ಬೆಂಗಳೂರು, ಮಾ.22 :
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿ, ಅವರನ್ನು ತುಮಕೂರಿನ ಸಿದ್ಧಗಂಗಾ ಹಾಸ್ಪಿಟಲ್ ಗೆ ದಾಖಲಿಸಲಾಗಿದೆ.ಸ್ವಕ್ಷೇತ್ರ ಕನಗಿರಿಯಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ವೇಳೆ ತುಮಕೂರು ಸಮೀಪ ಸಚಿವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಸಮೀಪದ ಸಿದ್ದಗಂಗಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.

ಸದ್ಯ ವೈದ್ಯರು ಸಚಿವರಿಗೆ ತಪಾಸಣೆ ನಡೆಸುತ್ತಿದ್ದು, ಎದೆನೋವಿನ ಕಾರಣವನ್ನು ಪರಿಶೀಲಿಸುತ್ತಿದ್ದಾರೆ. ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಅಗತ್ಯವಿರುವ ಎಲ್ಲಾ ಪರೀಕ್ಷೆಗಳು ಕೈಗೊಳ್ಳಲಾಗುತ್ತಿದೆ.

ವೈದ್ಯಕೀಯ ಮೂಲಗಳ ಪ್ರಕಾರ, ಸಚಿವರ ಆರೋಗ್ಯದಲ್ಲಿ ಯಾವುದೇ ಗಂಭೀರ ಅಪಾಯ ಇಲ್ಲ. ಸಣ್ಣ ಮಟ್ಟದ ಎದೆನೋವು ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ತಪಾಸಣೆ ಪೂರ್ಣಗೊಂಡ ಬಳಿಕ ಅವರು ಬೆಂಗಳೂರಿನತ್ತ ಪ್ರಯಾಣ ಮುಂದುವರಿಸುವ ಸಾಧ್ಯತೆ ಇದೆ.ಸಚಿವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ರಾಜಕೀಯ ವಲಯದ ನಾಯಕರು ಹಾಗೂ ಬೆಂಬಲಿಗರು ಶೀಘ್ರ ಗುಣಮುಖತೆಗೆ ಹಾರೈಸಿದ್ದಾರೆ.






