ಚಾಮರಾಜನಗರ: ಇಂದು ನಾಡಿನೆಲ್ಲೆಡೆ ಜನರು ಶಿವರಾತ್ರಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದು, ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಶನಿವಾರ ಲಕ್ಷಕ್ಕೂ ಹೆಚ್ಚು ಭಕ್ತರು ಮಹದೇಶ್ವರ ಸ್ವಾಮಿಯ ದರ್ಶನ ಪಡೆದರು.
ಬೆಟ್ಟದಲ್ಲಿ ಐದು ದಿನಗಳ ಮಹಾಶಿವರಾತ್ರಿ ಜಾತ್ರೆಗೆ ಶುಕ್ರವಾರವೇ ಚಾಲನೆ ನೀಡಲಾಗಿದ್ದು, ಎರಡನೇ ಹಾಗೂ ಶಿವರಾತ್ರಿ ದಿನವಾದ ಶನಿವಾರ ಮಹದೇಶ್ವರ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ, ವಿವಿಧ ಅಭಿಷೇಕಗಳು, ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.
ಪಾದಯಾತ್ರೆಯ ಮೂಲಕ ಬೆಟ್ಟಕ್ಕೆ ಬಂದಿದ್ದ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಮಹದೇಶ್ವರ ಸ್ವಾಮಿಯ ದರ್ಶನ ಮಾಡಿ ಹರಕೆ ತೀರಿಸಿದರು.

ಮೂರು ದಿನಗಳ ಅವಧಿಯಲ್ಲಿ ಒಂದೂವರೆ ಲಕ್ಷದಷ್ಟು ಜನರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಜಿಲ್ಲೆ, ಹೊರ ಜಿಲ್ಲೆ ಹಾಗೂ ನೆರೆಯ ತಮಿಳುನಾಡಿನಿಂದ ಬಂದಿರುವ ಭಕ್ತರು ಹುಲಿ ವಾಹನ, ಬಸವ ವಾಹನ, ರುದ್ರಾಕ್ಷಿ ಮಂಟಪ ಸೇವೆಗಳನ್ನು ನೆರವೇರಿಸಿದರು. ದೇವಾಲಯದ ಹೊರ ಆವರಣದಲ್ಲಿ ಉರುಳು ಸೇವೆ ಮಾಡಿದರು. ಈಡುಕಾಯಿ ಒಡೆದು, ದೂಪ ಹಚ್ಚಿ ಹರಕೆ ತೀರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಶನಿವಾರ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಸ್ ಪಿ ಪದ್ಮಿನಿ ಸಾಹು, ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಸ್.ಕಾತ್ಯಾಯಿನಿದೇವಿ, ಉಪವಿಭಾಗಾಧಿಕಾರಿ ಗೀತಾ ಹುಡೇದ, ಪ್ರಾಧಿಕಾರದ ಉಪ ಕಾರ್ಯದರ್ಶಿ ಬಸವರಾಜು ಇತರರು ಇದ್ದರು