ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಮತ್ತೂಂದು ಸಂಕಷ್ಟ ಎದುರಾಗಿದೆ. ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ.
ಬುಧವಾರ ನಗರದ ಖಾಸಗಿ ಹೊಟೇಲ್ನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂತ್ರಸ್ತೆ, “ಸರಕಾರ ನನಗೆ ಸೂಕ್ತ ಭದ್ರತೆ ಒದಗಿಸಿದರೆ ಮಾಜಿ ಮುಖ್ಯ ಮಂತ್ರಿಗಳಿಗೆ ಹನಿಟ್ರ್ಯಾಪ್ ಮಾಡಿರುವ ಸಾಕ್ಷ್ಯಾಧಾರಗಳನ್ನು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನೀಡುತ್ತೇನೆ. ಈ ಪ್ರಕರಣದಲ್ಲಿ ಐದಾರು ಮಂದಿ ಮಹಿಳೆಯರನ್ನು ಬಳಸಿಕೊಳ್ಳಲಾಗಿದೆ’ ಎಂದು ಆರೋಪಿಸಿದ್ದಾರೆ.
ತನಗೆ ಮುನಿರತ್ನ 2020ರಲ್ಲಿ ಪರಿಚಯವಾಗಿದ್ದು, ಅನಂತರ ನನ್ನ ಮೊಬೈಲ್ ನಂಬರ್ ಪಡೆದುಕೊಂಡು, ವೀಡಿಯೋ ಕರೆಗಳನ್ನು ಮಾಡುತ್ತಿದ್ದರು. ಅದಕ್ಕೆ ನಿರಾಕರಿಸಿದಾಗ ಕರೆ ಸ್ವೀಕರಿಸುವಂತೆ ಆಗ್ರಹಿಸುತ್ತಿದ್ದರು. ಮುನಿರತ್ನ ನನ್ನ ಕುಟುಂಬದವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿ ನನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದರು. ಅದನ್ನು ವೀಡಿಯೋ ಮಾಡಿಕೊಂಡಿದ್ದರು. ಬಳಿಕ ಆ ವೀಡಿಯೋಗಳನ್ನು ತೋರಿಸಿ, ಬೇರೆ-ಬೇರೆ ಕೃತ್ಯಗಳನ್ನು ಮಾಡುವಂತೆ ನನ್ನನ್ನು ಒತ್ತಾಯಿಸಿದ್ದರು. ಅಲ್ಲದೆ, ಈ ವೀಡಿಯೋ ಇಟ್ಟುಕೊಂಡು, ನನ್ನ ಮೂಲಕ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಬೆಂಗಳೂರಿ ನಲ್ಲೇ ಹನಿಟ್ರ್ಯಾಪ್ ಮಾಡಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.