ನವದೆಹಲಿ: ಏ.೦5: ಭಾರತ ಸರ್ಕಾರವು ದೇಶದ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೇಂದ್ರ ಸರ್ಕಾರ ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡಲು, ಬೆದರಿಸಲು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದ 14 ವಿಪಕ್ಷಗಳ ಅರ್ಜಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ವಿಪಕ್ಷಗಳ ಪರವಾಗಿ ಅಭಿಶೇಕ್ ಮನು ಸಿಂಘ್ವಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ 2014ರಲ್ಲಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗಿನಿಂದಲೂ ವಿಪಕ್ಷಗಳ ನಾಯಕರ ವಿರುದ್ಧ ದಾಖಲಾಗುವ ಜಾರಿ ನಿರ್ದೇಶನಾಲಯದ ಪ್ರಕರಣಗಳು ಹಾಗೂ ಸಿಬಿಐ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚಳ ಕಂಡಿದೆ ಎಂದು ಅರ್ಜಿಯಲ್ಲಿ ಕೇಂದ್ರದ ವಿರುದ್ಧ ಆರೋಪಿಸಿದ್ದರು.
ಕಳೆದ 10 ವರ್ಷಗಳಿಗೆ ಹೋಲಿಕೆ ಮಾಡಿದರೆ ಜಾರಿ ನಿರ್ದೇಶನಾಲಯ ೭ ವರ್ಷಗಳಲ್ಲಿ ೬ ಪಟ್ಟು ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ ಆದರೆ ಈ ಪ್ರಕರಣಗಳ ಪೈಕಿ ಶೇ.23 ರಷ್ಟು ಮಾತ್ರ ಅಪರಾಧಕ್ಕೆ ಶಿಕ್ಷೆ ಕೊಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಎದುರು ಅಂಕಿ-ಅಂಶಗಳನ್ನು ಬಿಚ್ಚಿಟ್ಟಿದ್ದರು. ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಗಳಲ್ಲಿ ದಾಖಲಾಗಿರುವ ಶೇ.95 ರಷ್ಟು ಪ್ರಕರಣಗಳು ದೇಶಾದ್ಯಂತ ಇರುವ ವಿಪಕ್ಷಗಳ ರಾಜಕಾರಣಿಗಳ ವಿರುದ್ಧವೇ ಆಗಿದೆ. ಇದು ರಾಜಕಾರಣಿಗಳ ವಿರುದ್ಧದ ದ್ವೇಷದ ರಾಜಕಾರಣವಾಗಿದೆ ಎಂದು ಆರೋಪಿಸಿದರು.