ಬೆಂಗಳೂರು: ದೆಹಲಿಯಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಎಐ ಶೃಂಗಸಭೆ ವೇಳೆ ಶರ್ಟ್ ಬಿಚ್ಚಿ ಅರೆನಗ್ನರಾಗಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಕಾಂಗ್ರೆಸ್ನ ಹಿರಿಯ ನಾಯಕಿ ಮಾರ್ಗರೇಟ್ ಆಳ್ವಾ(Margaret Alva )ಶಿಸ್ತಿನ ಪಾಠ ಹೇಳಿದ್ದು, ಸ್ವಪಕ್ಷದ ಕಾರ್ಯಕರ್ತರ ವರ್ತನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಾರ್ಗರೇಟ್ ಆಳ್ವಾ, ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಶಿಸ್ತು ಮತ್ತು ಸಭ್ಯತೆ ಅಗತ್ಯ. ಕಾರ್ಯಕರ್ತರು ಘನತೆ ಮತ್ತು ಜವಾಬ್ದಾರಿಯಿಂದ ವರ್ತಿಸಬೇಕು. ಈ ರೀತಿಯ ಪ್ರತಿಭಟನೆ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇತ್ತೀಚೆಗೆ ದೆಹಲಿಯ ಭಾರತ ಮಂಟಪಂನಲ್ಲಿ ಇಂಡಿಯಾ ಎಐ ಸಮ್ಮಿಟ್ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ದೇಶೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಗಣ್ಯರು ಭಾಗಿಯಾಗಿದ್ದರು. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ಗಳನ್ನು ಬಿಚ್ಚಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ್ದರು. ಈ ಘಟನೆ ರಾಜಕೀಯ ವಲಯದ ಜೊತೆಗೆ ಕಾಂಗ್ರೆಸ್ ಪಕ್ಷದೊಳಗೂ ಕೂಡ ಚರ್ಚೆಗೆ ಕಾರಣವಾಗಿದ್ದು ಯುವ ಕಾಂಗ್ರೆಸ್ ಕಾರ್ಯಕರ್ತರ ನಡೆಗೆ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ.






