ ಈ ಪ್ರಕರಣದ ತನಿಖೆಯಲ್ಲಿ ಹಲವು ಸಚಿವರು ಮತ್ತು ಅವರ ಆಪ್ತರು ಆರೋಪಿಗಳೊಂದಿಗೆ ನಂಟು ಹೊಂದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದು, ಆ ಸಚಿವರುಗಳನ್ನು ಕೂಡ ತಮ್ಮ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಕೆ.ಆರ್.ಎಸ್. ಪಕ್ಷ ಆಗ್ರಹಿಸುತ್ತದೆ.

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ ಅಕ್ರಮಗಳನ್ನು ಲೋಕಾಯುಕ್ತ ಪೊಲೀಸರೇ ತನಿಖೆ ಮಾಡುತ್ತಿದ್ದಾರೆ, ಆದರೆ ರಾಜ್ಯ ಪೊಲೀಸ್ ಇಲಾಖೆ ಹಾಗು ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ಒಂದೇ ಮೂಲದವರಾಗಿದ್ದು, ಇವೆರಡೂ ಸಂಸ್ಥೆಗಳಿಂದ ತನಿಖೆ ಮಾಡುವುದು ಸ್ವಹಿತಾಸಕ್ತಿಯ ಸಂಘರ್ಷವಾಗುತ್ತದೆ ಮತ್ತು ತನಿಖೆ ಪಾರದರ್ಶಕವಾಗಿ ನಡೆಯುವ ಸಂಭವ ಬಹಳ ಕಡಿಮೆ ಇರುತ್ತದೆ. ಆದ್ದರಿಂದ ಸರ್ಕಾರವು ಈ ಕೂಡಲೇ, ಈ ಪ್ರಕರಣವನ್ನು ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐಗೆ ವಹಿಸಬೇಕೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆಗ್ರಹಿಸುತ್ತದೆ. ಈಗಾಗಲೇ, ಕೆ.ಆರ್.ಎಸ್. ಪಕ್ಷವು ನಿನ್ನೆ, (23-06-2025) ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದು, ವ್ಯಾಪಕ ಅಕ್ರಮ ಹಣ ವರ್ಗಾವಣೆ ನಡೆದಿರುವ ಈ ಪ್ರಕರದಲ್ಲಿ ದೂರು ದಾಖಲಿಸಿಕೊಂಡು ತನಿಖೆ ಮಾಡಬೇಕೆಂದು ಮನವಿ ಮಾಡಿದೆ ಮತ್ತು ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ವ್ಯಾಪಕ ಹೋರಾಟಗಳನ್ನು ಹಮ್ಮಿಕೊಳ್ಳಲಿದೆ.
ಪತ್ರಿಕಾ ಗೊಷ್ಠಿಯನ್ನು ಉದ್ದೇಶಿಸಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರು ಮಾತನಾಡಿದರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ. ಎನ್. ಮತ್ತು ಕಾರ್ಯದರ್ಶಿ ಎನ್. ನರಸಿಂಹಮೂರ್ತಿ ಉಪಸ್ಥಿತರಿದ್ದರು.