ಕರ್ನಾಟಕ:
ಬಂಗಾಳಕೊಲ್ಲಿ ನಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕ ರಾಜ್ಯದಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು, ದಾವಣಗೆರೆ, ಬೆಳಗಾವಿ, ಬೀದರ್ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇನ್ನೊಂದೆಡೆ, ಹವಾಮಾನ ಬದಲಾವಣೆಯ ಪರಿಣಾಮವಾಗಿ ರಾಜ್ಯದ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ಪ್ರದೇಶದಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಆಲಿಕಲ್ಲು ಮಳೆ ಜನರನ್ನು ಅಚ್ಚರಿಗೊಳಿಸಿದೆ. ಮಳೆಯ ತೀವ್ರತೆಗೆ ರಸ್ತೆಗಳು ಮಂಜುಗಡ್ಡೆಯಂತೆ ಬಿಳಿಯಾಗಿ ಕಾಣಿಸಿಕೊಂಡಿದ್ದು, ಸ್ಥಳೀಯರಿಗೆ ಇದು ‘ಕಾಶ್ಮೀರ’ದಂತ ಅನುಭವ ನೀಡಿತು.

ಕಲಘಟಗಿಯಿಂದ ಮಾಚಾಪುರಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆಲಿಕಲ್ಲುಗಳು ಜಮಾಯಿಸಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ನಂತರ ಜೆಸಿಬಿ ಯಂತ್ರಗಳ ಮೂಲಕ ಹಿಮದಂತೆ ಕಂಡ ಆಲಿಕಲ್ಲುಗಳನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಸುಗಮಗೊಳಿಸಲಾಯಿತು.

ಒಟ್ಟಾರೆ, ಮುಂದಿನ ಕೆಲ ದಿನಗಳ ಕಾಲ ರಾಜ್ಯದಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಇದನ್ನೂ ಓದಿ
ಕರ್ನಾಟಕದಲ್ಲಿ ಅಕಾಲಿಕ ಮಳೆ:ಆಲಿಕಲ್ಲು ಅಬ್ಬರ- ಹಲವು ಜಿಲ್ಲೆಗಳ ಸಮಗ್ರ ವರದಿ ಇಲ್ಲಿದೆ






