
ಮಂಗಳೂರಿನಲ್ಲಿ ಇಂದು ವಕ್ಫ್ ಕಾಯಿದೆ ವಿರೋಧಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮಂಗಳೂರು ನಗರದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಎರಡು ಸಾವಿರಕ್ಕೂ ಅಧಿಕ ಪೊಲೀಸರು ಮತ್ತು ಅರೆಸೇನಾ ಪಡೆಯಿಂದ ಭಧ್ರತೆ ಕೈಗೊಳ್ಳಲಾಗಿದೆ. 5 ಜನ ಎಸ್ಪಿ ಮತ್ತು ಅಡಿಷನಲ್ ಎಸ್ಪಿ, 20 ಡಿವೈಎಸ್ಪಿ, 230 ಇನ್ಸ್ ಪೆಕ್ಟರ್ ಸೇರಿದಂತೆ 2000ಕ್ಕೂ ಅಧಿಕ ಸಿಬ್ಬಂದಿ ನೇಮಕ ಮಾಡಲಾಗಿದೆ. 20 ಕೆಎಸ್ಆರ್ಪಿ ತುಕಡಿ, 20 ಶಸ್ತ್ರಾಸ್ತ್ರ ಪೊಲೀಸ್ ಪಡೆಯನ್ನು ನಿಯೋಜನೆ ಮಾಡಲಾಗಿದೆ.

ಪ್ರತಿಭಟನಾ ಸ್ಥಳ ಮತ್ತು ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸ್ರು ಭದ್ರತೆ ಕೈಗೊಳ್ಳಲಾಗಿದೆ. ಮಂಗಳೂರು ನಗರದ ಹಲವು ಕಡೆ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಇಡೀ ದಿನದ ಕಾರ್ಯಕ್ರಮವನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡುತ್ತೇವೆ. ಪ್ರತಿಭಟನೆಯನ್ನು ಆಯೋಜನೆ ಮಾಡಿದವರಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಆಯೋಜಕರಿಂದ ಮುಚ್ಚಳಿಕೆ ಬಾಂಡ್ ಪಡೆದುಕೊಳ್ಳಲಾಗಿದೆ. ಹೆದ್ದಾರಿಯಲ್ಲಿ ಯಾವುದೇ ಸಂಚಾರ ನಿರ್ಬಂಧ ಮಾಡಿಲ್ಲ. ಆದರೆ ಮುನ್ನಚ್ಚೆರಿಕಾ ಕ್ರಮವಾಗಿ ರಸ್ತೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಲ್ಲಿ ಭಾರಿ ಪ್ರತಿಭಟನೆ ನಡೆಯಲಿದೆ. ಹೀಗಾಗಿ ಶುಕ್ರವಾರ ವ್ಯಾಪಾರ ವಹಿವಾಟು ಬಂದ್ ಮಾಡಲು ಮುಸ್ಲಿಂ ಸಮುದಾಯದ ವರ್ತಕರು ನಿರ್ಧರಿಸಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದಲೇ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಮುಸ್ಲಿಂ ನಾಯಕರು ಸಜ್ಜಾಗಿದ್ದಾರೆ. ಮಂಗಳೂರಿನ ಕಣ್ಣೂರು ಬಳಿ ಇರುವ ಗಾರ್ಡನ್ ಮೈದಾನದಲ್ಲಿ ಪ್ರತಿಭಟನೆಗೆ ಅಂತಿಮ ಹಂತದ ತಯಾರಿ ನಡೀತಿದೆ. 4 ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಅಧಿಕ ಜನರು ಪ್ರತಿಭಟನೆಯಲ್ಲಿ ಸೇರುವ ನಿರೀಕ್ಷೆ ಇದೆ ಎನ್ನಲಾಗಿದೆ.