ನಗರದ ಪಾದರಾಯನಪುರ ಮುಖ್ಯ ರಸ್ತೆಯನ್ನು ಸುಮಾರು 240 ಕೋಟಿ ರೂ. ವೆಚ್ಚದಲ್ಲಿ ಶೀಘ್ರ ರಸ್ತೆ ಅಗಲೀಕರಣ ಕಾಮಗಾರಿಯನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಪಾದರಾಯನಪುರ ಮುಖ್ಯ ರಸ್ತೆ ಅಗಲೀಕರಣ ಕುರಿತು ವಿಧಾನಸೌಧದಲ್ಲಿ ಸೋಮವಾರ ಸಭೆ ನಡೆಸಿದ ಸೋಮಣ್ಣ ಸಿರ್ಸಿ ವೃತ್ತ(ಬಿನ್ನಿಮಿಲ್ ಟ್ಯಾಂಕ್ ಬಂಡ್ ರಸ್ತೆ)ದಿಂದ ವಿಜಯನಗರ ಪೈಪ್ ಲೈನ್ ವರೆಗೆ ಒಟ್ಟು 1.8 ಕಿ.ಮೀ ಉದ್ದದ ಪಾದರಾಯನಪುರ ಮುಖ್ಯ ರಸ್ತೆಯನ್ನು ಅಗಲೀಕರಣ ಮಾಡುವ ಸಲುವಾಗಿ ಪಾಲಿಕೆಯ ಅಭಿಯಂತರರು, ನಗರ ಯೋಜನೆ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಗಳ ಜೊತೆ ಸಭೆ ನಡೆಸಲಾಯಿತು.
ಪಾದರಾಯನಪುರ ರಸ್ತೆ ಅಗಲೀಕರಣದಲ್ಲಿ ಯಾವುದೇ ಧಾರ್ಮಿಕ ಸ್ಥಳಗಳಿಗೆ ಧಕ್ಕೆಯಾಗದಂತೆ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಲಾಗಿದೆ. ರಸ್ತೆ ಅಗಲೀಕರಣ ಮಾಡುವ ವಿಚಾರವಾಗಿ 2017ರಲ್ಲಿ ಟಿಡಿಆರ್ ನೀಡಲು ಸ್ಥಳೀಯರಲ್ಲಿ ಒಪ್ಪಿಸಲಾಗಿತ್ತು. ಆದರೆ ಟಿಡಿಆರ್ ಬಗ್ಗೆ ಜನರಲ್ಲಿ ಸಾಕಷ್ಟು ಗೊಂದಲಗಳಿರುವುದರಿಂದ ಸುಪ್ರೀಂ ಕೋರ್ಟ್ ನ ಸೂಚನೆಯ ಮೇರೆಗೆ ಪ್ರಸ್ತುತವಿರುವ ದರದಂತೆ ಸ್ಥಳೀಯರಿಗೆ ಪರಿಹಾರದ ಮೊತ್ತವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬಡ ವರ್ಗದ ಜನ ವಾಸಿಸುವ ಸ್ಥಳದಲ್ಲಿ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಬೇಕಾದರೆ ಹಾಗೂ ನಾಗರಿಕತೆಯನ್ನು ಹೆಚ್ಚಿನ ಮಟ್ಟಕ್ಕೆ ಕೊಂಡಯ್ಯಬೇಕಾದರೆ ರಸ್ತೆಗಳು ಹಾಗೂ ಮೂಲಭೂತ ಸೌಕರ್ಯ ಅತ್ಯಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಪಾದರಾಯನಪುರ ರಸ್ತೆ ಅಗಲೀಕರಣ ಮಾಡಿದಲ್ಲಿ ಸ್ಥಳೀಯ ಪ್ರದೇಶ ಸಾಕಷ್ಟು ಅಭಿವೃದ್ಧಿಯಾಗಲಿದೆ. ಇದರಿಂದ ಚಾಮರಾಜಪೇಟೆ, ವಿಜಯನಗರ ಹಾಗೂ ಗೋವಿಂದರಾಜನಗರದ ಸುತ್ತಮುತ್ತಲಿನ ಜನಕ್ಕೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಪಾದರಾಯನಪುರ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಿ ಕೆಲಸ ಪ್ರಾರಂಭಿಸಲಾಗುವುದು. ಆ ಬಳಿಕ ಖಾಸಗಿ ಸ್ವತ್ತುಗಳ ಮಾಲೀಕರಿಗೆ ಸೂಕ್ತ ಪರಿಹಾರವನ್ನು ಹಂತ-ಹಂತವಾಗಿ ನೀಡಲಾಗುವುದು ಎಂದಿದ್ದಾರೆ.
ಸಭೆಯಲ್ಲಿ ಸ್ಥಳೀಯ ಶಾಸಕರಾದ ಶ್ರೀ ಜಮೀರ್ ಅಹ್ಮದ್ ಖಾನ್, ವಲಯ ಜಂಟಿ ಆಯುಕ್ತರಾದ ಯೋಗೇಶ್, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ವಲಯ ಮುಖ್ಯ ಅಭಿಯಂತರರಾದ ದೊಡ್ಡಯ್ಯ, ಪಾಲಿಕೆಯ ಅಭಿಯಂತರರು, ನಗರ ಯೋಜನೆ ವಿಭಾಗದ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.






