ನವದೆಹಲಿ: ತಮ್ಮ ಭಾಷಣದ ಬಳಿಕ ವೇದಿಕೆಯಲ್ಲಿ ‘ಶುದ್ಧೀಕರಣ’ ನಡೆಸಿದ ಘಟನೆ ಕುರಿತು ಕಾಂಗ್ರೆಸ್ನ ಹಲವು ನಾಯಕರು ಮೌನ ವಹಿಸಿದ್ದು, ಘಟನೆಯ ಬಗ್ಗೆ ಬಹಿರಂಗವಾಗಿ ಖಂಡಿಸದಿರುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಶುದ್ಧೀಕರಣ ನಡೆಸಿದ ವಿಚಾರದಲ್ಲಿ ಪಕ್ಷದ ಕೆಲ ಹಿರಿಯ ನಾಯಕರಿಂದ ನಿರೀಕ್ಷಿತ ಬೆಂಬಲ ಸಿಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ತಮ್ಮ ಮನಸ್ಸಿನಲ್ಲಿದ್ದ ನೋವನ್ನು ಮಲ್ಲಿಕಾರ್ಜುನ ಖರ್ಗೆ ನೇರವಾಗಿ ಪಕ್ಷದ ನಾಯಕರ ಮುಂದೆ ತೆರೆದಿಟ್ಟಿದ್ದಾರೆ.

ಆಗಸ್ಟ್ 8ರಂದು ಉತ್ತರಾಖಂಡದ ಹಾಲ್ದ್ವಾನಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ್ದರು. ಬಳಿಕ ಕಾರ್ಯಕ್ರಮ ನಡೆದ ಸ್ಥಳದಲ್ಲಿ ಶ್ರೀರಾಮ ಸೇನೆ ‘ಶುದ್ಧೀಕರಣ’ ಹವನ ನಡೆಸಿತ್ತು. ಈ ಘಟನೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಇದು ದಲಿತ ವಿರೋಧಿ ಮನೋಭಾವವನ್ನು ತೋರಿಸುತ್ತದೆ ಎಂದು ಆರೋಪಿಸಿತ್ತು. ರಾಜ್ಯಸಭೆಯಲ್ಲೂ ಈ ವಿಷಯ ಪ್ರಸ್ತಾಪಿಸಿದ್ದ ಖರ್ಗೆ ಅವರು, ಇಂತಹ ಘಟನೆಗಳು ಅಸ್ಪೃಶ್ಯತೆಯನ್ನು ನೆನಪಿಸುತ್ತವೆ ಎಂದು ಹೇಳಿದ್ದರು. ಜೊತೆಗೆ, ಶುದ್ಧೀಕರಣ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.







