ಬೆಂಗಳೂರು: ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಬದಲಾಗುತ್ತಿದ್ದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲೂ ಕೆಲವು ಮಹತ್ವದ ಬದಲಾವಣೆಗಳು ಆಗುತ್ತಿದೆ. ಈ ಪೈಕಿ ಮೊದಲು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಬಗ್ಗೆ ಸರ್ಕಾರ ಗಮನ ಹರಿಸಿದ್ದು, ಬರೋಬ್ಬರಿ 12 ಸಾವಿರಕ್ಕೂ ಹೆಚ್ಚು ಮಂದಿಯ ಹೆಸರನ್ನು ಈ ಯೋಜನೆಯಿಂದ ಕೈ ಬಿಡಲಾಗುತ್ತಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.

ಮೃತ ಫಲಾನುಭವಿಗಳು ಸೇರಿದಂತೆ ಗೃಹಲಕ್ಷ್ಮಿ ಯೋಜನೆಗೆ ಅರ್ಹರಲ್ಲದವರನ್ನು ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆ ನಡೆಯುತ್ತಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯೊಂದರಲ್ಲೇ ಬರೊಬ್ಬರಿ 12,719 ಮಹಿಳೆಯರನ್ನು ಯೋಜನೆಯಿಂದ ಹೊರಹಾಕಲಾಗಿದೆ. ಸಿಎಂ ಡಿ.ಕೆ ಶಿವಕುಮಾರ್ ಸ್ವಕ್ಷೇತ್ರವಾದ ಕನಕಪುರದಲ್ಲೇ ಅತಿ ಹೆಚ್ಚು ಮೃತ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದ್ದು, 3,058 ಮೃತ ಫಲಾನುಭವಿಗಳ ಹೆಸರಲ್ಲಿ ಹಣ ಜಮೆಯಾಗುತ್ತಿದ್ದ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.

ಇನ್ನು 4,800 ಮಂದಿ ಆದಾಯ ತೆರಿಗೆ ಮತ್ತು ಜಿಎಸ್ಟಿ ಪಾವತಿದಾರರು ಹಾಗೂ ಆಧಾರ್ ಸೀಡಿಂಗ್ ಮಾಡದ 1,295 ಮಹಿಳೆಯರ ಹೆಸರಿಗೆ ಕೂಡ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ₹2,000 ಹಣ ಜಮೆಯಾಗುತ್ತಿರುವುದು ಪರಿಶೀಲನೆ ವೇಳೆ ಕಂಡು ಬಂದಿದ್ದು, ಕೂಡಲೇ ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಗ್ಯಾರಂಟಿ ಯೋಜನೆಯ ಅಧಿಕಾರಿಗಳು ಮುಂದಾಗಿದ್ದಾರೆ.







