ಚಿಕ್ಕಮಗಳೂರು,
ಏ. 1, 2026 ರಂದು ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ 7.39 ಕೋಟಿ ರೂ. ವೆಚ್ಚದ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.

ಖೇಲೋ ಇಂಡಿಯಾ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಈ ಅತ್ಯಾಧುನಿಕ ಟ್ರ್ಯಾಕ್ ನಿರ್ಮಾಣವಾಗಲಿದೆ.

ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, “ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿಗೆ ಈಗಾಗಲೇ ಹಣಕಾಸಿನ ವ್ಯವಸ್ಥೆಯನ್ನು ಪೂರ್ಣಗೊಳಿಸಿದ್ದು, ಈ ಕಾಮಗಾರಿ ಶೀಘ್ರ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯ ಕ್ರೀಡಾಪಟುಗಳಿಗೆ ಸೌಲಭ್ಯ ಒದಗಿಸಿ ಅವರನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸುವುದು ನಮ್ಮ ಉದ್ದೇಶವಾಗಿದೆ,” ಎಂದರು.

ಒಟ್ಟು 7.39 ಕೋಟಿ ರೂ. ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಕಾಮಗಾರಿ ನಡೆಯಲಿದ್ದು, ಇದಕ್ಕೆ ಖೇಲೋ ಇಂಡಿಯಾ ಯೋಜನೆಯಡಿ ಉಳಿದಿದ್ದ 3 ಕೋಟಿ ರೂ. ಜತೆಗೆ ಸಚಿವ ಕೆ.ಜೆ.ಜಾರ್ಜ್ ಅವರ ಕಂಪನಿಯ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯಿಂದ ನೀಡಿರುವ 2 ಕೋಟಿ ರೂ. ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿಶೇಷ ಅನುದಾನ 1 ಕೋಟಿ ರೂ. ಬಳಸಿಕೊಳ್ಳಲಾಗುತ್ತಿದೆ.






