ಮುಂಗಾರು ಆರಂಭವಾಗಿ ಒಂದು ವಾರ ಕಳೆದಿದ್ದರೂ ರಾಜ್ಯದ ಬಹುತೇಕ ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದ ಮಳೆ ಸುರಿಯದಿರುವುದು ಆತಂಕಕ್ಕೆ ಕಾರಣವಾಗಿದೆ. ಕೆರೆ-ಕಟ್ಟೆಗಳು ಇನ್ನೂ ತುಂಬಿಲ್ಲ, ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ.ಈ ನಡುವೆ ಭಾರತೀಯ ಹವಾಮಾನ ಇಲಾಖೆ ಈ ವರ್ಷ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಇದರಿಂದ ರೈತಾಪಿ ವರ್ಗದಲ್ಲಿ ಬರದ ಭೀತಿ ಆವರಿಸಿದೆ. ಜೂನ್ 4ರಂದು ಕೇರಳ ಪ್ರವೇಶಿಸಿದ ಮುಂಗಾರು ಕೆಲವು ಪ್ರದೇಶಗಳಲ್ಲಿ ಮಾತ್ರ ಮಳೆಯಾಗಿದ್ದು, ರಾಜ್ಯದಾದ್ಯಂತ ವ್ಯಾಪಕ ಮಳೆಯಾಗಿಲ್ಲ.

ಸಾಮಾನ್ಯವಾಗಿ ಮುಂಗಾರು ಆರಂಭವಾದರೆ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಆ ಪ್ರದೇಶಗಳಲ್ಲಿಯೂ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಿದ್ದರೂ ಕೃಷಿಗೆ ಪೂರಕವಾಗುವಷ್ಟು ಮಳೆಯಾಗಿಲ್ಲ.ಹವಾಮಾನ ತಜ್ಞರ ಪ್ರಕಾರ, ಎಲ್ ನಿನೋ ಪರಿಣಾಮವು ಮಳೆಯ ಕೊರತೆಗೆ ಪ್ರಮುಖ ಕಾರಣವಾಗಬಹುದು. ಪೆಸಿಫಿಕ್ ಮಹಾಸಾಗರದ ಉಷ್ಣಾಂಶದಲ್ಲಾಗುವ ಬದಲಾವಣೆಗಳಿಂದ ಜಾಗತಿಕ ಹವಾಮಾನ ವ್ಯವಸ್ಥೆಯ ಮೇಲೆ ಪರಿಣಾಮ ಬೀಳುತ್ತದೆ. ಇದರ ಪರಿಣಾಮವಾಗಿ ಭಾರತದ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. 2002, 2009, 2015 ಮತ್ತು 2023ರಲ್ಲಿ ಇದೇ ರೀತಿಯ ಪರಿಸ್ಥಿತಿಯಿಂದ ಬರಗಾಲದ ಆತಂಕ ಎದುರಾಗಿತ್ತು.
ಮಳೆಯ ಕೊರತೆಯಿಂದ ಕೃಷಿ ಮಾತ್ರವಲ್ಲದೆ ಮೀನುಗಾರಿಕೆ ಕ್ಷೇತ್ರವೂ ಸಂಕಷ್ಟ ಎದುರಿಸುವ ಸಾಧ್ಯತೆ ಇದೆ. ಸಮುದ್ರದಲ್ಲಿ ಅಗತ್ಯ ಮಟ್ಟದ ಚಟುವಟಿಕೆಗಳು ನಡೆಯದಿದ್ದರೆ ಮೀನುಗಳ ಸಂತಾನೋತ್ಪತ್ತಿಯ ಮೇಲೂ ಪರಿಣಾಮ ಬೀಳಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ, ಈಗಾಗಲೇ ಭತ್ತ ಬಿತ್ತನೆ ಮಾಡಿರುವ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕಳೆದ ವರ್ಷ ಇದೇ ಅವಧಿಯಲ್ಲಿ ಉತ್ತಮ ಮಳೆಯಾಗಿದ್ದರೆ, ಈ ಬಾರಿ ಮಣ್ಣಿಗೆ ಬೇಕಾದಷ್ಟು ತೇವಾಂಶವೂ ಸಿಗುತ್ತಿಲ್ಲ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಕೇವಲ 35.7 ಮಿಲಿಮೀಟರ್ ಮಳೆಯಷ್ಟೇ ದಾಖಲಾಗಿದ್ದು, ಇದು ಕಳೆದ ವರ್ಷದ ಪ್ರಮಾಣಕ್ಕೆ ಹೋಲಿಸಿದರೆ ಬಹಳ ಕಡಿಮೆಯಾಗಿದೆ.
ಆರಂಭಿಕ ಮಳೆಯನ್ನು ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ಮಳೆಯ ನಿರೀಕ್ಷೆಯಲ್ಲಿದ್ದು, ಬಿತ್ತಿದ ಬೀಜಗಳು ಒಣಗಿ ಹೋಗುವ ಭೀತಿ ಎದುರಿಸುತ್ತಿದ್ದಾರೆ.






