ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಸುಮಾರು 60 ಲಕ್ಷ ರೂಪಾಯಿ ಮೌಲ್ಯದ ಮೆಕ್ಕೆಜೋಳ ಬೆಳೆ ಸಂಪೂರ್ಣವಾಗಿ ಸುಟ್ಟು ನಾಶವಾಗಿದೆ.

ಗ್ರಾಮದ ರೈತರಾದ ಗಣೇಶ ಚವ್ಹಾಣ ಹಾಗೂ ಗೋಪಿ ಚವ್ಹಾಣ ಸಹೋದರರು ಸುಮಾರು 100 ಎಕರೆ ಭೂಮಿಯಲ್ಲಿ ಮೆಕ್ಕೆಜೋಳ ಬೆಳೆ ಬೆಳೆದಿದ್ದು, ಕೊಯ್ಲಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಡೀಸೆಲ್ ಹಾಗೂ ಪೆಟ್ರೋಲ್ ಸುರಿದು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ ಎಂದು ಶಂಕೆ ವ್ಯಕ್ತವಾಗಿದ್ದು, ನಾಲ್ಕು ಜನರು ಈ ಕೃತ್ಯದಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡು ಮೆಕ್ಕೆಜೋಳ ಕಣ್ಣುಮುಂದೆ ಸುಟ್ಟು ಹೋಗುತ್ತಿರುವ ದೃಶ್ಯವನ್ನು ಕಂಡ ರೈತ ಕುಟುಂಬ ಆಘಾತಕ್ಕೊಳಗಾಗಿ, ಮಕ್ಕಳ ಸಮೇತ ಬೆಂಕಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮತ್ತಷ್ಟು ಹೃದಯವಿದ್ರಾವಕವಾಗಿದೆ. ಆದರೆ ಸ್ಥಳದಲ್ಲಿದ್ದ ಗ್ರಾಮಸ್ಥರು ಸಮಯಕ್ಕೆ ಸರಿಯಾಗಿ ಧಾವಿಸಿ, ರೈತ ಕುಟುಂಬವನ್ನು ರಕ್ಷಣೆ ಮಾಡಿದ್ದಾರೆ. ಸಂಪೂರ್ಣ ಬೆಳೆ ಸುಟ್ಟು ಕರಕಲಾಗಿದ್ದು, ಬೆಂಕಿಯ ಭೀಕರತೆಯಿಂದ ಕೆಲ ಗಂಟೆಗಳ ಕಾಲ ಇಡೀ ಪ್ರದೇಶದಲ್ಲಿ ಹೊಗೆ ಆವರಿಸಿಕೊಂಡಿತ್ತು.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಸಂಬಂಧ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.






